ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ: ತಾಲೂಕಿನ 13 ಗ್ರಾಮ ಪಂಚಾಯಿತಿಗಳಲ್ಲಿ ಜನವರಿ 7ರಿಂದ 17ರವರೆಗೆ ವಿಶೇಷ ಕರವಸೂಲಿ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಗ್ರಾಮ ಪಂಚಾಯಿತಿಯ ಎಲ್ಲಾ ಸಿಬ್ಬಂದಿಗಳು ಈ ಅಭಿಯಾನದಲ್ಲಿ ಭಾಗವಹಿಸಿ ಹೆಚ್ಚಿನ ಪ್ರಮಾಣದಲ್ಲಿ ಕರವಸೂಲಿ ಮಾಡಿ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಕಂದಕೂರ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ತಾಲೂಕಿನ ಎಲ್ಲಾ ಗ್ರಾ.ಪಂಗಳಲ್ಲಿ ಕರವಸೂಲಾತಿ ವಿಶೇಷ ಅಭಿಯಾನವನ್ನು ಹಮ್ಮಿಕೊಂಡು ಹೆಚ್ಚಿನ ಪ್ರಮಾಣದ ತೆರಿಗೆ ವಸೂಲಿ ಮಾಡುವಂತೆ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಉಪಕಾರ್ಯದರ್ಶಿಗಳು ಸೂಚಿಸಿದ ಪ್ರಯುಕ್ತ ಜನವರಿ 7ರಿಂದ 17ರವರೆಗೆ ಬೆಳಿಗ್ಗೆ 6 ಗಂಟೆಯಿಂದ ಸಂಜೆಯವರೆಗೂ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ದ್ವಿ.ದ.ಲೆ. ಸಹಾಯಕರು, ಕರವಸೂಲಿಗಾರರು, ಗಣಕಯಂತ್ರ ನಿರ್ವಾಹಕರು, ವಾಟರ್ ಮ್ಯಾನ್ಗಳು, ಸಿಪಾಯಿಗಳು ಸೇರಿ ಇತರೆ ಗ್ರಾ.ಪಂ ಸಿಬ್ಬಂದಿಗಳು ತಂಡವಾಗಿ ಕಾರ್ಯ ನಿರ್ವಹಿಸಿ, ಹೆಚ್ಚಿನ ಪ್ರಮಾಣದಲ್ಲಿ ತೆರಿಗೆ ಸಂಗ್ರಹ ಮಾಡುವ ಮೂಲಕ ಸದರಿ ಕರವಸೂಲಾತಿ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಸೂಚಿಸಿದ್ದಾರೆ.
ಕರವಸೂಲಿ ಅಭಿಯಾನದಲ್ಲಿ ಆಯಾ ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು, ಸಹಾಯ ಪಡೆದು ಸಾರ್ವಜನಿಕರ ಸಹಕಾರದೊಂದಿಗೆ ಎಲ್ಲಾ ಸಿಬ್ಬಂದಿಗಳನ್ನು ಒಗ್ಗೂಡಿಸಿಕೊಂಡು ಕರವಸೂಲಾತಿ ವಿಶೇಷ ಅಭಿಯಾನವನ್ನು ಹಮ್ಮಿಕೊಂಡು ಗರಿಷ್ಠ ಪ್ರಮಾಣದಲ್ಲಿ ತೆರಿಗೆ ವಸೂಲಿ ಮಾಡಿ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ತಿಳಿಸಿದ್ದಾರೆ.
ಕಳೆದ 3 ವರ್ಷಗಳಿಂದ ತೆರಿಗೆ ಪಾವತಿಸದೇ ಬಾಕಿ ಉಳಿಸಿಕೊಂಡಿರುವ ಎಲ್ಲಾ ಆಸ್ತಿಗಳ ಮಾಲೀಕರಿಗೆ ನೋಟೀಸ್ ನೀಡುವುದು ಮತ್ತು ಸದರಿ ದಿನದಂದು ಬಾಕಿಯಿರುವ ಎಲ್ಲ ತೆರಿಗೆಗಳನ್ನು ವಸೂಲಿ ಮಾಡುವುದು. ಸದರಿ ಮಾಹಿತಿಯು ಪಂಚತಂತ್ರ 2.0 ತಂತ್ರಾಂಶದಲ್ಲಿ ಲಭ್ಯವಿದ್ದು, ಪಟ್ಟಿಯನ್ನು ಪಡೆದುಕೊಂಡು ಸಂಬಂಧಿಸಿದವರಿಗೆ ನೊಟೀಸ್ ಜಾರಿ ಮಾಡಿ ಜನವರಿ 17ರೊಳಗೆ ಕರವಸೂಲಿ ಮಾಡಿಸಬೇಕು ಎಂದು ತಿಳಿಸಿದರು.
