ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಅವಕಾಶ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯಲ್ಲಿ ಜುಲೈ 12ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು, ಪಕ್ಷಗಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜೀ ಸಂಧಾನ ಮಾಡಿಕೊಳ್ಳುವ ಮೂಲಕ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ನಾಗವೇಣಿ ತಿಳಿಸಿದರು.

Advertisement

ನಗರದ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಬುಧವಾರ ರಾಷ್ಟ್ರೀಯ ಲೋಕ ಅದಾಲತ್ ಕುರಿತು ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ರಾಜೀ ಸಂಧಾನದಲ್ಲಿ ಪಾಲ್ಗೊಂಡು ತಮಗಾಗುವ ಆರ್ಥಿಕ ಹೊರೆ ಹಾಗೂ ಸಮಯ ಪೋಲಾಗುವುದನ್ನು ತಪ್ಪಿಸಲು ಮತ್ತು ರಾಜೀ ಸಂಧಾನದಲ್ಲಿ ಪ್ರಕರಣ ಇತ್ಯರ್ಥವಾದರೆ ನ್ಯಾಯಾಲಯಕ್ಕೆ ತುಂಬಿದ ಶುಲ್ಕವನ್ನು ಸಂಪೂರ್ಣ ಮರುಪಾವತಿ ಮಾಡಲಾಗುವುದು. ಪ್ರಕರಣ ರಾಜೀ ಆದಲ್ಲಿ ಉಭಯ ಪಕ್ಷಗಾರರಿಗೆ ಮೇಲ್ಮನವಿ ಸಲ್ಲಿಸಲು ಅವಕಾಶವಿರುವುದಿಲ್ಲ. ಇಲ್ಲಿಗೆ ಪ್ರಕರಣ ಮುಕ್ತಾಯಗೊಂಡು ತಮ್ಮ ಮೊದಲಿನ ಬಾಂದಂವ್ಯ ಉಳಿಸಿಕೊಳ್ಳಲು ಸಹಾಯಕವಾಗುತ್ತದೆ ಎಂದರು.

ಗದಗ ಜಿಲ್ಲೆಯಲ್ಲಿ ರಾಜೀ ಸಂಧಾನಕ್ಕಾಗಿ ಪ್ರತಿಯೊಂದು ನ್ಯಾಯಾಲಯಕ್ಕೆ ಒಂದು ಬೆಂಚ್‌ ನಂತೆ ಒಟ್ಟು 15 ಬೆಂಚ್‌ಗಳನ್ನು ರಚಿಸಿದ್ದು, ಗದಗ ಜಿಲ್ಲೆಯಲ್ಲಿ ಒಟ್ಟು 20411 ವಿವಿಧ ಚಾಲ್ತಿ ಪ್ರಕರಣಗಳಿವೆ. ಅದರಲ್ಲಿ ಈಗಾಗಲೇ ರಾಜೀ ಆಗಬಹುದಾದ 2280 ಪ್ರಕರಣಗಳನ್ನು ಗುರುತಿಸಿದ್ದು, ಇದರಲ್ಲಿ ಸಿವಿಲ್ ದಾವೆಗಳು ಅಂದರೆ ಜಮೀನುಗಳಿಗೆ ಸಂಬAಧಪಟ್ಟ ವ್ಯಾಜ್ಯಗಳು ಮನೆ ಹಾಗೂ ನಿವೇಶನಗಳಿಗೆ ಸಂಬಂಧಪಟ್ಟ ವ್ಯಾಜ್ಯಗಳು, ಸ್ವಾಧೀನ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ದರಖಾಸ್ತು ಅರ್ಜಿಗಳು, ಕಾರ್ಮಿಕ ಪ್ರಕರಣಗಳು, ಮರಳು ಕಳ್ಳ ಸಾಗಾಣಿಕೆ ಪ್ರಕರಣಗಳು, ಚೆಕ್‌ಬೌನ್ಸ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಹಾಗೂ ರಾಜೀ ಆಗಲು ಅರ್ಹವಿರುವ ಕ್ರಿಮಿನಲ್ ಕಂಪೌಂಡೆಬಲ್ ಪ್ರಕರಣಗಳು ಸೇರಿದಂತೆ ಹಲವಾರು ಪ್ರಕರಣಗಳನ್ನು ಗುರುತಿಸಲಾಗಿದೆ ಎಂದರು.

