ಅಲ್ಲು ಅರ್ಜುನ್ ನಟನೆಯ ಪುಷ್ಪ 2 ಸಿನಿಮಾದ ಪ್ರದರ್ಶನದ ವೇಳೆ ಕಾಲ್ತುಳಿತ ಸಂಬಂವಿಸಿ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಮೃತ ಮಹಿಳೆಯ ಪತಿ ನೀಡಿದ ದೂರಿನ ಮೇರೆಗೆ ಅಲ್ಲು ಅರ್ಜುನ್ ಸೇರಿ ಹಲವರನ್ನು ಬಂಧಿಸಲಾಗಿತ್ತು. ಅಲ್ಲು ಅರ್ಜುನ್ ಗೆ ಕೆಳ ಹಂತದ ಕೋರ್ಟ್ 14 ದಿನ ನ್ಯಾಯಂಗ ಬಂಧನ ವಿಧಿಸಿದರೆ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಆದರೆ, ಕೋರ್ಟ್ ಪ್ರತಿ ಜೈಲು ಸೇರದ ಹಿನ್ನೆಲೆಯಲ್ಲಿ ಅವರ ಬಿಡುಗಡೆ ತಡವಾಗಿತ್ತು. ಈ ಹಿನ್ನೆಲೆಯಲ್ಲಿ ರಾತ್ರಿಯಿಡೀ ಜೈಲಿನಲ್ಲೇ ಕಳೆದ ಅಲ್ಲು ಅರ್ಜುನ್ ಇಂದು ಮುಂಜಾನೆಯೇ ಬಿಡುಗಡೆಯಾಗಿದ್ದಾರೆ.
ಅಲ್ಲು ಅರ್ಜುನ್ ಬಂಧನ ಟಾಲಿವುಡ್ ನಲ್ಲಿ ದೊಡ್ಡ ಮಟ್ಟದ ಸಂಚಲನ ಸೃಷ್ಟಿಸಿತ್ತು. ಘಟನೆ ಬಗ್ಗೆ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಘಟನೆಗೆ ಸಂಬಂಧಿಸಿ ಅವರ ಫ್ಯಾನ್ಸ್ ನಿರಂತರವಾಗಿ ಆಕ್ರೋಶ ಹೊರಹಾಕುತ್ತಿದ್ದಾರೆ. ‘ಈ ಘಟನೆಯಲ್ಲಿ ಅಲ್ಲು ಅರ್ಜುನ್ ಎ11 ಆರೋಪಿ. ಉಳಿದರ ವಿರುದ್ಧ ಕ್ರಮ ಕೈಗೊಳ್ಳುವುದರ ಬದಲು ಅಲ್ಲು ಅರ್ಜುನ್ ಅವರನ್ನು ಬಂಧಿಸಿದ್ದೇಕೆ’ ಎಂದು ಅನೇಕರು ಪ್ರಶ್ನೆ ಮಾಡುತ್ತಿದ್ದಾರೆ.
ಹೈದರಾಬಾದ್ ನ ಸಂಧ್ಯಾ ಥಿಯೇಟರ್ ಘಟನೆ ಹಿನ್ನೆಲೆಯಲ್ಲಿ ಪೊಲೀಸರು ಅಲ್ಲು ಅರ್ಜುನ್ ಅವರನ್ನು ಆರೋಪಿ ಸ್ಥಾನದಲ್ಲಿ ಇರಿಸಿದ್ದಾರೆ. ‘ಪುಷ್ಪ 2’ ಚಿತ್ರದ ಪ್ರೀಮೀಯರ್ ಪ್ರದರ್ಶನದ ವೇಳೆ ಅಲ್ಲು ಅರ್ಜುನ್ ಸಂಧ್ಯಾ ಥಿಯೇಟರ್ಗೆ ಹೋಗಿದ್ದರು. ಅಲ್ಲು ಅರ್ಜುನ್ ಆಗಮನದಿಂದ ಅಭಿಮಾನಿಗಳು ಒಮ್ಮೆಲೇ ಮುಗಿಬಿದ್ದ ಕಾರಣಕ್ಕೆ ಕಾಲ್ತುಳಿತ ಉಂಟಾಗಿ ರೇವತಿ ಹೆಸರಿನ ಮಹಿಳೆ ಸಾವನ್ನಪ್ಪಿದ್ದರು.
ಮೃತ ರೇವತಿ ಪತಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಿಸಿರುವ ಪೊಲೀಸರು, ಅಲ್ಲು ಅರ್ಜುನ್ ಅವರನ್ನು ಎ11 ಆರೋಪಿ ಆಗಿ ಮಾಡಿದ್ದು ನಿನ್ನೆ ಬೆಳಗ್ಗೆಯೇ ಅಲ್ಲು ಅರ್ಜುನ್ ಅವರನ್ನು ಬಂಧಿಸಿ ಕೋರ್ಟ್ ಗೆ ಹಾಜರು ಪಡಿಸಿದ್ದರು. ಸದ್ಯ ಅಲ್ಲು ಅರ್ಜುನ್ ಮನೆ ಸೇರಿದ್ದು ಅಭಿಮಾನಿಗಳು ನಿರಾಳರಾಗಿದ್ದಾರೆ.