ತಿರುವನಂತಪುರಂ: ಕೆಳತುಟಿಯ ಸಣ್ಣ ಗಾಯಕ್ಕೆ ಹೊಲಿಗೆ ಹಾಕುವ ವೇಳೆ ಅರಿವಳಿಕೆ ನೀಡಿದ ಬಳಿಕ 18 ತಿಂಗಳ ಗಂಡು ಮಗು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ಕೇರಳದ ಕಣ್ಣೂರಿನಲ್ಲಿ ನಡೆದಿದೆ. ವೈದ್ಯಕೀಯ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಪೋಷಕರು ಆರೋಪಿಸಿದ್ದು, ಅರಿವಳಿಕೆ ತಜ್ಞರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಮೃತ ಮಗುವನ್ನು ದೇವನ್ಶ್ ಶೌರ್ಯ (18 ತಿಂಗಳು) ಎಂದು ಗುರುತಿಸಲಾಗಿದೆ. ಇರಾಮಮ್-ಕುಟ್ಟೂರ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೇರಂಗಲ್ ನಿವಾಸಿಗಳಾದ ಟಿ. ಸೂರಜ್ ಹಾಗೂ ವಿಜಿಶಾ ದಂಪತಿಯ ಏಕೈಕ ಪುತ್ರನಾಗಿದ್ದ ದೇವನ್ಶ್, ಮದುವೆಯಾದ ಎಂಟು ವರ್ಷಗಳ ಬಳಿಕ ಜನಿಸಿದ್ದ ಮಗು ಎಂದು ತಿಳಿದುಬಂದಿದೆ.
ಜುಲೈ 5ರಂದು ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ವೇಳೆ ಬಿದ್ದು ದೇವನ್ಶ್ನ ಕೆಳತುಟಿಗೆ ಗಾಯವಾಗಿತ್ತು. ಬಳಿಕ ಪೋಷಕರು ಪಯ್ಯನ್ನೂರಿನ ಬೇಬಿ ಮೆಮೋರಿಯಲ್ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಗಾಯಕ್ಕೆ ಹೊಲಿಗೆ ಹಾಕಲು ವೈದ್ಯರು ಅರಿವಳಿಕೆ ನೀಡಿದ ಕೆಲವೇ ಕ್ಷಣಗಳಲ್ಲಿ ಮಗು ಪ್ರಜ್ಞೆ ಕಳೆದುಕೊಂಡಿತ್ತು.
ಗಂಭೀರ ಸ್ಥಿತಿಯಲ್ಲಿದ್ದ ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಣ್ಣೂರಿನ ಮತ್ತೊಂದು ಆಸ್ಪತ್ರೆ ಘಟಕಕ್ಕೆ ದಾಖಲಿಸಲಾಗಿತ್ತು. ಐದು ದಿನಗಳ ಕಾಲ ವೆಂಟಿಲೇಟರ್ನಲ್ಲಿ ಚಿಕಿತ್ಸೆ ನೀಡಿದರೂ ಶುಕ್ರವಾರ ರಾತ್ರಿ ಮಗು ಮೃತಪಟ್ಟಿದೆ.
ಮಗುವಿಗೆ ಅರಿವಳಿಕೆಯ ಅತಿಯಾದ ಡೋಸ್ ನೀಡಿದ್ದರಿಂದ ಮೆದುಳು ಹಾನಿಗೊಳಗಾಗಿ ಸಾವಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ದೂರಿನ ಮೇರೆಗೆ ಪಯ್ಯನ್ನೂರು ಪೊಲೀಸರು ಅರಿವಳಿಕೆ ತಜ್ಞೆ ಡಾ. ಅಂಜಲಿ ಪೊದುವಾಳ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 125ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಆದರೆ ವೈದ್ಯಕೀಯ ನಿರ್ಲಕ್ಷ್ಯದ ಆರೋಪವನ್ನು ಆಸ್ಪತ್ರೆ ತಳ್ಳಿಹಾಕಿದೆ. ಅರಿವಳಿಕೆ ನೀಡಿದ ಬಳಿಕ ಮಗುವಿಗೆ ಅನಿರೀಕ್ಷಿತ ಹೃದಯ ಸ್ತಂಭನ ಉಂಟಾಗಿದ್ದು, ಎಲ್ಲಾ ವೈದ್ಯಕೀಯ ಪ್ರೋಟೋಕಾಲ್ಗಳನ್ನು ಪಾಲಿಸಿ ಚಿಕಿತ್ಸೆ ನೀಡಲಾಗಿದೆ ಎಂದು ಆಸ್ಪತ್ರೆ ಸ್ಪಷ್ಟಪಡಿಸಿದೆ.
ಘಟನೆಯ ಬಳಿಕ ಆಸ್ಪತ್ರೆ ಎದುರು ಡಿವೈಎಫ್ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಸಂಬಂಧಿತ ವೈದ್ಯರನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ. ಸದ್ಯ ಪೊಲೀಸರು ಶವಪರೀಕ್ಷೆ ವರದಿಗಾಗಿ ಕಾಯುತ್ತಿದ್ದು, ತನಿಖೆ ಮುಂದುವರಿಸಿದ್ದಾರೆ.



