ವಿಜಯಸಾಕ್ಷಿ ಸುದ್ದಿ, ರೋಣ : ರಾಜ್ಯ ಸರಕಾರದ ಬಳಿ ಅನುದಾನದ ಕೊರತೆಯಿಲ್ಲ. ಹೀಗಾಗಿ, ರೋಣ ಮತಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಬರವಿಲ್ಲ ಎಂದು ಶಾಸಕ ಹಾಗೂ ಖನಿಜ ನಿಗಮದ ಅಧ್ಯಕ್ಷ ಜಿ.ಎಸ್. ಪಾಟೀಲ ಹೇಳಿದರು.
ಅವರು ಸರ್ಜಾಪೂರ, ಶಾಂತಗೇರಿ, ಬಸರಕೊಡ ಗ್ರಾಮಗಳಲ್ಲಿ 97 ಲಕ್ಷ ರೂ.ಗಳ ಸಿಸಿ ರಸ್ತೆ ಕಾಮಗಾರಿ ಹಾಗೂ ನೂತನ ಅಂಗನವಾಡಿ ಕಟ್ಟಡಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಬಸರಕೋಡ ಗ್ರಾಮದಲ್ಲಿ ಜರುಗಿದ ಬಹಿರಂಗ ಸಭೆಯಲ್ಲಿ ಮಾತನಾಡಿದರು.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಳೆದ ಮೂರು ತಿಂಗಳಿನಿಂದ ನೀತಿ ಸಂಹಿತೆ ಜಾರಿಯಲ್ಲಿತ್ತು. ಹೀಗಾಗಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನಿಡುವಲ್ಲಿ ವಿಳಂಬವಾಗಿತ್ತು. ನೀತಿ ಸಂಹಿತೆ ತೆರವಾದ ತಕ್ಷಣ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಗಿದ್ದು, ಇನ್ನು ಹೆಚ್ಚಿನ ಅನುದಾನ ತರುವ ಮೂಲಕ ಮತಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದರು.
ಕಳೆದ ಮೂರು ವರ್ಷಗಳಿಂದ ಸ್ಥಳೀಯ ಮಟ್ಟದ ಚುನಾವಣೆಗಳು ನಡೆದಿಲ್ಲ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ, ಅತಿ ಶೀಘ್ರದಲ್ಲಿ ಜಿ.ಪಂ, ತಾ.ಪಂ, ಎಪಿಎಂಸಿ ಚುನಾವಣೆಗಳನ್ನು ನಡೆಸಲು ಸಿದ್ಧತೆ ಮಾಡಿಕೊಳ್ಳುತ್ತಿದೆ. ಪಕ್ಷದ ಮುಖಂಡರು, ಕಾರ್ಯಕರ್ತರು, ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುವ ಜೊತೆಗೆ ಸರಕಾರದ ಸಾಧನೆಗಳನ್ನು ಜನರಿಗೆ ತಿಳಿಸಬೇಕು ಎಂದು ಕರೆ ನೀಡಿದರಲ್ಲದೆ, ಬಸರಕೋಡ ನವ ಗ್ರಾಮವನ್ನು ಸಂಪೂರ್ಣ ಅಭಿವೃದ್ಧಿಪಡಿಸಲಾಗುವುದು ಎಂದು ಭರವಸೆ ನೀಡಿದರು.
ಶರಣಗೌಡ ಪಾಟೀಲ, ಪರಶುರಾಮ ಅಳಗವಾಡಿ, ವ್ಹಿ.ಬಿ. ಸೋಮನಕಟ್ಟಿಮಠ, ಪ್ರಭು ಮೇಟಿ, ಮೋಹನ್ ಹುಲ್ಲಣ್ಣವರ, ಮಂಜುಳಾ ಹುಲ್ಲಣ್ಣವರ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.
ಜೂನ್ 21ರಂದು ರೋಣ ಪಟ್ಟಣದ ಗುರುಭವನದಲ್ಲಿ ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ಜನಸ್ಪಂದನ ಸಭೆ ನಡೆಯಲಿದೆ. ಹೀಗಾಗಿ, ಬಸರಕೋಡ ಗ್ರಾಮದ ಮುಖಂಡರು ಸಭೆಗೆ ಬನ್ನಿ. ಅಲ್ಲಿಯೇ ಸಮಸ್ಯೆಗಳನ್ನು ಇತ್ಯರ್ಥಪಡಿಸೋಣ.
– ಜಿ.ಎಸ್.ಪಾಟೀಲ.
ಶಾಸಕರು, ರೋಣ.