ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲೆಯನ್ನು ಏಡ್ಸ್ ಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲರೂ ಪಣ ತೊಡಬೇಕು ಎಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಹೇಳಿದರು.
ನಗರದ ಡಿಜಿಎಂ ಆರ್ಯುವೇದ ಕಾಲೇಜನಲ್ಲಿ ಶನಿವಾರ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ, ಜಿಲ್ಲಾ ವಾರ್ತಾ ಮತ್ತು ಪ್ರಸಾರ ಇಲಾಖೆ, ಜಿಮ್ಸ್ ರಕ್ತ ನಿಧಿ ಕೇಂದ್ರ-ಜಿಲ್ಲಾ ಆಸ್ಪತ್ರೆ, ಬಸವೇಶ್ವರ ಪ್ಯಾರಾ ಮೆಡಿಕಲ್ ಕಾಲೇಜು, ಗಾಂಧೀಜಿ ಪ್ಯಾರಾ ಮೆಡಿಕಲ್ ಕಾಲೇಜು, ಪಾಲನಗಾಲಾ ನರ್ಸಿಂಗ್ ಕಾಲೇಜು, ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆ, ಆಯ್.ಎಂ.ಎ ರಕ್ತ ಭಂಡಾರ, ರಕ್ಷಣೆ ಜಿಲ್ಲಾ ಮಹಿಳಾ ಒಕ್ಕೂಟ, ಸೃಷ್ಟಿ ಸಂಕುಲ ಸಂಸ್ಥೆ, ನವಚೆತನ ಸಂಸ್ಥೆ, ಚೈತನ್ಯ ನಗರ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ, ಶ್ರೀ ಡಿಜಿಎಂ ಆರ್ಯುವೇದ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ರೆಡ್ ರಿಬ್ಬನ್ ಕ್ಲಬ್ ಇವರುಗಳ ಸಂಯುಕ್ತ ಆಶ್ರಯದಲ್ಲಿ ಜರುಗಿದ ವಿಶ್ವ ಏಡ್ಸ್ ಜಾಗೃತಿ ದಿನದ ಜನಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಮಾಜದಲ್ಲಿ ಏಡ್ಸ್ ಸೋಂಕಿಗೆ ತುತ್ತಾದವರನ್ನು ಗುರುತಿಸಿ ಜಾಗೃತಿ ಮೂಡಿಸಿ, ಅನುಮಾನ-ಅವಮಾನ ಮಾಡದೇ ಅವರನ್ನು ಗೌರವದಿಂದ ಕಾಣಬೇಕು. ಈ ರೋಗ 10-15 ವರ್ಷದ ಹಿಂದೆ ಜಗತ್ತನ್ನು ತಲ್ಲಣಗೊಳಿಸಿತ್ತು. ಭಾರತದ ಬಿಸಿಲು ಇರುವ ಪ್ರದೇಶದ ಜನಾಂಗದಲ್ಲಿ ಈ ಸೋಂಕು ಜಾಸ್ತಿ ಕಾಣಿಸಿಕೊಂಡಿದ್ದು, ರೈಲು ಅಥವಾ ಸಾರ್ವಜನಿಕವಾಗಿ ಪ್ರಯಾಣ ಮಾಡುವಾಗ ಎಲ್ಲರಿಗೂ ಭಯ ಹುಟ್ಟಿಸಿ, ಏಡ್ಸ್ ರೋಗವು ಎಲ್ಲರನ್ನು ನಿರ್ನಾಮ ಮಾಡುತ್ತದೆ ಎನ್ನುವ ಊಹೆಗೆ ತಲುಪಿತ್ತು.
ಈಗಿನ ಅತ್ಯಾಧುನಿಕ ಚಿಕಿತ್ಸೆ, ಉಪಚಾರ, ಭಾರತೀಯ ವೈದ್ಯ ಪದ್ಧತಿಗಳು ನಿಯಂತ್ರಣ ಮತ್ತು ನಿರ್ಮೂಲನೆಗೆ ದೊಡ್ಡ ಕೊಡುಗೆ ನೀಡಿದೆ. ಏಡ್ಸ್ ರೋಗಕ್ಕೆ ಔಷಧಿ ಕಂಡುಹಿಡಿಯಲು ಶ್ರಮಿಸಿದ ಎಲ್ಲರಿಗೂ ಅತ್ಯಂತ ಋಣಿಯಾಗಿರಬೇಕು ಎಂದು ಅಭಿನಂದನೆ ಸಲ್ಲಿಸಿದರು.
ಏಡ್ಸ್ ಕುರಿತು ಜಾಗೃತಿ ಮೂಡಿಸಲು ಮೆಡಿಕಲ್ ಶಾಲಾ ಕಾಲೇಜು, ಸೇವಾ ತಂಡಗಳ ಪಾತ್ರ ದೊಡ್ಡದಿದೆ. ಯೋಜನೆ ತಯಾರಿಸಿ ಬೃಹತ್ ಕಾರ್ಯಕ್ರಮವನ್ನು ಆಯೋಜಿಸಿ ಸಾರ್ವಜನಿಕರನ್ನು ಜಾಗೃತರನ್ನಾಗಿಸಬೇಕು. ಅದಕ್ಕೆ ಬೇಕಾದ ಎಲ್ಲಾ ಸಹಕಾರ ಸರ್ಕಾರದಿಂದ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದರು.
