ಬೆಂಗಳೂರು/ರಾಮನಗರ: ಕಾಡಾನೆ ಜೊತೆ ಸೆಲ್ಫಿ ತೆಗೆಯುವ ಅಪಾಯಕಾರಿ ಸಾಹಸಕ್ಕೆ ಮುಂದಾದ ಬೆಂಗಳೂರು ಮೂಲದ ಉದ್ಯಮಿಯೊಬ್ಬರು ಪ್ರಾಣ ಕಳೆದುಕೊಂಡಿರುವ ಬೆಚ್ಚಿಬೀಳಿಸುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ವನ್ಯಜೀವಿ ಅಭಯಾರಣ್ಯದಲ್ಲಿ ನಡೆದಿದೆ. ಆರಂಭದಲ್ಲಿ ಸ್ನೇಹಿತರು ನೀಡಿದ್ದ ಮಾಹಿತಿ ತನಿಖೆಯಲ್ಲಿ ಸುಳ್ಳು ಎಂದು ಬಯಲಾಗಿದ್ದು, ದುರಂತದ ನಿಜವಾದ ಕಾರಣ ಅರಣ್ಯ ಇಲಾಖೆ ತನಿಖೆಯಲ್ಲಿ ಬಹಿರಂಗವಾಗಿದೆ.
ರಾಜರಾಜೇಶ್ವರಿ ನಗರದ ನಿವಾಸಿ ಹಾಗೂ 52 ವರ್ಷದ ಉದ್ಯಮಿ ನರೇಂದ್ರ ಶಿಂಧೆ ತಮ್ಮ 10 ಸ್ನೇಹಿತರೊಂದಿಗೆ ರೆಸಾರ್ಟ್ಗೆ ತೆರಳಿ, ಮೂರು ಕಾರುಗಳಲ್ಲಿ ವಾಪಸ್ಸಾಗುತ್ತಿದ್ದರು. ಸೋಮವಾರ ಮುಂಜಾನೆ ಬಸವನಬೆಟ್ಟ ಸಮೀಪದ ಕರಬಗೆರೆ ಕೆರೆಯ ಬಳಿ ಕಾರು ನಿಲ್ಲಿಸಿದ ವೇಳೆ ಅವರು ಕೆಳಗಿಳಿದಿದ್ದರು.
ಮೊದಲಿಗೆ ಅವರು ಮೂತ್ರ ವಿಸರ್ಜನೆಗಾಗಿ ಇಳಿದಿದ್ದಾಗ ಆನೆ ದಾಳಿ ನಡೆಸಿದೆ ಎಂದು ಹೇಳಲಾಗಿತ್ತು. ಆದರೆ ಸ್ಥಳ ಪರಿಶೀಲನೆ, ಸಾಕ್ಷ್ಯಗಳು ಹಾಗೂ ಪರಿಸ್ಥಿತಿಯನ್ನು ಪರಿಶೀಲಿಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಶಿಂಧೆ ಕಾಡಾನೆಯೊಂದಿಗೆ ಸೆಲ್ಫಿ ತೆಗೆಯಲು ಮುಂದಾಗಿದ್ದಾಗಲೇ ದಾಳಿ ನಡೆದಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಆನೆಯತ್ತ ಬೆನ್ನು ಮಾಡಿ ಮೊಬೈಲ್ನಲ್ಲಿ ಸೆಲ್ಫಿ ತೆಗೆಯುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ್ದು, ದಂತಗಳು ದೇಹಕ್ಕೆ ತಾಕಿದ ಪರಿಣಾಮ ಅವರು ಕೆರೆಯೊಳಗೆ ಬಿದ್ದು ಮೃತಪಟ್ಟಿದ್ದಾರೆ. ಇಡೀ ಘಟನೆ ಕೆಲವೇ ಸೆಕೆಂಡುಗಳಲ್ಲಿ ನಡೆದಿದ್ದು, ತಪ್ಪಿಸಿಕೊಳ್ಳುವ ಅವಕಾಶವೇ ಸಿಕ್ಕಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆ ಬಳಿಕ ಸ್ನೇಹಿತರು ಮೃತದೇಹವನ್ನು ಗುಪ್ತವಾಗಿ ಬೆಂಗಳೂರಿಗೆ ಕೊಂಡೊಯ್ಯಲು ಯತ್ನಿಸಿದ್ದರೂ, ಅರಣ್ಯ ಸಿಬ್ಬಂದಿ ಗೇಟ್ನಲ್ಲಿ ಪರಿಶೀಲನೆ ನಡೆಸಿದ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.
ರಾಮನಗರ ಡಿಸಿಎಫ್ ಎಂ. ರಾಮಕೃಷ್ಣಪ್ಪ ಸ್ಥಳದಲ್ಲಿ ರಕ್ತದ ಕಲೆಗಳು ಹಾಗೂ ಇತರೆ ಸಾಕ್ಷ್ಯಾಧಾರಗಳು ಪತ್ತೆಯಾಗಿವೆ ಎಂದು ತಿಳಿಸಿದ್ದು, ಕಾರು ನಿಲ್ಲಿಸಿದ್ದ ಸ್ಥಳದಿಂದ ಕೆರೆಯವರೆಗೆ ಸುಮಾರು 50 ಮೀಟರ್ ಅಂತರವಿತ್ತು ಎಂದಿದ್ದಾರೆ.
ಈ ಪ್ರಕರಣದ ಬೆನ್ನಲ್ಲೇ ಅರಣ್ಯ ಇಲಾಖೆ ಸಾರ್ವಜನಿಕರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದು, ವನ್ಯಜೀವಿಗಳ ಸಮೀಪ ಹೋಗುವುದು, ಫೋಟೊ ಅಥವಾ ಸೆಲ್ಫಿ ತೆಗೆಯಲು ಯತ್ನಿಸುವುದು ಜೀವಕ್ಕೆ ಮಾರಕವಾಗಬಹುದು ಎಂದು ಎಚ್ಚರಿಸಿದೆ.