ತಮ್ಮ ಗ್ರಾ.ಪಂ ವ್ಯಾಪ್ತಿಯಲ್ಲಿ ಅತೀ ಹೆಚ್ಚು ತೆರಿಗೆ ಬಾಕಿ ಉಳಿಸಿಕೊಂಡಿರುವ ಕನಿಷ್ಟ 200 ಆಸ್ತಿ ಮಾಲೀಕರನ್ನು ಗುರುತಿಸಿ ಅವರಿಗೆ ತಗಾದೆ ನೋಟಿಸ್ ನೀಡಿ, ಅಭಿಯಾನದ ದಿನದಂದು ಸಂಪೂರ್ಣ ತೆರಿಗೆ ವಸೂಲಿ ಮಾಡಬೇಕು. ತೆರಿಗೆ ಪಾವತಿಸದೇ ಬಾಕಿ ಉಳಿಸಿಕೊಂಡಿರುವ ಮೊಬೈಲ್ ಟವರ್ ಕಂಪನಿಗಳಿಗೆ ನೋಟಿಸ್ ಜಾರಿ ಮಾಡಿ ಸಂಪೂರ್ಣ ಮೊತ್ತ ಪಾವತಿಸಿಕೊಳ್ಳುವುದು. ತೆರಿಗೆ ಪಾವತಿ ಬಾಕಿ ಹೊಂದಿರುವ ಅಂಗಡಿ ಮಾಲೀಕರು, ಉದ್ದಿಮೆದಾರರು, ಸರ್ಕಾರಿ ನೌಕರರಿಗೆ ನೋಟೀಸ್ ನೀಡಿ ಶೇ. 100ರಷ್ಟು ಬಾಕಿ ವಸೂಲಿ ಮಾಡಬೇಕು ಎಂದು ಸೂಚಿಸಿದ್ದಾರೆ.
ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ಸ್ವಚ್ಛ ವಾಹಿನಿ ಮತ್ತು ಡಂಗೂರ ಸಾರುವ ಮೂಲಕ ಅಭಿಯಾನದ ಬಗ್ಗೆ ಸಾರ್ವಜನಿಕವಾಗಿ ವ್ಯಾಪಕ ಪ್ರಚಾರ ನೀಡುವುದು. ಸದರಿ ಅಭಿಯಾನದಲ್ಲಿ ಎಲ್ಲಾ ಚುನಾಯಿತ ಪ್ರತಿನಿಧಿಗಳನ್ನು ಒಗ್ಗೂಡಿಸಿಕೊಂಡು ಆಯಾ ವಾರ್ಡ್ವಾರು ಸಾರ್ವಜನಿಕರ ಮನವೊಲಿಸಿ ತೆರಿಗೆ ವಸೂಲಿ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು. ಎರಡನೇ ಶನಿವಾರ ಮತ್ತು ಬಾನುವಾರ ರಜೆ ಮಾಡದೇ ಕರವಸೂಲಿ ಮಾಡಬೇಕು. ಜನವರಿ 15 (ಮಕರ ಸಂಕ್ರಾಂತಿ) ದಿನದಂದು ರಜೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ತಾಲೂಕಿನಲ್ಲಿ ತೆರಿಗೆ ವಸೂಲಿ ಪ್ರಮಾಣ ಕಡಿಮೆ ಇರುವ ಕಾರಣ ಜನವರಿ 7ರಿಂದ 17ರವರೆಗೂ ತಾಲೂಕಿನ 13 ಗ್ರಾ.ಪಂಗಳಲ್ಲಿ ವಿಶೇಷ ಕರವಸೂಲಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ತೆರಿಗೆ ವಸೂಲಿ ಅಭಿಯಾನದಲ್ಲಿ ಗ್ರಾಮ ಪಂಚಾಯಿತಿಯ ಎಲ್ಲ ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಾಗಿ ತೆರಿಗೆ ವಸೂಲಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು. ಅಭಿಯಾನದ ಸಂದರ್ಭದಲ್ಲಿ ಯಾವುದೇ ಸಿಬ್ಬಂದಿಗಳು ರಜೆ ಪಡೆಯುವಂತಿಲ್ಲ. ಅನಧಿಕೃತವಾಗಿ ಗೈರು ಹಾಜರಾದ ಅಧಿಕಾರಿಗಳು /ಸಿಬ್ಬಂದಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು.
ಚಂದ್ರಶೇಖರ ಕಂದಕೂರ,
ತಾ.ಪಂ ಇ.ಓ, ಗಜೇಂದ್ರಗಡ.



