ಬೆಂಗಳೂರು:- ಕಾಮಗಾರಿ ವೇಳೆ ಅವಘಡ ಸಂಭವಿಸಿ 11 ನೇ ಮಹಡಿಯಿಂದ ಬಿದ್ದು ಕಾರ್ಮಿಕ ಗಂಭೀರವಾಗಿ ಗಾಯಗೊಂಡ ಘಟನೆ ಜರುಗಿದೆ.
ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿ ಕಟ್ಟಡ ಕಾಮಗಾರಿ ವೇಳೆ ಕಾರ್ಮಿಕರೊಬ್ಬರಿಗೆ ಗಂಭೀರ ಗಾಯಗಳಾಗಿವೆ. ಸದ್ಯ ಅವರಿಗೆ ತುರ್ತು ಚಿಕಿತ್ಸಾ ಘಟಕದಲ್ಲಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.
ತಮಿಳುನಾಡಿನ ಧರ್ಮಪುರಿಯ ಕಾರ್ಮಿಕ ಮುನಿರಾಜು ಗಾಯಾಳು. ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿ ಕಳೆದ 4 ವರ್ಷಗಳಿಂದ 1000 ಬೆಡ್ಗಳ ಸರ್ಜಿಕಲ್ ಆಸ್ಪತ್ರೆ ಕಟ್ಟಡ ಕಾಮಗಾರಿ ನಡೆಯುತ್ತಿದೆ. ಮುಂಜಾಗ್ರತಾ ಕ್ರಮ ವಹಿಸದೇ ಕಟ್ಟಡ ನಿರ್ಮಾಣದಲ್ಲಿ ತೊಡಗಿದ್ದರಿಂದ ಅವಘಡ ಸಂಭವಿಸಿದೆ ಎನ್ನಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿವಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಳೆದ ನಾಲ್ಕು ದಿನಗಳಿಂದ ಮುನಿರಾಜು ಕೆಲಸಕ್ಕೆ ಬರುತ್ತಿದ್ದ. ಮಂಗಳವಾರ ಕಲ್ಲಿನ ನೆಲಹಾಸು ಹಾಕುವ ಕೆಲಸ ಮಾಡುತ್ತಿದ್ದಾಗ ಆಯ ತಪ್ಪಿ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಕಾರ್ಮಿಕನಿಗೆ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.



