ವಿಜಯಸಾಕ್ಷಿ ಸುದ್ದಿ, ಗದಗ : ನಗರದ ಸರ್ಕಾರಿ ಉರ್ದು ಪ್ರೌಢಶಾಲೆಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಬಿಳ್ಕೊಡುಗೆ ಸಮಾರಂಭ ಜರುಗಿತು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಾ. ಪ್ಯಾರಲಿ ನೂರಾನಿ ಹಾಗೂ ಉದ್ಘಾಟಕರಾಗಿ ಆಗಮಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್. ಬುರಡಿ ಕಾರ್ಯಕ್ರಮ ಉದ್ಘಾಟಿಸಿದರು.
ಖ್ಯಾತ ವೈದ್ಯರಾದ ಡಾ. ಪ್ಯಾರಲಿ ನೂರಾನಿ ಮಾತನಾಡಿ, ವಿದ್ಯಾರ್ಥಿ ಜೀವನ ತುಂಬಾ ಪ್ರಮುಖವಾದದ್ದು ಎಂದರಲ್ಲದೆ, ಶಾಲೆಯ ವಿಜ್ಞಾನ ಪ್ರಯೋಗಾಲಯದ ಉಪಕರಣ ಖರೀದಿಗೆ 10 ಸಾವಿರ ರೂ ದೇಣಿಗೆ ನೀಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್. ಬುರಡಿ ಮಾತನಾಡಿ, ತಂದೆ-ತಾಯಿ, ಗುರುಗಳ ಮಾರ್ಗದರ್ಶನದಲ್ಲಿ ಮುನ್ನಡೆಯಿರಿ. ಅಲ್ಪಸಂಖ್ಯಾತರ ಶಿಕ್ಷಣಕ್ಕೆ ಅನೇಕ ಅವಕಾಶಗಳಿದ್ದು, ಅವುಗಳನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ಎಸ್ಡಿಎಂಸಿ ಅಧ್ಯಕ್ಷ ಅಕ್ಬರ್ಸಾಬ ಬಬರ್ಚಿ ಮಾತನಾಡಿ, ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಶಿಕ್ಷಕರು ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಶಾಲೆಯಲ್ಲಿ ಉತ್ತಮ ಬೋಧಕರಿದ್ದು, ಅವರ ಮಾರ್ಗದರ್ಶನದಲ್ಲಿ ನಡೆಯಿರಿ ಎಂದು ಹೇಳಿದರು.
ಶಾಲೆಯ ಮುಖ್ಯ ಗುರುಗಳಾದ ಎಚ್.ಎ. ಫಾರೂಕಿ ಮಾತನಾಡಿದರು. ಶೈಕ್ಷಣಿಕ ವರ್ಷದಲ್ಲಿ ವಿವಿಧ ಸಾಂಸ್ಕೃತಿಕ ಚಟುವಟಿಕೆ ಹಾಗೂ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. . ಎಸ್.ಬಿ. ಬಡ್ಡೂರ, ಎಸ್.ಎ. ಕುಂಬಾರ್ ವೇದಿಕೆಯಲ್ಲಿದ್ದರು. ಕಾರ್ಯಕ್ರಮವನ್ನು ಎಸ್.ಬಿ. ಶಿವಳ್ಳಿ ನಿರೂಪಿಸಿದರು. ಎಂ.ಎಂ. ಮಕಾನದಾರ ವಂದಿಸಿದರು.