ಡಿಎಚ್ಓ ಎಸ್ಎಸ್ ನೀಲಗುಂದ ಮಾತನಾಡಿ, ಜಿಲ್ಲೆಯಲ್ಲಿ ಏಡ್ಸ್ ಸೋಂಕಿಗೆ ತುತ್ತಾದವರ ಚಿಕಿತ್ಸೆಗೆ 8 ಐಸಿಟಿಸಿ ಕೇಂದ್ರಗಳಲ್ಲಿ ಎಲ್ಲಾ ರೀತಿಯ ಮೂಲ ಸೌಕರ್ಯಗಳು ಲಭ್ಯವಿದೆ. ಏಡ್ಸ್ ಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲರೂ ಪ್ರಾಮಾಣಿಕ ಕೆಲಸ ಮಾಡುತ್ತಿದ್ದೇವೆ. 100 ದಿನಗಳ ಟಿಬಿ ಕುರಿತು ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದರು.
ಇದೇ ಸಂದರ್ಭದಲ್ಲಿ ಗದಗ ಜಿಲ್ಲೆಯಲ್ಲಿ ಹೆಚ್ಐವಿ ನಿಯಂತ್ರಣದಲ್ಲಿ ಉತ್ತಮ ಸೇವೆ ಸಲ್ಲಿಸಿದ ವಿವಿಧ ತಾಲೂಕಿನ ಆರೋಗ್ಯ ಇಲಾಖೆ ಸಿಬ್ಬಂದಿಗಳನ್ನು ಸನ್ಮಾನಿಸಲಾಯಿತು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ಸಾಬ ಬಬರ್ಚಿ, ಅಶೋಕ ಮಂದಾಲಿ, ಬಿ.ಎಸ್.ಪಾಟೀಲ, ಕಾಲೇಜಿನ ಪ್ರಾಚಾರ್ಯ ಸಂತೋಷ ಬೆಳವಡಿ, ಜಿಲ್ಲಾ ಶಸ್ತç ಚಿಕಿತ್ಸಕರಾದ ಡಾ. ಬಿ.ಸಿ. ಕರಿಗೌಡರ, ಡಾ. ಸಾಮುದ್ರಿ ಸತೀಶ ಘಾಟಗೆ, ಡಾ. ಪ್ರೀತ ಖೋನಾ, ಡಾ. ಮಹ್ಮದ್ ಅಶ್ರಫ್ ಉಲ್, ಡಾ. ಮಹೇಶ ಕೊಪ್ಪಳ, ಡಾ. ಬೂದೇಶ ಸೇರಿದಂತೆ ವಿದ್ಯಾರ್ಥಿಗಳು ಹಾಜರಿದ್ದರು. ಬಸವರಾಜ ಲಾಲಗಟ್ಟಿ ಸ್ವಾಗತಿಸಿದರು. ಭೂಮಿಕಾ ತೈಯಬಾ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮಕ್ಕೂ ಮುನ್ನ ವಿಶ್ವ ಏಡ್ಸ್ ಜಾಗೃತಿ ದಿನದ ಜನಜಾಗೃತಿ ಜಾಥಾಕ್ಕೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡ್ರ ಚಾಲನೆ ನೀಡಿದರು. ಜಾಥಾವು ನಗರದ ಪ್ರಮುಖ ವೃತ್ತಗಳಲ್ಲಿ ಸಂಚರಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿತು. ಈ ಸಂದರ್ಭದಲ್ಲಿ ಜೈ ಭೀಮ ಕಲಾತಂಡದವರು ಹೆಚ್ಐವಿ ಬಗ್ಗೆ ಅರಿವು ಮೂಡಿಸುವ ಹಾಡುಗಳನ್ನು ಹಾಡುತ್ತ ಜಾಥಾದಲ್ಲಿ ಪಾಲ್ಗೊಂಡಿದ್ದರು.
ಏಡ್ಸ್ ನಿರ್ಮೂಲನೆಗೆ ಜಿಲ್ಲೆ ತನ್ನದೇ ಆದ ಕೊಡುಗೆ ನೀಡಿದೆ. ಕಳೆದ ೧೦ ವರ್ಷಗಳಲ್ಲಿ ಭವಿಷ್ಯದ ನಾಗರಿಕನಾದ ಯಾವೊಂದು ನವ ಶಿಶುವಿಗೂ ಏಡ್ಸ್ ಸೋಂಕು ಪಾಲಕರಿಂದ ತಗುಲದ ರೀತಿಯಲ್ಲಿ ನೋಡಿಕೊಂಡಿದ್ದಾರೆ. ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ ಸೇರಿದಂತೆ ಏಡ್ಸ್ ಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲರೂ ಶ್ರಮಿಸಬೇಕು ಎಂದು ಸಚಿವ ಎಚ್.ಕೆ. ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಅರುಂಧತಿ ಕುಲಕರ್ಣಿ ಮಾತನಾಡಿ, ಇಲಾಖೆಯ ಹಲವಾರು ಜಾಥಾ ಹಾಗೂ ಜಾಗೃತಿ ಕಾರ್ಯಕ್ರಮಗಳಿಂದ ಎಚ್ಐವಿ ಸೋಂಕಿನ ಪ್ರಮಾಣ ಕಳೆದ ಹತ್ತು ವರ್ಷಗಳಲ್ಲಿ ಗಣನೀಯವಾಗಿ ಇಳಿಕೆ ಕಂಡಿದೆ. ಎಚ್ಐವಿ ಸೋಂಕಿತರು ಭಯಪಡದೆ ಆಪ್ತಸಮಾಲೋಚಕರಿಂದ ನೈತಿಕ ಹಾಗೂ ಮಾನಸಿಕ ಬೆಂಬಲ ಪಡೆದು ಸಾಮಾನ್ಯ ಜೀವನ ನಡೆಸಬೇಕು ಎಂದು ಹೇಳಿದರು.



