16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಸ್ಯಾಂಡಲ್ವುಡ್ ನಟರಿಗೆ ಡಿಸಿಎಂ ಡಿಕೆಶಿ ವಾರ್ನಿಂಗ್ ಕೊಟ್ಟಿರೋದು ಕುರಿತು ಸಾಕಷ್ಟು ಪರ ವಿರೋಧದ ಚರ್ಚೆ ನಡೆಯುತ್ತಿದೆ. ಯಾರಿಗೆ ಹೇಗೆ ನಟ್ಟು ಬೋಲ್ಟು ಸರಿ ಮಾಡಬೇಕು ಎಂದು ಗೊತ್ತಿದೆ ಎಂದು ಡಿಕೆಶಿ ಹೇಳಿದ್ದು ಈ ಬಗ್ಗೆ ಸಾಕಷ್ಟು ಮಂದಿ ಪ್ರತಿಕ್ರಿಯೆ ನೀಡಿದ್ದಾರೆ. ಇದೀಗ ನಟ ಜಗ್ಗೇಶ್ ಪ್ರತಿಕ್ರಿಯಿಸಿದ್ದು, ಸಾವಿನ ಅಂಚಿನ ಚಿತ್ರರಂಗಕ್ಕೆ ಬೋಲ್ಟೇ ಇಲ್ಲಾ ಇನ್ನು ಟೈಟ್ ಮಾಡಿ ಏನು ಪ್ರಯೋಜನ ಎಂದಿದ್ದಾರೆ.
ಸಾಮಾಜಿಕ ಜಾಲಾತಾಣ ಎಕ್ಸ್ನಲ್ಲಿ ಪ್ರತಿಕ್ರಿಯೆ ನೀಡಿರುವ ಜಗ್ಗೇಶ್, ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಕಾರ್ಯಕ್ರಮ ಇದ್ದಿದ್ದು 7 ಗಂಟೆಗೆ ನನಗೆ ಆಹ್ವಾನ ಪತ್ರಿಕೆ ತಲುಪಿದ್ದು 6 ಗಂಟೆಗೆ. ಜೊತೆಗೆ ಒಗಟ್ಟಿಲ್ಲ ಸಂವಾದವಿಲ್ಲ ಒಟ್ಟಾರೆ ಕಲಾವಿದರ ಸಂಘವೇ ಕಣ್ಮರೆಯಾಗಿದೆ ಎಂದು ಅಸಮಾಧಾನ ಹೊರ ಹಾಕಿದರು.
ಕನ್ನಡ ಚಿತ್ರರಂಗ ಅವಸಾನ ಕರ್ನಾಟಕದಲ್ಲಿ. ಯಾವ ಕಲಾವಿದರು ಏನಾಗಿದ್ದಾರೆ ಎಂಬುದರ ಮಾಹಿತಿಯೇ ಕಲಾವಿದರಾದ ನಮಗೆ ಇಲ್ಲವಾಗಿದೆ. ಸಾವಿನ ಅಂಚಿನ ಚಿತ್ರರಂಗಕ್ಕೆ ಬೋಲ್ಟೆ ಇಲ್ಲಾ ಇನ್ನು ಟೈಟ್ ಮಾಡಿ ಏನು ಪ್ರಯೋಜನ ಎಂದು ಪ್ರಶ್ನಿಸಿದ್ದಾರೆ.
ಒಂದು ಕಮಿಟಿ ಮಾಡಿ ಅದರಲ್ಲಿ ಹಿರಿಯ ನಟರು, ನಿರ್ಮಾಪಕರು, ನಿರ್ದೇಶಕರು, ಪತ್ರಕರ್ತರು, ಇರುವಂತೆ ರಚಿಸಿ. ಈಗಿನ ಚಿತ್ರರಂಗದ ವಾಸ್ತವ ಅರಿತು ಕನ್ನಡ ಚಿತ್ರರಂಗ ಉಳಿಯುವಂತೆ ಬೆಳೆಯುವಂತೆ ಒಗ್ಗಟ್ಟಿನಿಂದ ಒಟ್ಟುಗೂಡುವಂತೆ ಚಿಂತನೆಯ ಚಾವಡಿ ರಚನೆಯಾಗಲಿ. ನಿಮಗೆ ದಿನ ಸಿಗುವ ಕೆಲವರು ಮಾತ್ರ ಚಿತ್ರರಂಗವಲ್ಲಾ ಅನೇಕರಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ಗೆ ಹೇಳಿದ್ದಾರೆ.
ಕಲಾವಿದರು ಒಟ್ಟುಗೂಡಲೆಂದೆ ಡಾ.ರಾಜಕುಮಾರ ಅವರು ಕಲಾವಿದರ ಸಂಘ ಮಾಡಿದ್ದರು. ದೌರ್ಭಾಗ್ಯ ಅದು ಇಂದು ನಿಷ್ಕ್ರಿಯಗೊಂಡಿದೆ. ಕೂಡಲೇ ನಿಮ್ಮ ಅಧಿಕಾರಿಗಳಿಗೆ ಸೂಚಿಸಿ ಎಲೆಕ್ಷನ್ ಮಾಡಿಸಿ ಕಲಾವಿದರು ಒಂದೆಡೆ ಕೂರುವಂತೆ ಮಾಡಿ. ಒಗ್ಗಟ್ಟು ಇರುವ ಮನೆ ಹಾಳಾದ ನಿದರ್ಶನವಿಲ್ಲ. ಚಿತ್ರರಂಗದ ಸಮಸ್ಯೆ ಅನೇಕ. ನಿಮ್ಮ ಗಮನಕ್ಕಾಗಿ ತಂದಿರುವೆ ಎಂದೂ ಜಗ್ಗೇಶ್ ಬರೆದುಕೊಂಡಿದ್ದಾರೆ.