ಮೈಸೂರು: ಸಾಮಾಜಿಕ ಜಾಲತಾಣ ಬಳಕೆದಾರರು ಹಾಗೂ ಸಾರ್ವಜನಿಕರ ತೀವ್ರ ಆಗ್ರಹದ ಬೆನ್ನಲ್ಲೇ, ಗಜಪಡೆ ಮಾಜಿ ಕ್ಯಾಪ್ಟನ್ ಅಭಿಮನ್ಯುಗೆ ಈ ಬಾರಿಯ ದಸರಾ ಮಹೋತ್ಸವದಲ್ಲಿ ನಿಶಾನೆ ಆನೆಯಾಗಿ ಭಾಗವಹಿಸಲು ಅರಣ್ಯ ಇಲಾಖೆ ಅವಕಾಶ ನೀಡಿದೆ.
ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅರಣ್ಯ ಸಚಿವ ರಾಮಲಿಂಗಾರೆಡ್ಡಿ, ಮೈಸೂರು ದಸರಾ 2026ರಲ್ಲಿ ಅಭಿಮನ್ಯುವಿನ ಅಮೂಲ್ಯ ಸೇವೆಗೆ ಸರ್ಕಾರ ವಿಶೇಷ ಗೌರವ ನೀಡುತ್ತಿದೆ ಎಂದು ತಿಳಿಸಿದ್ದಾರೆ. ಹಲವು ವರ್ಷಗಳ ಕಾಲ ಚಿನ್ನದ ಅಂಬಾರಿಯನ್ನು ಗಾಂಭೀರ್ಯದಿಂದ ಹೊತ್ತು ಕರುನಾಡಿನ ಜನರ ಮನಗೆದ್ದ ಅಭಿಮನ್ಯುವಿನ ಸುದೀರ್ಘ ಸೇವೆಯನ್ನು ಗೌರವಿಸಿ, ಈ ಬಾರಿಯ ಮೈಸೂರು ದಸರಾ-2026ರ ಜಂಬೂಸವಾರಿಯಲ್ಲಿ ಅಭಿಮನ್ಯುವಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ‘ನಿಶಾನೆ ಆನೆ’ಯಾಗಿ ಮುಂಚೂಣಿಯಲ್ಲಿ ಮುನ್ನಡೆಸುವಂತೆ ಅರಣ್ಯ ಇಲಾಖೆಗೆ ಸೂಚಿಸಿರುವುದಾಗಿ ಅವರು ತಿಳಿಸಿದ್ದಾರೆ.
ಅಲ್ಲದೆ ಪ್ರಕಟಣೆ ಹೊರಡಿಸಿರುವ ಅರಣ್ಯ ಸಚಿವರು, ಮೈಸೂರು ದಸರಾ ಕರ್ನಾಟಕದ ನಾಡಹಬ್ಬವಾಗಿದ್ದು, ನಾಡಿನ ಕಲೆ, ಸಂಸ್ಕೃತಿ, ಪರಂಪರೆ ಹಾಗೂ ವೈಭವವನ್ನು ವಿಶ್ವದಾದ್ಯಂತ ಸಾರುವ ಐತಿಹಾಸಿಕ ಉತ್ಸವವಾಗಿದೆ ಎಂದು ಹೇಳಿದ್ದಾರೆ. ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಉತ್ಸವದಲ್ಲಿ ದಸರಾ ಗಜಪಡೆಯ ಆನೆಗಳು ವರ್ಷಗಳಿಂದಲೂ ಪ್ರಮುಖ ಪಾತ್ರ ವಹಿಸುತ್ತಾ ಬಂದಿವೆ ಎಂದು ಸಚಿವರು ತಿಳಿಸಿದ್ದಾರೆ.



