ಚಿಕ್ಕಮಗಳೂರು : -ಮೂಡಿಗೆರೆ ತಾಲೂಕಿನ ಬೈರಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ಆನೆ ನಿಗ್ರಹ ಪಡೆಯ ಸದಸ್ಯನೇ ಬಲಿಯಾದ ಘಟನೆ ಜರುಗಿದೆ.
26 ವರ್ಷದ ಕಾರ್ತಿಕ್ ಗೌಡ ಮೃತ ದುರ್ದೈವಿಯಾಗಿದ್ದು, ಇಬ್ಬರಿಗೆ ಗಂಭೀರ ಸ್ವರೂಪದ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಯಿಂದ ಎರಡು ತಿಂಗಳಲ್ಲಿ ಮೂರು ಜನ ಕಾಡಾನೆ ದಾಳಿಗೆ ಬಲಿಯಾದಂತಾಗಿದೆ. 20 ದಿನಗಳೊಳಗೆ ಕಾಡಾನೆ ದಾಳಿಗೆ ಇಬ್ಬರು ಸಾವನ್ನಪ್ಪಿದ್ದಾರೆ.
ಮೃತ ಕಾರ್ತಿಕ್ ಮೂಡಿಗೆರೆ ತಾಲೂಕಿನ ಗೌಡಹಳ್ಳಿ ನಿವಾಸಿಯಾಗಿದ್ದು, ಸರಕಾರ ರಚಿಸಿದ್ದ ಆನೆ ನಿಗ್ರಹ ಪಡೆಯಲ್ಲಿ ಕೆಲಸ ಮಾಡುತ್ತಿದ್ದರು. ಆನೆ ಓಡಿಸುವಾಗ ಕಾಡಾನೆ ಏಕಾಏಕಿ ದಾಳಿ ನಡೆಸಿದೆ ಎಂದು ತಿಳಿದು ಬಂದಿದೆ.
ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. 20 ದಿನದ ಹಿಂದೆ ಆಲ್ದೂರಿನಲ್ಲಿ ವೀಣಾ ಎನ್ನುವವರು, ಒಂದೂವರೆ ತಿಂಗಳ ಹಿಂದೆ ಆಲ್ದೂರು ಸಮೀಪ ಚಿನ್ನಿ ಎನ್ನುವವರು ಆನೆ ದಾಳಿಗೆ ಬಲಿಯಾಗಿದ್ದರು.



