ಬಾಗಲಕೋಟೆ: ವಾಂಬೆ ಕಾಲೋನಿಯ ನಮ್ಮ ಕ್ಲಿನಿಕ್ನಲ್ಲಿ ವೈದ್ಯಾಧಿಕಾರಿಯಾಗಿದ್ದ ಡಾ. ಅಂಕಿತಾ ಯರಗಲ್ ಅವರು ಕರ್ತವ್ಯ ನಿರ್ವಹಿಸದೆ ವೈದ್ಯಕೀಯ ಸ್ನಾತಕೋತ್ತರ ವ್ಯಾಸಂಗ ಮಾಡುತ್ತಿದ್ದರು ಎಂಬ ಆರೋಪದ ಬೆನ್ನಲ್ಲೇ ಆರೋಗ್ಯ ಇಲಾಖೆ ಕ್ರಮ ಕೈಗೊಂಡಿದೆ. ಅವರನ್ನು ಗುತ್ತಿಗೆ ವೈದ್ಯಾಧಿಕಾರಿ ಸೇವೆಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಬಿಡುಗಡೆಗೊಳಿಸಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಜಕುಮಾರ ಯರಗಲ್ ಆದೇಶಿಸಿದ್ದಾರೆ.
ವೈದ್ಯಾಧಿಕಾರಿಯಾಗಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರೂ ಇಲಾಖೆಯ ಅಥವಾ ಮೇಲಧಿಕಾರಿಗಳ ಅನುಮತಿ ಹಾಗೂ ಗಮನಕ್ಕೆ ತರದೆ PG ವ್ಯಾಸಂಗಕ್ಕೆ ಪ್ರವೇಶ ಪಡೆದಿದ್ದರು ಎಂದು ಆರೋಪಿಸಲಾಗಿದೆ. ನಮ್ಮ ಕ್ಲಿನಿಕ್ನಲ್ಲಿ ಕರ್ತವ್ಯ ನಿರ್ವಹಿಸದೆ, ಬಿಡುವಿನ ವೇಳೆಯಲ್ಲಿ ಮಾತ್ರ ಕ್ಲಿನಿಕ್ಗೆ ಬಂದು ಹಾಜರಾತಿ ಪುಸ್ತಕದಲ್ಲಿ ಸಹಿ ಹಾಕುತ್ತಿದ್ದರು ಎಂಬ ಆರೋಪದ ಕುರಿತು ಮಾಧ್ಯಮ ವರದಿ ಪ್ರಸಾರವಾಗಿತ್ತು.
ಹಾಜರಾತಿ ಪುಸ್ತಕದಲ್ಲಿ ಸಹಿ ಹಾಕಿ ತಿಂಗಳಿಗೆ ₹75 ಸಾವಿರ ಸರ್ಕಾರಿ ವೇತನ ಪಡೆಯುತ್ತಿದ್ದರು ಹಾಗೂ ಕರ್ತವ್ಯ ಲೋಪ ಎಸಗುತ್ತಿದ್ದರು ಎಂಬ ಆರೋಪವೂ ವರದಿಯಾಗಿತ್ತು. ಕಳೆದ ಆಗಸ್ಟ್ 28ರಿಂದ ಅವರು ಅನಧಿಕೃತವಾಗಿ ಕರ್ತವ್ಯಕ್ಕೆ ಗೈರುಹಾಜರಾಗಿದ್ದರೂ ಈ ಕುರಿತು ತಾಲೂಕು ಆರೋಗ್ಯಾಧಿಕಾರಿ ಅಥವಾ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿರಲಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಡಾ. ಅಂಕಿತಾ ಯರಗಲ್ ಅವರು ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಜಕುಮಾರ ಯರಗಲ್ ಅವರ ಪುತ್ರಿ ಹಾಗೂ ಶಾಸಕ ಉಮೇಶ್ ಮೇಟಿ ಅವರ ಸೊಸೆಯಾಗಿದ್ದಾರೆ. ಮಾಧ್ಯಮಗಳಲ್ಲಿ ಗೈರುಹಾಜರಿ ಮತ್ತು ನಿಯಮ ಉಲ್ಲಂಘನೆಯ ಆರೋಪಗಳ ಕುರಿತು ವರದಿಗಳು ಪ್ರಸಾರವಾದ ಹಿನ್ನೆಲೆಯಲ್ಲಿ ಇದೀಗ ಇಲಾಖೆ ಗುತ್ತಿಗೆ ಸೇವೆಯಿಂದ ಅವರನ್ನು ಬಿಡುಗಡೆಗೊಳಿಸಿದೆ.
ಈ ಅವಧಿಯಲ್ಲಿ ಸರ್ಕಾರಕ್ಕೆ ಆರ್ಥಿಕ ನಷ್ಟ ಉಂಟಾಗಿರುವುದು ಕಂಡುಬಂದರೆ, ನಿಯಮಾನುಸಾರ ಅವರಿಂದಲೇ ಮೊತ್ತವನ್ನು ವಸೂಲಿ ಮಾಡಿಕೊಳ್ಳಲಾಗುವುದು ಎಂದು ಆದೇಶದಲ್ಲಿ ಹೇಳಲಾಗಿದೆ. ತಮ್ಮ ವಿರುದ್ಧದ ಆದೇಶಕ್ಕೆ ಸಂಬಂಧಿಸಿದಂತೆ ಆಕ್ಷೇಪಣೆ ಅಥವಾ ಅಹವಾಲು ಸಲ್ಲಿಸಲು ಅವರಿಗೆ ಸಕ್ಷಮ ಪ್ರಾಧಿಕಾರದ ಮುಂದೆ ಲಿಖಿತ ಅವಕಾಶ ನೀಡಲಾಗಿದೆ.



