ವಿಜಯಸಾಕ್ಷಿ ಸುದ್ದಿ, ಅಜ್ಜಂಪುರ: ಬುಕ್ಕಾಂಬುಧಿ ಗ್ರಾಮದ ಪಂಪಾ ವಿರೂಪಾಕ್ಷೇಶ್ವರ ದೇವಸ್ಥಾನದಿಂದ ಬೆಟ್ಟದವರೆಗೆ ಜನವರಿ 6ರಂದು ಸಂಜೆ 5 ಗಂಟೆಗೆ ಯುಗಪುರುಷ, ಪರಮ ತಪಸ್ವಿ ಲಿಂ.ಶ್ರೀ ಉಜ್ಜಯಿನಿ ಸಿದ್ಧಲಿಂಗ ಜಗದ್ಗುರುಗಳವರ ಬೆಳ್ಳಿ ಮಂಗಲ ಮೂರ್ತಿ ಹಾಗೂ ಭಾವಚಿತ್ರದ ಮೆರವಣಿಗೆಯನ್ನು ಸಂಯೋಜಿಸಲಾಗಿದೆ ಎಂದು ಶ್ರೀಮದ್ ಉಜ್ಜಯಿನಿ ಜಗದ್ಗುರು ಸಿದ್ಧಲಿಂಗ ಶಿವಾಚಾರ್ಯ ಟ್ರಸ್ಟಿನ ಅಧ್ಯಕ್ಷರಾದ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ತಿಳಿಸಿದ್ದಾರೆ.
ಪ್ರತಿ ವರ್ಷದಂತೆ ಈ ವರ್ಷ ಜನವರಿ 7ರಂದು ಪರಮ ತಪಸ್ವಿ ಲಿಂ. ಶ್ರೀ ಉಜ್ಜಯಿನಿ ಸಿದ್ಧಲಿಂಗ ಜಗದ್ಗುರುಗಳ ಲಿಂಗಾಂಗ ಸಾಮರಸ್ಯದ 90ನೇ ವರ್ಷದ ಪುಣ್ಯ ಸ್ಮರಣೋತ್ಸವ ಹಾಗೂ ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳವರ 70ನೇ ಜನ್ಮ ವರ್ಧಂತಿ ಮಹೋತ್ಸವದ ಅಂಗವಾಗಿ ಹಲವಾರು ವೈವಿಧ್ಯಮಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ವ್ಯಸನಮುಕ್ತ ಸಮಾಜ ನಿರ್ಮಾಣಕ್ಕಾಗಿ ಜನರಲ್ಲಿ ಜಾಗೃತಿ ಮತ್ತು ಧರ್ಮ ಪ್ರಜ್ಞೆ ಮೂಡಿಸಬೇಕೆಂಬ ಸತ್ಯ ಸಂಕಲ್ಪದಿಂದ ಶ್ರೀ ರಂಭಾಪುರಿ, ಶ್ರೀ ಉಜ್ಜಯಿನಿ ಮತ್ತು ಶ್ರೀ ಕಾಶೀ ಜಗದ್ಗುರುಗಳವರು ಮೆರವಣಿಗೆಯೊಂದಿಗೆ ಪಾದಯಾತ್ರೆ ಕೈಗೊಳ್ಳಲಿದ್ದಾರೆಂದು ಶ್ರೀ ರಂಭಾಪುರಿ ಜಗದ್ಗುರುಗಳು ಮಾಹಿತಿ ನೀಡಿದ್ದಾರೆ. ಜಗದ್ಗುರುಗಳೊಂದಿಗೆ ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ ಅಧ್ಯಕ್ಷರಾದ ಡಾ. ಪ್ರಭು ಸಾರಂಗದೇವ ಶಿವಾಚಾರ್ಯರು, ಎಡೆಯೂರು ಕ್ಷೇತ್ರದ ರೇಣುಕ ಶಿವಾಚಾರ್ಯರು, ಹುಲಿಕೆರೆ ದೊಡ್ಡಮಠದ ವಿರೂಪಾಕ್ಷಲಿಂಗ ಶಿವಾಚಾರ್ಯರು, ಮುಕ್ತಿಮಂದಿರ ಕ್ಷೇತ್ರದ ವಿಮಲ ರೇಣುಕ ಮುಕ್ತಿಮನಿ ಶಿವಾಚಾರ್ಯರನ್ನು ಮೊದಲ್ಗೊಂಡು ಸುಮಾರು 50ಕ್ಕೂ ಹೆಚ್ಚು ಶಿವಾಚಾರ್ಯರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆಂದು ಅವರು ತಿಳಿಸಿದ್ದಾರೆ.
ಈ ಅರ್ಥಪೂರ್ಣ ಅಪೂರ್ವ ಸಮಾರಂಭದಲ್ಲಿ ಎಲ್ಲೆಡೆಯಿಂದ ಧರ್ಮಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು. ಆಗಮಿಸಿದ ಎಲ್ಲಾ ಸದ್ಭಕ್ತರಿಗೆ ಅನ್ನ ದಾಸೋಹ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಟ್ರಸ್ಟಿನ ಉಪಾಧ್ಯಕ್ಷ ಎಸ್.ಎಂ. ವೀರಭದ್ರಪ್ಪ ಮತ್ತು ಕಾರ್ಯದರ್ಶಿ ಹೆಚ್.ಪಿ. ಸುರೇಶ ತಿಳಿಸಿದ್ದಾರೆ.
ಬಾಕ್ಸ್
5 ದಿನಗಳ ಕಾಲ ಬುಕ್ಕಾಂಬುಧಿಯಲ್ಲಿ ಜನ ಜಾಗೃತಿ ಧರ್ಮ ಸಮಾರಂಭ ನಡೆಸಿದ ಶ್ರೀ ಉಜ್ಜಯಿನಿ ಸಿದ್ಧಲಿಂಗ ಜಗದ್ಗುರುಗಳು ತಮ್ಮ ಹೇಳಿಕೆಯಲ್ಲಿ, ಪರಮ ತಪಸ್ವಿ ಲಿಂ.ಶ್ರೀ ಉಜ್ಜಯಿನಿ ಜಗದ್ಗುರು ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ 90ನೇ ವರ್ಷದ ಪುಣ್ಯ ಸ್ಮರಣೋತ್ಸವ ಹಾಗೂ ಜನವರಿ 7ರಂದು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು 70ನೇ ವರ್ಷದಲ್ಲಿ ಪಾದಾರ್ಪಣೆ ಮಾಡುತ್ತಿರುವ ಸಂದರ್ಭದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಸಂಘಟಿಸಲಾಗಿದೆ ಎಂದು ತಿಳಿಸಿದ್ದಾರೆ.



