ಬೆಂಗಳೂರು: ಕರ್ನಾಟಕ ಬಿಜೆಪಿ ಶಾಸಕ ಮುನಿರತ್ನ ಅವರು ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಮಾರಕ ವೈರಸ್ ಚುಚ್ಚುಮದ್ದನ್ನು ನೀಡಿದ್ದಾರೆ ಎಂದು 40 ವರ್ಷದ ಮಹಿಳೆಯೊಬ್ಬರು ಆರೋಪಿಸಿದ್ದಾರೆ. ಈ ಘಟನೆ ಸಂಬಂಧ ಪೊಲೀಸರು ಎಫ್ಐಆರ್ ದಾಖಲು ಮಾಡಿದ್ದಾರೆ.
ಘಟನೆಯು 2023ರಲ್ಲಿ ನಡೆದಿತ್ತು ಎಂದು ಮಹಿಳೆ ತಿಳಿಸಿದ್ದಾರೆ. ಆರೋಪಿಗಳು ಬೆದರಿಕೆ ಹಾಕಿದ್ದರಿಂದ ಹೆದರಿ ದೂರು ನೀಡಿರಲಿಲ್ಲ. ಈಗ ದೂರು ನೀಡುತ್ತಿರುವುದಾಗಿ ಮಹಿಳೆ ಹೇಳಿಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಈ ಹಿಂದೆ ಬಿಜೆಪಿಯಲ್ಲಿ ಕೆಲಸ ಮಾಡುತ್ತಿದ್ದೆ. ಪತಿ ಬಿಟ್ಟು ಹೋಗಿದ್ದರಿಂದ ಮತ್ತೊಬ್ಬರನ್ನು ಮದುವೆ ಆಗಿ ಜೀವನ ನಡೆಸುತ್ತಿದ್ದೆ. ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪ ಹೊರಿಸಿ ನನ್ನನ್ನು ಜೈಲಿಗೆ ಕಳುಹಿಸಿದ್ದರು. ಜಾಮೀನು ಪಡೆದು ಜೈಲಿನಿಂದ ಹೊರಬಂದ ಬಳಿಕ ಅವರ ಬೆಂಬಲಿಗರು ಬಂದು ಪ್ರಕರಣ ಇತ್ಯರ್ಥ ಪಡಿಸಿಕೊಳ್ಳುವ ಆಮಿಷವೊಡ್ಡಿದ್ದರು. ನಂತರ, ಶಾಸಕರ ಕಚೇರಿಗೆ ಕರೆದೊಯ್ದು ನನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದರು.
ಮುನಿರತ್ನ ಅವರು ನನ್ನ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿದರು. ಬಳಿಕ, ಬಿಳಿ ಬಣ್ಣದ ಬಾಕ್ಸ್ನಲ್ಲಿದ್ದ ದ್ರವ ತೆಗೆದು ನನ್ನ ಎಡಭಾಗದ ಕೈಗೆ ಚುಚ್ಚಿ, ಜೀವನಪರ್ಯಂತ ನರಳುತ್ತೀಯಾ ಎಂದು ಹೇಳಿ ಬೆದರಿಸಿದ್ದರು ಎಂಬುದು ಎಫ್ಐಆರ್ನಲ್ಲಿದೆ.
2025ರ ಜನವರಿ 14ರಂದು ಹೊಟ್ಟೆನೋವಿಗೆ ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ತೆರಳಿದಾಗ ಇಡಿಆರ್ ವೈರಸ್ ಕಾಯಿಲೆ ಇರುವುದಾಗಿ ಪತ್ತೆಯಾಗಿತ್ತು. ಇದು ವಾಸಿಯಾಗದ ಕಾಯಿಲೆ ಎಂದು ವರದಿಯಲ್ಲಿ ವೈದ್ಯರು ತಿಳಿಸಿದ್ದಾರೆ ಎಂದು ಸಂತ್ರಸ್ತೆ ನೀಡಿದ ದೂರು ಆಧರಿಸಿ ಎಫ್ಐಆರ್ನಲ್ಲಿ ದಾಖಲಿಸಲಾಗಿದೆ.