ಮಾಧ್ಯಮ ಪ್ರತಿನಿಧಿಗಳಿಗೂ ಮಾಹಿತಿ ನೀಡಿ

0
Spread the love

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಲಕ್ಷ್ಮೇಶ್ವರ ತಾಲೂಕು ಪಂಚಾಯಿತಿಯಲ್ಲಿ ಮಂಗಳವಾರ ತಾಲೂಕು ಉಸ್ತುವಾರಿ ಕಾರ್ಯದರ್ಶಿಗಳಾದ ಬೆಳಗಾಂವ ಜಿಲ್ಲಾ ಉಪವಿಭಾಗಾಧಿಕಾರಿ ಶ್ರವಣ ನಾಯಕ ಅಧ್ಯಕ್ಷತೆಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯನ್ನು ಮಾಧ್ಯಮದವರನ್ನು ಹೊರಗಿಟ್ಟು ನಡೆಸಿದ ಬಗ್ಗೆ ಗ್ರಾ.ಪಂ ಸದಸ್ಯ, ಕಾಂಗ್ರೆಸ್ ಮುಖಂಡ ಪದ್ಮರಾಜ ಪಾಟೀಲ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Advertisement

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ತಾಲೂಕು ಪಂಚಾಯಿತಿಯಲ್ಲಿ 3 ವರ್ಷಗಳಿಂದ ಚುನಾಯಿತ ಆಡಳಿತ ಮಂಡಳಿಯೂ ಇಲ್ಲದ್ದರಿಂದ ಅಧಿಕಾರಿಗಳು ತಮ್ಮ ಮೂಗಿನ ನೇರದಲ್ಲಿ ಕಾರ್ಯ ಮಾಡುತ್ತಿದ್ದಾರೆ. ಪ್ರಸ್ತುತ ಬೇಸಿಗೆ ಕಾಲವಾದ್ದರಿಂದ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ, ಜಾನುವಾರುಗಳಿಗೆ ಮೇವಿನ ಕೊರತೆ, ಗ್ರಾಮೀಣ ಪ್ರದೇಶದಲ್ಲಿ ನರೇಗಾ ಕಾಮಗಾರಿ ಇಲ್ಲದೇ ಕೃಷಿ ಕೂಲಿಕಾರರು ಉದ್ಯೋಗ ಅರಸಿ ಹೋಗುತ್ತಿರುವುದು, ಹಾಳಾದ ರಸ್ತೆಗಳು ಇತ್ಯಾದಿ ವಿಷಯಗಳ ಬಗ್ಗೆ ತಹಸೀಲ್ದಾರ, ತಾ.ಪಂ ಇಓ ಮತ್ತು ಎಲ್ಲ ಇಲಾಖೆಗಳ ಅಧಿಕಾರಿಗಳನ್ನೊಳಗೊಂಡ ಸಭೆಯಲ್ಲಿ ಚರ್ಚಿತವಾಗುತ್ತದೆ. ಸಭೆಯಲ್ಲಿ ಚರ್ಚೆಯಾದ ವಿಷಯಗಳ ಬಗ್ಗೆ ಜನರಿಗೆ ತಿಳಿಸುವ ಕಾರ್ಯ ಮಾಡುವ ಪರ್ತಕರ್ತರನ್ನು ಹೊರಗಿಟ್ಟು ಸಭೆ ಮಾಡಿರುವ ಅಧಿಕಾರಿಗಳ ಈ ನಡೆ ಖಂಡನಾರ್ಹವಾಗಿದೆ.

ಸರ್ಕಾರದ ಎಲ್ಲ ಕಾರ್ಯಯೋಜನೆ, ಸೌಲಭ್ಯ, ಅಧಿಕಾರಿಗಳ ಕಾರ್ಯವೈಖರಿಗಳ ಬಗ್ಗೆ ಬೆಳಕು ಚೆಲ್ಲುವಲ್ಲಿ ಮಾಧ್ಯಮದ ಪಾತ್ರ ಮಹತ್ವದ್ದಾಗಿದೆ. ಅಧಿಕಾರಿಗಳು ತಾವು ಮಾಡಿದ ಉತ್ತಮ ಕಾರ್ಯ, ಸಾಧನೆಗಳ ಬಗ್ಗೆ ಪ್ರಚಾರ ಪಡೆಯಲು ಮಾತ್ರ ಪತ್ರಕರ್ತರನ್ನು ತಮಗೆ ಬೇಕಾದಂತೆ ಬಳಸಿಕೊಳ್ಳದೇ ಇಲಾಖೆಯ ಅಧಿಕಾರಿಗಳನ್ನೊಳಗೊಂಡ ಪ್ರಗತಿ ಪರಿಶೀಲನಾ ಸಭೆ, ಸಾಮಾನ್ಯ ಸಭೆ, ಜನೋಪಯೋಗಿ ಕಾರ್ಯಕ್ರಮಗಳಿಗೆ ಮಾಧ್ಯಮ ಪ್ರತಿನಿಧಿಗಳಿಗೂ ಮಾಹಿತಿ ನೀಡಬೇಕು ಎಂದು ಪದ್ಮರಾಜ ಪಾಟೀಲ ಆಗ್ರಹಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here