ವಿಜಯಸಾಕ್ಷಿ ಸುದ್ದಿ, ಗದಗ: ಆದ್ಯ ವಚನಕಾರ, ನೇಕಾರ ಸಂತ ದೇವರ ದಾಸಿಮಯ್ಯನವರು ತಮ್ಮ ವಚನಗಳ ಮೂಲಕ ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದಿ ಲೋಕಕಲ್ಯಾಣಕ್ಕಾಗಿ ಶ್ರಮಿಸಿದವರು. ಮನುಷ್ಯನ ಅಗತ್ಯತೆಗಳನ್ನು ಪೂರೈಸುವವರು ರೈತರು ಮತ್ತು ನೇಕಾರರಾಗಿದ್ದಾರೆ. ದೇವರ ದಾಸೀಮಯ್ಯನವರು ತಮ್ಮ ನೇಕಾರಿಕೆ ವೃತ್ತಿಯೊಂದಿಗೆ ವಚನಗಳನ್ನು ಸಮಾಜಕ್ಕೆ ಕೊಡುಗೆಯಾಗಿ ಕೊಟ್ಟಿದ್ದಾರೆ. ದೇವರ ದಾಸೀಮಯ್ಯನವರ ವಚನಗಳ ಸಂದೇಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅಭಿಪ್ರಾಯಪಟ್ಟರು.
ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಹಯೋಗದಲ್ಲಿ ಗದಗ-ಬೆಟಗೇರಿಯ ಟರ್ನಲ್ ಪೇಟೆ ಶ್ರೀ ದೇವರ ದಾಸಿಮಯ್ಯ ವೇದಿಕೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಆದ್ಯ ವಚನಕಾರ, ನೇಕಾರ ಸಂತ ಶ್ರೀ ದೇವರ ದಾಸಿಮಯ್ಯ ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಗದಗ-ಬೆಟಗೇರಿ ಗುರುಸೇವಕರಾದ ರಾಘವೇಂದ್ರ ಕೊಪ್ಪಳ ಮಾತನಾಡಿ, ದೇವರ ದಾಸಿಮಯ್ಯ ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಮುದನೂರು ಎಂಬ ಗ್ರಾಮದಲ್ಲಿ ಜನಿಸಿದರು. ಮುದನೂರು ಹಲವಾರು ದೇವಾಲಯಗಳಿಂದ ಕೂಡಿದ್ದು, ಅಲ್ಲಿನ ರಾಮನಾಥ ದೇವಸ್ಥಾನ ದೇವಲ ಮಹರ್ಷಿಯ ಅಚ್ಚುಮೆಚ್ಚಿನ ಸ್ಥಳವಾಗಿತ್ತು. ದೇವರ ದಾಸೀಮಯ್ಯನವರು ರಾಮನಾಥ ಸ್ವಾಮಿಯ ಆರಾಧಕರಾಗಿದ್ದು, ಇವರ ಅಂಕಿತನಾಮ ರಾಮನಾಥ ಎಂದು ಆಗಿತ್ತು ಎಂದು ತಿಳಿಸಿ ದೇವರ ದಾಸಿಮಯ್ಯನವರ ಜೀವನ ಮತ್ತು ಸಂದೇಶಗಳ ಕುರಿತು ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಬಿ. ಸಂಕದ, ತಹಸೀಲ್ದಾರ ಶ್ರೀನಿವಾಸ ಮೂರ್ತಿ ಕುಲಕರ್ಣಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಮುದಾಯದ ಮುಖ್ಯಸ್ಥರು, ಗಣ್ಯರು, ಹಿರಿಯರು ಹಾಜರಿದ್ದರು.
ವೆಂಕಟೇಶ ಅಲ್ಕೋಡ ನಾಡಗೀತೆ ಪ್ರಸ್ತುತಪಡಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಬಿ ಸ್ವಾಗತಿಸಿದರು.