ಪಕ್ಷಗಾರರು ನ್ಯಾಯಾಲಯಗಳಲ್ಲಿರುವ ತಮ್ಮ ವ್ಯಾಜ್ಯಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದಾಗಿದೆ. ಕಳೆದ ಮಾರ್ಚ್-2025ರಂದು ಜರುಗಿದ ಲೋಕ ಅದಾಲತ್‌ನಲ್ಲಿ 3749 ಚಾಲ್ತಿ ಪ್ರಕರಣಗಳನ್ನು ಹಾಗೂ 29199 ವ್ಯಾಜ್ಯಪೂರ್ವ ಪ್ರಕರಣಗಳನ್ನು ಸೇರಿ ಒಟ್ಟು 32948 ಪ್ರಕರಣಗಳ್ನು ರಾಜೀ ಮೂಲಕ ಇತ್ಯರ್ಥಪಡಿಸಿದೆ. ಇದರಲ್ಲಿ ವಿಶೇಷವಾಗಿ 9 ಕೌಟುಂಬಿಕ ಪ್ರಕರಣಗಳನ್ನು ಪುನಃ ಒಂದುಗೂಡಿಸಿ ಕಳುಹಿಸಲಾಗಿದೆ ಎಂದರು.

ಪ್ರತಿದಿನ ರಾಜೀಗಾಗಿ ಆಯ್ಕೆ ಮಾಡಿದ ಪ್ರಕರಣಗಳನ್ನು ಸಂಬಂದಪಟ್ಟ ವಕೀಲರು ಹಾಗೂ ಪಕ್ಷಗಾರರೊಂದಿಗೆ ಮುಂಚಿತವಾಗಿಯೇ ರಾಜೀ ಸಂಧಾನದಿಂದ ಆಗುವ ಪ್ರಯೋಜನಗಳ ಬಗ್ಗೆ ತಿಳಿಸಿ ಅವರ ಮನ ಒಲಿಸಿ ರಾಜೀ ಸಂಧಾನ ಮಾಡಿಕೊಳ್ಳಲು ತಿಳಿಯಪಡಿಸಲಾಗುವುದು. ಪ್ರಕರಣಗಳಿಗೆ ಸಂಬಂದಪಟ್ಟ ವಕೀಲರು, ಕಕ್ಷಿದಾರರು ಹಾಗೂ ವಿವಿದ ಇಲಾಖೆಗಳಿಗೆ ಸಂಬಂದಪಟ್ಟ ಅಧಿಕಾರಿಗಳು, ಇಲಾಖೆಗಳವರು ಜುಲೈ 12ರಂದು ಜರುಗುವ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಪಾಲ್ಗೊಂಡು ತಮ್ಮ ವ್ಯಾಜ್ಯಗಳನ್ನು ರಾಜೀ ಸಂಧಾನದ ಮೂಲಕ ಪರಿಹರಿಸಿಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡ್ರ ಮಾತನಾಡಿ, ನ್ಯಾಯಾಲಯಗಳಲ್ಲಿ ಉಭಯ ಪಕ್ಷಕಾರರು ರಾಜೀ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ಮಾಡಲಾಗುವುದು. ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣ ತೀರ್ಮಾನವಾಗುವುದರಿಂದ ಬಾಂಧವ್ಯವು ಉಳಿದು ವಿವಾದ ತೀರ್ಮಾನವಾಗುತ್ತದೆ. ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನು ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯದ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶವಾಗಿದೆ ಎಂದರು.


Spread the love

LEAVE A REPLY

Please enter your comment!
Please enter your name here