ವಿಜಯಸಾಕ್ಷಿ ಸುದ್ದಿ, ಗದಗ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಎನ್.ಡಿ.ಎ ಸರ್ಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಕೇಂದ್ರ ಬಜೆಟ್ ಕೇವಲ ಆರ್ಥಿಕ ಪತ್ರವಲ್ಲ, ಅದು ದೇಶದ ಅಭಿವೃದ್ಧಿಯ ಪಯಣಕ್ಕೆ ವೇಗ ನೀಡಿದ ಬಜೆಟ್ ಆಗಿದೆ ಎಂದು ಬಿಜೆಪಿ ಯುವ ಮುಖಂಡ ವಸಂತ ಪಡಗದ ಹೇಳಿದ್ದಾರೆ.
ಜಾಗತಿಕ ಆರ್ಥಿಕ ಏರಿಳಿತಗಳ ನಡುವೆಯೂ ಭಾರತದ ಆರ್ಥಿಕತೆಯನ್ನು ಸದೃಢವಾಗಿ ಮುನ್ನಡೆಸುತ್ತಿರುವ ಕೇಂದ್ರ ಸರ್ಕಾರದ ಈ ಬಾರಿಯ ಬಜೆಟ್, ದೇಶದ ಪ್ರತಿಯೊಬ್ಬ ಪ್ರಜೆಯ ಆಶೋತ್ತರಗಳನ್ನು ಈಡೇರಿಸುವ ವಿಶ್ವಾಸ ಮೂಡಿಸಿದೆ. ಇದು ದೇಶದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ಪ್ರಧಾನಿ ಮೋದಿ ಸರ್ಕಾರದ ದೂರದರ್ಶಿತ್ವದ ದಿಕ್ಸೂಚಿಯಾಗಿದೆ.
ಯುವಶಕ್ತಿ, ಮೂಲಸೌಕರ್ಯ ಮತ್ತು ಕೃಷಿಗೆ ಆದ್ಯತೆ ನೀಡಲಾಗಿದ್ದು, ಈ ಬಜೆಟ್ನಲ್ಲಿ ನಮ್ಮ ದೇಶದ ಬೆನ್ನೆಲುಬಾದ ಅನ್ನದಾತ ರೈತರಿಗೆ, ದೇಶದ ಶಕ್ತಿಯಾದ ಯುವಜನತೆಗೆ ಮತ್ತು ಮಹಿಳೆಯರ ಸಬಲೀಕರಣಕ್ಕೆ ವಿಶೇಷ ಒತ್ತು ನೀಡಿರುವುದು ಕೃಷಿ ಕ್ಷೇತ್ರದಲ್ಲಿ ಆಧುನಿಕ ತಂತ್ರಜ್ಞಾನದ ಅಳವಡಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಅನುದಾನ, ರಾಜ್ಯದ ರೈತರಿಗೆ ಅನುಕೂಲವಾಗುವಂತೆ ತೆಂಗು, ಗೋಡಂಬಿ ಬೆಳೆಗಾರರಿಗೆ ವಿಶೇಷ ಬೆಂಬಲ ಘೋಷಣೆ ರಾಜ್ಯ ಸೇರಿದಂತೆ ರೈಲ್ವೆ, ಹೆದ್ದಾರಿ ಮತ್ತು ಡಿಜಿಟಲ್ ಮೂಲಸೌಕರ್ಯದ ಮೇಲಿನ ಹೂಡಿಕೆ, ಉತ್ಪಾದನಾ ವಲಯಕ್ಕೆ ಹೊಸ ಚೈತನ್ಯ ನೀಡುವ ವಿಶ್ವಾಸ ಮೂಡಿಸಿದೆ.
ಒಟ್ಟಾರೆಯಾಗಿ, 2026-27ರ ಬಜೆಟ್ ವಿಕಸಿತ ಭಾರತದ ನಿರ್ಮಾಣದ ಸಂಕಲ್ಪವನ್ನು ಪುನರುಚ್ಚರಿಸಿದೆ. ದೇಶದ ಆರ್ಥಿಕತೆಯನ್ನು ವಿಶ್ವದ ಅಗ್ರಮಾನ್ಯ ಸ್ಥಾನಕ್ಕೆ ಏರಿಸುವ ಬದ್ಧತೆ, ಭಾರತೀಯರ ಆಶೋತ್ತರಗಳನ್ನು ಈ ಬಜೆಟ್ ಪ್ರತಿಬಿಂಬಿಸುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.



