ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ: ವಕ್ಫ್ ತಿದ್ದುಪಡಿ ಮಸೂದೆ ಜಾರಿಯಿಂದ ಮುಸ್ಲಿಂ ಸಮುದಾಯಕ್ಕೆ ಮಾರಕವಾಗಲಿದೆ ಎಂದು ಅಂಜುಮನ್ ಇಸ್ಲಾಂ ಕಮಿಟಿ ಮಾಜಿ ಕಾರ್ಯದರ್ಶಿ ದಾವಲಸಾಬ ತಾಳಿಕೋಟಿ ಹೇಳಿದರು.
ನಗರದ ಅಂಜುಮನ್ ಇಸ್ಲಾಂ ಕಮಿಟಿ ನೇತೃತ್ವದಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಹಿಂಪಡೆಯಲು ಒತ್ತಾಯಿಸಿ ಜಾಮೀಯ ಮಸೀದಿಯಿಂದ ಕಪ್ಪು ಪಟ್ಟಿ ಧರಿಸಿ, ಕಾಲ್ನಡಿಗೆ ಮೂಲಕ ಕೆ.ಕೆ. ಸರ್ಕಲ್ವರೆಗೆ ಮೆರವಣಿಗೆ ನಡೆಸಿ ತಹಸೀಲ್ದಾರರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು.
ದೇಶದಲ್ಲಿ ಎಲ್ಲ ಸಮುದಾಯದವರಿಗೂ ಅವರದ್ದೇ ಆದ ಹಬ್ಬ, ಆಚರಣೆ, ಪೂಜೆ, ನಮಾಜ್ ಮಾಡುವ ಧಾರ್ಮಿಕ ಹಕ್ಕನ್ನು ಸಂವಿಧಾನ ನೀಡಿದೆ. ಆದರೆ ಕೇಂದ್ರ ಸರ್ಕಾರ ಸಮಾಜದಲ್ಲಿ ಶಾಂತಿ ಭಂಗ ಮಾಡುವಂತಹ ಜನ ವಿರೋಧಿ ಕಾನೂನುಗಳನ್ನು ರೂಪಿಸಲು ಮುಂದಾಗಿರುವುದು ಖಂಡನೀಯ ಎಂದರು.
ಪ್ರಧಾನ ಮಂತ್ರಿ ದೇಶದ ಸಂಪತ್ತನ್ನು ಒಂದೊಂದಾಗಿ ಮಾರುತ್ತಿದ್ದಾರೆ. ಈಗ ಮುಸಲ್ಮಾನರ ಸಂಪತ್ತಿನ ಮೇಲೆ ಕಣ್ಣು ಹಾಕಿದ್ದಾರೆ. ವಕ್ಫ್ ತಿದ್ದುಪಡಿ ಮಸೂದೆಯಲ್ಲಿ ವಕ್ಫ್ ಆಸ್ತಿ ಮತ್ತು ದೇಶದ ಭವಿಷ್ಯಕ್ಕೆ ಅಪಾಯವನ್ನುಂಟುಮಾಡುವ ತಿದ್ದುಪಡಿಗಳಿದ್ದು, ಕೂಡಲೇ ಮಸೂದೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ಕಮಿಟಿಯ ಮಾಜಿ ಚೇರಮನ್ ಎ.ಡಿ. ಕೋಲಕಾರ ಮಾತನಾಡಿ, ಧಾರ್ಮಿಕ ಸ್ವಾತಂತ್ರ್ಯ ಹಾಗೂ ಒಕ್ಕೂಟ ವ್ಯವಸ್ಥೆ ಮೇಲಿನ ದಾಳಿ ಇದಾಗಿದ್ದು, ವಕ್ಫ್ ಮಸೂದೆ ಮುಸ್ಲಿಂ ಸಮುದಾಯದ ಹಿತಾಸಕ್ತಿಗೆ ಹಾನಿ ಮಾಡುತ್ತದೆ. ಮಸೂದೆಯನ್ನು ಹಿಂಪಡೆಯಲು ರಾಷ್ಟ್ರಪತಿಗಳು ಮಧ್ಯಸ್ಥಿಕೆ ವಹಿಸಿ ಕೋಟ್ಯಾಂತರ ಅಲ್ಪಸಂಖ್ಯಾತರ ರಕ್ಷಣೆಗೆ ಮುಂದಾಗುವಂತೆ ಒತ್ತಾಯಿಸಿದರು.
ತಹಸೀಲ್ದಾರ ಕಿರಣಕುಮಾರ ಕುಲಕರ್ಣಿ ಮನವಿ ಸ್ವೀಕರಿಸಿದರು. ಪ್ರತಿಭಟನಾ ಮೆರವಣಿಗೆಯಲ್ಲಿ ಅಂಜುಮನ್ ಇಸ್ಲಾಂ ಕಮಿಟಿ ಚೇರಮನ್ ಹಸನಸಾಬ ತಟಗಾರ, ಎಸ್.ಎಂ. ಆರಗಿದ್ದಿ, ನಾಸೀರ್ ಸುರಪುರ, ಮಾಸುಮಲಿ ಮದಗಾರ, ದಾದೇಸಾಬ ಹಣಗಿ, ಉಪಾಧ್ಯಕ್ಷ ಹಾಸೀಂ ಹಿರೇಹಾಳ, ಆರೀಫ್ ಮನಿಯಾರ, ಆಸೀಫ್ ಮೋಮಿನ್, ಭಾಷು ಮುದಗಲ್ಲ, ಇಮ್ರಾನ್ ಅತ್ತಾರ, ಪತ್ತೇಸಾಬ ತಹಸೀಲ್ದಾರ, ಖಾಸಿಂಸಾಬ ಮುಚ್ಚಾಲಿ, ಮೆಹಬೂಬ್ ಮುದಗಲ್ಲ ಸೇರಿದಂತೆ ಇತರರು ಇದ್ದರು.
ಪುರಸಭೆ ಸದಸ್ಯ ರಾಜು ಸಂಗ್ಲೀಕರ ಮಾತನಾಡಿ, ವಕ್ಫ್ ತಿದ್ದುಪಡಿ ಮಸೂದೆ ದ್ವೇಷಪೂರಿತವಾಗಿದೆ. ಅಲ್ಪಸಂಖ್ಯಾತರ ಹಕ್ಕುಗಳನ್ನು ಹತ್ತಿಕ್ಕುವ ಎಲ್ಲ ಪ್ರಯತ್ನವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಹಂತ ಹಂತವಾಗಿ ಮಾಡುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಆಕ್ರೊಶ ವ್ಯಕ್ತಪಡಿಸಿದರು.