ಮಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಬ್ಯಾರಕ್ಗಳಲ್ಲಿ ಮೊಬೈಲ್ಗಳು ಪತ್ತೆಯಾದ ಪ್ರಕರಣದ ಬೆನ್ನಲ್ಲೇ ಮಂಗಳೂರು ಜಿಲ್ಲಾ ಕಾರಾಗೃಹದಲ್ಲೂ ಜೈಲಿನೊಳಗಿನ ಅಕ್ರಮ ಮೊಬೈಲ್ ಬಳಕೆ ಬಯಲಾಗಿದೆ. ಬರ್ಕೆ ಠಾಣೆ ಪೊಲೀಸರು ನಡೆಸಿದ ದಾಳಿಯಲ್ಲಿ ಎ-ಬ್ಲಾಕ್ನಲ್ಲಿದ್ದ 9 ಕೈದಿಗಳ ಬಳಿ ಒಟ್ಟು 10 ಮೊಬೈಲ್ ಫೋನ್ಗಳು ಪತ್ತೆಯಾಗಿದ್ದು, ಅವುಗಳನ್ನು ವಶಕ್ಕೆ ಪಡೆಯಲಾಗಿದೆ.
ಜೈಲಿನೊಳಗೆ ಕೈದಿಗಳು ಮೊಬೈಲ್ ಬಳಸುತ್ತಿರುವ ಬಗ್ಗೆ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದರು ಎನ್ನಲಾಗಿದೆ. ರಿಫತ್ ಅಲಿ, ಇಬ್ರಾಹಿಂ ಖಲೀಲ್, ಅಸ್ಫಕ್ ಅಲಿಯಾಸ್ ಜುಟ್ಟು ಅಸ್ಫಕ್, ಅರ್ಷದ್, ದಾವೂದ್ ಫರ್ವೇಜ್, ನಝರತ್ ಅಲಿ, ಶಿಫಾನ್, ಅಬ್ದುಲ್ ಸಾದೀಕ್ ಮತ್ತು ಅರ್ಫಜ್ ಅವರ ಬಳಿ ಮೊಬೈಲ್ಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.
ಇವರ ಪೈಕಿ ನಾಲ್ವರು ತೊಕ್ಕೊಟ್ಟು ಸಮೀಪ ನಡೆದ ಅರೀಫ್ ಕೊಲೆ ಪ್ರಕರಣದ ಆರೋಪಿಗಳು ಎನ್ನಲಾಗಿದ್ದು, ಜೈಲಿನೊಳಗೆ ಮೊಬೈಲ್ಗಳ ಬಳಕೆ ಹಾಗೂ ಅವುಗಳ ಪೂರೈಕೆಯ ಹಿಂದೆ ಯಾರಿದ್ದಾರೆ ಎಂಬುದನ್ನು ಬರ್ಕೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ರಾಜ್ಯದ ವಿವಿಧ ಜೈಲುಗಳಲ್ಲಿ ಕೈದಿಗಳು ಹೊರಗಿನ ವ್ಯಕ್ತಿಗಳೊಂದಿಗೆ ಸಂಪರ್ಕದಲ್ಲಿರುವುದು ಹಾಗೂ ಜೈಲಿನೊಳಗೆ ಅಕ್ರಮ ಚಟುವಟಿಕೆಗಳು ನಡೆಯುತ್ತಿರುವ ಆರೋಪಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಭದ್ರತೆ ಬಗ್ಗೆ ಹೆಚ್ಚಿನ ಗಮನ ಹರಿಸಿದ್ದಾರೆ. ಇದೇ ಹಿನ್ನೆಲೆಯಲ್ಲಿ ಆಗಸ್ಟ್ 11ರಂದು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಮೇಲೂ ಸಿಸಿಬಿ ದಾಳಿ ನಡೆಸಿತ್ತು.
ಪರಪ್ಪನ ಅಗ್ರಹಾರ ದಾಳಿ ವೇಳೆ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾಗಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಇದ್ದ ಬ್ಯಾರಕ್ನಲ್ಲಿದ್ದ ಮೊಬೈಲ್ ಸೇರಿದಂತೆ 10ಕ್ಕೂ ಹೆಚ್ಚು ಮೊಬೈಲ್ಗಳು ಪತ್ತೆಯಾಗಿದ್ದವು. ಇದೀಗ ಮಂಗಳೂರು ಜಿಲ್ಲಾ ಕಾರಾಗೃಹದಲ್ಲೂ ಒಂದೇ ಬ್ಲಾಕ್ನಲ್ಲಿ 9 ಕೈದಿಗಳ ಬಳಿ 10 ಮೊಬೈಲ್ಗಳು ಸಿಕ್ಕಿರುವುದು ಜೈಲುಗಳಲ್ಲಿನ ಮೊಬೈಲ್ ಬಳಕೆ ಮತ್ತು ಭದ್ರತಾ ವ್ಯವಸ್ಥೆಯ ಕುರಿತು ಚರ್ಚೆಗೆ ಕಾರಣವಾಗಿದೆ.



