ಬೆಂಗಳೂರು: ನಗರದಲ್ಲಿ ಗುಂಡಿ ಮುಚ್ಚುವ ಕಾಮಗಾರಿಗಳ ಹೆಸರಿನಲ್ಲಿ ಸರ್ಕಾರ ಹಣ ವ್ಯರ್ಥ ಮಾಡಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗುಂಡಿ ಮುಚ್ಚಲು ಕೋಟ್ಯಂತರ ರೂಪಾಯಿ ವೆಚ್ಚ ಮಾಡಲಾಗಿದೆ ಎಂಬುದು ಅಸಂಬದ್ಧವಾಗಿದೆ. ಒಂದು ಗುಂಡಿ ಮುಚ್ಚಲು ಲಕ್ಷಾಂತರ ರೂಪಾಯಿ ಖರ್ಚಾಗುತ್ತದೆಯೇ ಎಂದು ಪ್ರಶ್ನಿಸಿದರು. ಈ ಕಾಮಗಾರಿಗಳ ಬಗ್ಗೆ ಬೆಂಗಳೂರು ಜನರಲ್ಲಿ ಅಸಮಾಧಾನ ಹೆಚ್ಚಾಗಿದೆ ಎಂದು ಹೇಳಿದರು.
ಸರ್ಕಾರ ಎಲ್ಲಾ ವಸ್ತುಗಳ ಬೆಲೆ ಹೆಚ್ಚಿಸಿದ್ದು, ಗುಂಡಿ ಮುಚ್ಚುವ ಕಾಮಗಾರಿಗಳಲ್ಲಿಯೂ ಅಕ್ರಮ ನಡೆದಿದೆ ಎಂದು ಆರೋಪಿಸಿದ ಅವರು, “ಈ ಕೆಲಸಗಳಲ್ಲಿ ಹೇಗೆ ಹಣ ಮಾಡಬೇಕು ಎಂದು ಕಾಂಗ್ರೆಸ್ವರನ್ನೇ ಕೇಳಬೇಕು” ಎಂದು ಟೀಕಿಸಿದರು.
ಇಷ್ಟು ದೊಡ್ಡ ಮೊತ್ತದ ವೆಚ್ಚ ಬೋಗಸ್ ಆಗಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಯಬೇಕು ಎಂದು ಒತ್ತಾಯಿಸಿದರು. ಸದನ ಸಮಿತಿ ರಚಿಸಿ ತನಿಖೆ ನಡೆಸಬೇಕು. ಮುಚ್ಚಿದ ಗುಂಡಿಗಳು ಮತ್ತೆ ತೆರೆಯುತ್ತಿರುವುದರಿಂದ ಈ ಕಾಮಗಾರಿಗಳ ಗುಣಮಟ್ಟದ ಮೇಲೂ ಅನುಮಾನ ವ್ಯಕ್ತವಾಗುತ್ತಿದೆ ಎಂದು ಹೇಳಿದರು.
ಈ ಸಂಬಂಧ ನಾವು ಸಂಪೂರ್ಣ ಲೆಕ್ಕ ನೀಡಲು ಸಿದ್ಧವಿದ್ದೇವೆ. ಸರ್ಕಾರದ ವಿರುದ್ಧ ಇರುವ ಅಕ್ರಮಗಳನ್ನು ಬಹಿರಂಗಪಡಿಸಲು ಸದನ ಸಮಿತಿ ರಚನೆ ಅಗತ್ಯ ಎಂದು ಆರ್. ಅಶೋಕ್ ಆಗ್ರಹಿಸಿದರು.



