ಬೆಂಗಳೂರು:- ಮುಡಾ ಹಗರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ತನಿಖೆ ಚುರುಕುಗೊಳಿಸಿದ ಇಡಿ, ಮಹತ್ತರ ಸಾಕ್ಷ್ಯ ಸಂಗ್ರಹಿಸಿದೆ. ಇದು ಸಿಎಂಗೆ ಉರುಳಾಗಿ ಸಂಭವಿಸೋ ಸಾಧ್ಯತೆ ಇದೆ.
ಮುಡಾ ಅಕ್ರಮದ ತನಿಖೆ ನಡೆಸುತ್ತಿರುವ ಇಡಿ ಲೋಕಾಯುಕ್ತ ಎಡಿಜಿಪಿಗೆ ತನಿಖೆಯ ಪ್ರಗತಿಯ ಬಗ್ಗೆ ಪತ್ರ ಬರೆದು ಬ್ರಹ್ಮಾಂಡ ಭ್ರಷ್ಟಾಚಾರವನ್ನು ಎಳೆಎಳೆಯಾಗಿ ಬಿಡಿಸಿದೆ. ಸಿಎಂ ಪತ್ನಿಗೆ ಕೊಟ್ಟಿರುವ 14 ಸೈಟ್ಗಳು ಸಹ ಅಕ್ರಮ ಎಂದು ಇಡಿ ಉಲ್ಲೇಖಿಸಿದೆ.
ಮುಡಾದ 14 ನಿವೇಶನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಬಿಎಂ ಪಾರ್ವತಿ ಅವರಿಗೆ ಹಸ್ತಾಂತರಿಸಿರುವ ಹಿಂದೆ ಹಲವಾರು ಅವ್ಯವಹಾರಗಳು ನಡೆದಿರುವುದಕ್ಕೆ ಹಲವು ಪುರಾವೆಗಳನ್ನು ಜಾರಿ ನಿರ್ದೇಶನಾಲಯ ಪತ್ತೆ ಮಾಡಿದೆ ಎಂದು ಮೂಲಗಳಿಂದ ಮಾಹಿತಿ ದೊರೆತಿದೆ.
ಮುಡಾದಿಂದ ಬೇನಾಮಿ ಹಾಗೂ ಇನ್ನಿತರೆ ವ್ಯವಹಾರಗಳ ಮೂಲಕ ಒಟ್ಟು 1095 ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಲಾಗಿದ್ದು, ಇವುಗಳ ಮೌಲ್ಯ ಬರೊಬ್ಬರಿ 700 ಕೋಟಿ ರೂ. ಆಗಿದೆ. ಪಾರ್ವತಿ ಅವರಿಗೆ ಮಾಡಲಾದ ಭೂಪರಿವರ್ತನೆಯಲ್ಲಿ ಶಾಸನಬದ್ಧ ಮಾರ್ಗಸೂಚಿಗಳ ಉಲ್ಲಂಘನೆಯಾಗಿದೆ. ಕಚೇರಿ ಕಾರ್ಯ ವಿಧಾನಗಳ ಉಲ್ಲಂಘನೆ, ಅನವಶ್ಯಕ ಒಲವು ತೋರಿರುವುದು, ಪ್ರಭಾವದ ಬಳಕೆ, ಪೋರ್ಜರಿ ಮಾಡಿರುವುದಕ್ಕೆ ಸಾಕ್ಷ್ಯಗಳು ಇಡಿ ತನಿಖೆಯಲ್ಲಿ ಪತ್ತೆಯಾಗಿವೆ ಎಂದು ಮೂಲಗಳು ತಿಳಿಸಿವೆ.
ಸಿಎಂ ಸಿದ್ದರಾಮಯ್ಯ ಆಪ್ತ ಸಹಾಯಕರಲ್ಲಿ ಒಬ್ಬರಾದ ಎಸ್ಜಿ ದಿನೇಶ್ ಕುಮಾರ್ ಅಲಿಯಾಸ್ ಕುಮಾರ್ ಅನಾವಶ್ಯಕ ಪ್ರಭಾವವನ್ನು ಬೀರಿದ್ದಾರೆ. ಭೂಮಿ ಕಳೆದುಕೊಳ್ಳುವವರ ಸೋಗಿನಲ್ಲಿ ಬೇನಾಮಿ ಅಥವಾ ನಕಲಿ ವ್ಯಕ್ತಿಗಳ ಹೆಸರಿನಲ್ಲಿ ನಿವೇಶನ ಹಂಚಲಾಗಿದೆ. ಈ ಅಕ್ರಮ ಹಂಚಿಕೆಯ ಫಲಾನುಭವಿಗಳು ರಿಯಲ್ ಎಸ್ಟೇಟ್ ಉದ್ಯಮಿಗಳು ಮತ್ತು ಪ್ರಭಾವಿ ವ್ಯಕ್ತಿಗಳಾಗಿದ್ದಾರೆ ಎಂದು ಇಡಿ ತನಿಖೆಯಲ್ಲಿ ತಿಳಿದುಬಂದಿದೆ.
ಪಾರ್ವತಿಯವರಿಗೆ ನಿವೇಶನ ಸಿಕ್ಕಾಗ ಅವರ ಪುತ್ರ ಯತೀಂದ್ರ ಮುಡಾ ಮಂಡಳಿಯಲ್ಲಿದ್ದರು. ಪತಿ ಸಿದ್ದರಾಮಯ್ಯ ವಿಪಕ್ಷ ನಾಯಕರಾಗಿದ್ದರು. ಮುಡಾದಿಂದ ಕೆಲವೊಂದು ನಿರ್ಮಾಣ ಕಾಮಗಾರಿ ನಡೆಸುತ್ತಿದ್ದ ಜಾಗವನ್ನೇ ಸಿದ್ದರಾಮಯ್ಯ ಭಾಮೈದ ಮಲ್ಲಿಕಾರ್ಜುನ ಖರೀದಿಸಿದ್ದಾರೆ ಎಂದು ಇಡಿ ತನಿಖೆಯಲ್ಲಿ ಪತ್ತೆಹಚ್ಚಿದೆ.