ಬೆಂಗಳೂರು:- ಪಂಜಾಬ್ ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಕುರುಬೂರು ಶಾಂತಕುಮಾರ್ ಅವರನ್ನು ಇಂದು ಏರ್ ಆಂಬುಲೆನ್ಸ್ ಮೂಲಕ ಬೆಂಗಳೂರಿಗೆ ಕರೆ ತರಲಾಗಿದೆ.
ಅಲ್ಲದೇ ಇದೀಗ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೂರು ದಿನಗಳ ಹಿಂದೆ ಸಂಭವಿಸಿದ ಅಪಘಾತದಲ್ಲಿ ಶಾಂತಕುಮಾರ್ ಅವರು ಗಾಯಗೊಂಡು ಚಂಡಿಗಡದ ಪಟಿಯಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ವಿಷಯ ತಿಳಿದ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏರ್ ಆಂಬುಲೆನ್ಸ್ ಮೂಲಕ ಶಾಂತಕುಮಾರ್ ಅವರನ್ನು ಬೆಂಗಳೂರಿಗೆ ಕರೆತರುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.
ಈ ಮಧ್ಯೆ ದೆಹಲಿ ನಿವಾಸಿ ಆಯುಕ್ತರಾದ ಇಂಕೊಂಗ್ಲ ಜಮೀರ್ ಅವರು ಪಂಜಾಬ್ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಪಟಿಯಾಲದ ಆಸ್ಪತ್ರೆ ವೈದ್ಯರ ಜೊತೆ ಸತತ ಸಂಪರ್ಕದಲ್ಲಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಅಧಿಕಾರಿಗಳು ನಿನ್ನೆ ಏರ್ ಆಂಬುಲೆನ್ಸ್ ಸಜ್ಜುಗೊಳಿಸಿದ್ದರು. ಇಬ್ಬರು ಸಹಾಯಕರು ಹಾಗೂ ವೈದ್ಯರ ತಂಡದೊಂದಿಗೆ ಇಂದು ಶಾಂತಕುಮಾರ್ ಅವರನ್ನು ಬೆಂಗಳೂರಿಗೆ ಕರೆತರಲಾಗಿದೆ.