ಹಾಸನ: ಹಾಸನಾಂಬೆ ದರ್ಶನಕ್ಕೆ ಬಂದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿರನ್ನು ಅವಮಾನ ಮಾಡಲಾಗಿದೆ ಎಂದು ಆರೋಪಿಸಿ, ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಶಾಸಕ ಸ್ವರೂಪ್ ಪ್ರಕಾಶ್ ನೇತೃತ್ವದಲ್ಲಿ ನಡೆದ ಪ್ರತಿಭಟನೆ ವೇಳೆ ರಸ್ತೆ ತಡೆಯಲಾಗಿದೆ. ನೂರಾರು ಜೆಡಿಎಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ ಘೋಷಣೆ ಕೂಗಿದರು.
ಹಾಸನ ಜಿಲ್ಲಾಡಳಿತ ವಿರುದ್ಧ ಪ್ರತಿಭಟನಾಕಾರರು ಕಿಡಿ ಕಾರಿದ್ದು, ಅವರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ದಿಢೀರ್ ಪ್ರತಿಭಟನೆಯಿಂದ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಪ್ರತಿಭಟನೆ ವೇಳೆ ಶಾಸಕ ಸ್ವರೂಪ್ ಪ್ರಕಾಶ್ ಆಕ್ರೋಶ ವ್ಯಕ್ತಪಡಿಸಿದ್ದು, ಹಾಸನ ಜಿಲ್ಲೆಗೆ ಕುಮಾರಸ್ವಾಮಿ ಅವರ ಕೊಡುಗೆ ಸಾಕಷ್ಟಿದೆ.
ಜಿಲ್ಲಾಉಸ್ತುವಾರಿ ಸಚಿವರು ಹಾಸನಾಂಬೆ ದರ್ಶನಕ್ಕೆ ಉತ್ತಮ ವ್ಯವಸ್ಥೆ ಮಾಡಿದ್ದಾರೆ. ಆದರೆ ಕುಮಾರಸ್ವಾಮಿ ಅವರು ಬಂದಾಗ ಅವರ ನಡೆ ಸರಿಯಲ್ಲ. ಜಿಲ್ಲಾಧಿಕಾರಿಗಳು ಕೂಡ ಸರ್ವಾಧಿಕಾರಿ ರೀತಿ ವರ್ತನೆ ಮಾಡಿದ್ದಾರೆ. ಜಿಲ್ಲೆಗೆ ಇಂತಹ ಡಿಸಿ ಬಂದಿರೋದು ನಮ್ಮ ದುರಾದೃಷ್ಟ. ಕುಮಾರಸ್ವಾಮಿ ಅವರಿಗೆ ಆದ ಅವಮಾನಕ್ಕೆ ಜಿಲ್ಲಾಧಿಕಾರಿಗಳು ಬಹಿರಂಗವಾಗಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.