ಬೆಂಗಳೂರು: ಇಂದು ಬೆಳಿಗ್ಗೆಯಿಂದ ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ) ಚುನಾವಣೆಯ ಹಿನ್ನೆಲೆಯಲ್ಲಿ ಮಹತ್ವದ ಸಭೆ ಆಯೋಜಿಸಲಾಗಿತ್ತು ಎಂದು ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಯಾವತ್ತೇ ಜಿಬಿಎ ಚುನಾವಣೆ ನಡೆದರೂ ನಾವು ಗೆದ್ದೇ ಗೆಲ್ಲುತ್ತೇವೆ.
ಕಾಂಗ್ರೆಸ್ ಪಕ್ಷದ ತಂತ್ರ- ಕುತಂತ್ರದ ನಡುವೆಯೂ 5 ಜಿಬಿಎಯಲ್ಲೂ ಬಿಜೆಪಿ ಜಯಭೇರಿ ಬಾರಿಸಲು ಒಳ್ಳೆಯ ಅವಕಾಶವಿದೆ. ಹಾಗಾಗಿ ಅತಿ ಶೀಘ್ರದಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನೂ ಆರಂಭಿಸಬೇಕು. ಜೆಡಿಎಸ್ ಜೊತೆ ಚರ್ಚಿಸಿ ಅವರ ಅಭಿಪ್ರಾಯ ಪಡೆದುಕೊಂಡು ಚುನಾವಣೆಗೆ ಸಜ್ಜಾಗಲು ನಿರ್ಧರಿಸಿದ್ದಾಗಿ ವಿವರಿಸಿದರು.
ಫೆ. 28 ಮತ್ತು ಮಾರ್ಚ್ 1ರಂದು 5 ಜಿಬಿಎಗಳ ಪ್ರತ್ಯೇಕ ಸಭೆ ಕರೆಯಬೇಕು. ಆ ಸಭೆಯಲ್ಲಿ ನಮ್ಮ ಪಕ್ಷದ ಹಿರಿಯರೆಲ್ಲರೂ ಇರುತ್ತಾರೆ. ಸ್ಥಳೀಯವಾಗಿ ನಮ್ಮ ಕಾರ್ಯಕರ್ತರ ಅಭಿಪ್ರಾಯ, ಸಲಹೆ ಪಡೆಯಲಾಗುವುದು. ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಕುರಿತು ಚರ್ಚೆ ಮಾಡಿ, ಮುನ್ನಡೆಯುವ ನಿಟ್ಟಿನಲ್ಲಿ ಪ್ರಮುಖ ನಿರ್ಧಾರ ಮಾಡಿದ್ದಾಗಿ ತಿಳಿಸಿದರು.
ಬೆಂಗಳೂರು ಮಹಾನಗರ ಗಾರ್ಡನ್ ಸಿಟಿ ಇದೀಗ ಗಾರ್ಬೇಜ್ ಸಿಟಿಯಾಗಿ ಪರಿವರ್ತನೆಯಾಗಿದೆ. ಉಸ್ತುವಾರಿ ಸಚಿವರು ಅಥವಾ ಕಾಂಗ್ರೆಸ್ ಸರಕಾರವು ಅಭಿವೃದ್ಧಿ ವಿಚಾರದಲ್ಲಿ ಬೆಂಗಳೂರು ಮಹಾನಗರಕ್ಕೆ ಆದ್ಯತೆ ನೀಡಿಲ್ಲ ಎಂಬುದು ಚರ್ಚೆಗೆ ಒಳಪಟ್ಟಿದೆ. ಬೆಂಗಳೂರು ಮಹಾನಗರ ಕೇವಲ ಭಾರತದಲ್ಲಷ್ಟೇ ಅಲ್ಲ; ಜಗತ್ತಿನಲ್ಲಿ ಹೆಸರುವಾಸಿಯಾಗಿದೆ. ಆದ್ದರಿಂದ ಇದನ್ನು ಬಹಳ ಗಂಭೀರವಾಗಿ ಪರಿಗಣಿಸಬೇಕಿದೆ ಎಂದು ನುಡಿದರು.
ಟನೆಲ್ ರೋಡ್ ಬಗ್ಗೆ ಮಾತನಾಡುತ್ತಾರೆ. ಈ ಸರಕಾರಕ್ಕೆ ಒಂದು ಗುಂಡಿ ಮುಚ್ಚಲೂ ಆಗುತ್ತಿಲ್ಲ ಎಂದು ಟೀಕಿಸಿದರು. ಭ್ರಷ್ಟಾಚಾರ, ಬೆಲೆ ಏರಿಕೆ ನಡೆದಿದೆ. ಇದೆಲ್ಲದರ ಪರಿಣಾಮವಾಗಿ ಬೆಂಗಳೂರು ಮಹಾನಗರದ ಜನತೆ ಕಾಂಗ್ರೆಸ್ ಸರಕಾರದ ಬಗ್ಗೆ ಬೇಸತ್ತಿದ್ದಾರೆ. ಮತ್ತೊಂದು ಕಡೆ ಡಿಕೆ ಶಿವಕುಮಾರ್ ಅವರ ನಡವಳಿಕೆಯನ್ನು ತಾವೇ ಗಮನಿಸಿದ್ದೀರಿ. ಅಪಾರ್ಟ್ಮೆಂಟ್ ವೆಲ್ಫೇರ್ ಅಸೋಸಿಯೇಷನ್ನವರು ಭೇಟಿ ಮಾಡಿದಾಗ ಅವರು ಮಾತನಾಡಿದ ಧಾಟಿ- ಇವೆಲ್ಲವನ್ನೂ ಜನರು ಗಮನಿಸುತ್ತಿದ್ದಾರೆ ಎಂದು ಗಮನ ಸೆಳೆದರು.



