ಬೆಂಗಳೂರು: ಕಳೆದ ಕೆಲವು ದಿನಗಳಿಂದ ತೀವ್ರ ಕಳಪೆ ಮಟ್ಟಕ್ಕೆ ಕುಸಿದಿದ್ದ ಬೆಂಗಳೂರಿನ ವಾಯು ಗುಣಮಟ್ಟದಲ್ಲಿ ಸದ್ಯಕ್ಕೆ ಸ್ವಲ್ಪ ಮಟ್ಟಿನ ಸುಧಾರಣೆ ಕಂಡುಬಂದಿದೆ. ನಿನ್ನೆಯೂ ತಕ್ಕಮಟ್ಟಿಗೆ ಉತ್ತಮಗೊಂಡಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು ಮತ್ತಷ್ಟು ಎಚ್ಚೆತ್ತುಕೊಂಡಿದ್ದು, ನಗರದ Air Quality Index (AQI) 127ಕ್ಕೆ ತಲುಪಿದೆ.
ಆದರೆ ಇದೇ ಸಮಯದಲ್ಲಿ ರಾಜ್ಯದ ಕರಾವಳಿ ನಗರಗಳಾದ ಮಂಗಳೂರು ಮತ್ತು ಉಡುಪಿಯಲ್ಲಿ ವಾಯು ಗುಣಮಟ್ಟ ಆತಂಕಕಾರಿ ರೀತಿಯಲ್ಲಿ ಹದಗೆಡುತ್ತಿದೆ. ಕೆಲ ದಿನಗಳ ಹಿಂದೆ 100ರ ಆಸುಪಾಸಿನಲ್ಲಿ ಇದ್ದ ಮಂಗಳೂರಿನ AQI ಇಂದು 173ಕ್ಕೆ ತಲುಪಿದ್ದು, ಉಡುಪಿಯ AQI 172 ದಾಖಲಾಗಿದೆ. ದಿನದಿಂದ ದಿನಕ್ಕೆ ಈ ನಗರಗಳಲ್ಲಿ ಗಾಳಿಯ ಗುಣಮಟ್ಟ ಕುಸಿಯುತ್ತಿರುವುದು ತಜ್ಞರಲ್ಲಿ ಚಿಂತೆ ಮೂಡಿಸಿದೆ.
WHO ಮಾನದಂಡಗಳ ಪ್ರಕಾರ, ಬೆಂಗಳೂರಿನ AQI 127 ಮಟ್ಟವೂ ಆರೋಗ್ಯಕ್ಕೆ ಹಾನಿಕರವೇ ಆಗಿದೆ. ಇನ್ನು ಮಂಗಳೂರು, ಉಡುಪಿ ಸೇರಿದಂತೆ ಹಲವೆಡೆ AQI 150ರ ಗಡಿ ದಾಟಿರುವುದು ‘ಅನಾರೋಗ್ಯಕರ’ ವಲಯಕ್ಕೆ ಸೇರಿದೆ. ಈ ಸ್ಥಿತಿ ಮುಂದುವರೆದರೆ ದೆಹಲಿಯಂತಹ ತೀವ್ರ ವಾಯು ಮಾಲಿನ್ಯ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಇದೆ ಎಂದು ಪರಿಸರ ತಜ್ಞರು ಎಚ್ಚರಿಸಿದ್ದಾರೆ.
ಕಲುಷಿತ ಗಾಳಿಯಿಂದ ಶ್ವಾಸಕೋಶದ ಕ್ಯಾನ್ಸರ್, ಅಸ್ತಮಾ, ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಾಗುತ್ತದೆ ಎಂದು ವೈದ್ಯರು ಎಚ್ಚರಿಕೆ ನೀಡಿದ್ದಾರೆ. ವಿಶೇಷವಾಗಿ ಮಕ್ಕಳು, ವೃದ್ಧರು ಹಾಗೂ ಉಸಿರಾಟ ಸಮಸ್ಯೆ ಇರುವವರು ಮುನ್ನೆಚ್ಚರಿಕೆ ವಹಿಸಬೇಕೆಂದು ಸಲಹೆ ನೀಡಿದ್ದಾರೆ.



