ಮಕ್ಕಳನ್ನು ಉತ್ತಮ ನಾಗರಿಕರನ್ನಾಗಿ ಬೆಳೆಸೋಣ:ರಾಜಶೇಖರ ತಿಳಗಂಜಿ

0
Anti-Child Labor Day Workshop
Spread the love

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ : ಬಾಲ ಕಾರ್ಮಿಕ ಮಕ್ಕಳನ್ನು ನಾವೆಲ್ಲರೂ ಸೇರಿ ಕಾಪಾಡಬೇಕಿದೆ. ಅವರನ್ನು ರಕ್ಷಿಸಿ, ಉತ್ತಮ ಶಿಕ್ಷಣ ನೀಡಿ, ಸಮಾಜದಲ್ಲಿ ಒಳ್ಳೆಯ ನಾಗರಿಕರನ್ನಾಗಿ ಬೆಳೆಸೋಣ ಎಂದು ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ರಾಜಶೇಖರ ತಿಳಗಂಜಿ ಹೇಳಿದರು.

Advertisement

ಶುಕ್ರವಾರ ಹೆಗ್ಗೇರಿಯ ಜೆ.ಎಸ್.ಎಸ್ ಸಕ್ರಿ ಕಾನೂನು ಕಾಲೇಜಿನಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಬಾಲ ಕಾರ್ಮಿಕ ವಿರೋಧಿ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ಒಂದು ದಿನದ ಕಾರ್ಯಾಗಾರವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿ ವರ್ಷ ಜೂನ್ 12ರಂದು ವಿಶ್ವ ಬಾಲಕಾರ್ಮಿಕ ವಿರೋಧಿ ದಿನವನ್ನು ಆಚರಿಸಲಾಗುವುದು. ಬಡತನ, ಅನಕ್ಷರತೆಯಿಂದಾಗಿ ಇಂದು ಭಾರತದಲ್ಲಿ ಹಲವಾರು ಬಾಲ ಕಾರ್ಮಿಕರಾಗಿದ್ದಾರೆ. 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ದುಡಿಯುತ್ತಿದ್ದರೆ ಅವರನ್ನು ಬಾಲ ಕಾರ್ಮಿಕರು ಎನ್ನಬಹುದು. 16 ವರ್ಷ ಮೇಲ್ಪಟ್ಟ ವಯಸ್ಸಿನವರು ದುಡಿಯುತ್ತಿದ್ದರೆ ಅವರನ್ನು ಕಿಶೋರಾವಸ್ಥೆ ಕಾರ್ಮಿಕರು ಎಂದು ಕರೆಯಲಾಗುತ್ತದೆ.

ಉತ್ತಮ ಶಿಕ್ಷಣ ನೀಡುವುದರ ಮೂಲಕ ಬಾಲ ಕಾರ್ಮಿಕ ಪದ್ಧತಿಯನ್ನು ಹೋಗಲಾಡಿಸಬಹುದು.
ಬಾಲ ಕಾರ್ಮಿಕ ಪದ್ಧತಿಯನ್ನು ಹೋಗಲಾಡಿಸಲು ಎಲ್ಲರೂ ಮುಂದಾಗಬೇಕು. ನಮ್ಮ ಸುತ್ತಮುತ್ತಲಿನ ಪ್ರದೇಶದಲ್ಲಿ ಬಾಲ ಕಾರ್ಮಿಕರು ಕಂಡು ಬಂದಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಸಂಪರ್ಕಿಸಿ ಮಾಹಿತಿ ನೀಡಬೇಕು. 6ರಿಂದ 14 ವರ್ಷದೊಳಗಿನ ಮಕ್ಕಳು ಉಚಿತ ಮತ್ತು ಕಡ್ಡಾಯ ಶಿಕ್ಷಣವನ್ನು ಪಡೆಯುವುದು ಅವರ ಹಕ್ಕಾಗಿದೆ ಎಂದು ತಿಳಿಸಿದರು.

ಜಿಲ್ಲಾ ಮಕ್ಕಳ ಕಲ್ಯಾಣ ಇಲಾಖೆಯ ಮಹಮ್ಮದ ಅಲಿ ತಹಸೀಲ್ದಾರ ಅವರು ಮಾತನಾಡಿ, 2012 ಮೇ ತಿಂಗಳಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಸ್ಥಾಪನೆಯಾಯಿತು. ಇದರ ಅಡಿಯಲ್ಲಿ ಮಗುವಿನ ರಕ್ಷಣೆ ಮಾಡುವುದು ನಮ್ಮ ಜವಾಬ್ದಾರಿ. ಬಾಲ ಕಾರ್ಮಿಕ ಪದ್ಧತಿ ಇಡೀ ವಿಶ್ವಕ್ಕೆ ಅಂಟಿದ ಶಾಪವಾಗಿದೆ. ಚಿಕ್ಕ ವಯಸ್ಸಿನಲ್ಲಿಯೇ ಮಕ್ಕಳು ಗಾರೆ ಕೆಲಸ, ಗ್ಯಾರೇಜ್, ಅಂಗಡಿ, ಹೊಲ, ಕೈಗಾರಿಕೆ ಸೇರಿದಂತೆ ವಿವಿಧೆಡೆ ಕೆಲಸ ಮಾಡುತ್ತಿದ್ದರೆ, ಇನ್ನೂ ಕೆಲ ಮಕ್ಕಳು ಭಿಕ್ಷಾಟನೆಯಂತಹ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿ ಬಾಲಾಪರಾಧಿಗಳಾಗುತ್ತಿದ್ದಾರೆ ಎಂದರು.

ಬಾಲ ಕಾರ್ಮಿಕ ಪದ್ಧತಿಯ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಕಾರ್ಯಕ್ರಮದಲ್ಲಿ ಕೆ.ಎಸ್.ಎಲ್.ಯು ಕಾನೂನು ಶಾಲೆಯ ಸಹಾಯಕ ಪ್ರಾಧ್ಯಾಪಕರಾದ ಡಾ.ರಾಜೇಂದ್ರಕುಮಾರ್ ಹಿಟ್ಟಣಗಿ, ಜೆ.ಎಸ್.ಎಸ್ ಸಕ್ರಿ ಕಾನೂನು ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಬಾಬುಲಾಲ್ ದರಗಾದ, ಶಿಶು ಅಭಿವೃದ್ಧಿ ಅಧಿಕಾರಿ ಅತಿಕಾ ಸಿದ್ಧಿ, ಸುರೇಶ್ ಲಿಂಬಿಕಾಯಿ ಹಾಗೂ ಕಾಲೇಜಿನ ಬೋಧಕರು, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಚಾರ್ಯರಾದ ಡಾ.ರೂಪಾ ಇಂಗಳಹಳ್ಳಿ ಮಾತನಾಡಿ, ಸಮಾಜದಲ್ಲಿ ದಿನದಿಂದ ದಿನಕ್ಕೆ ಬಾಲ ಕಾರ್ಮಿಕರು ಹೆಚ್ಚಾಗುತ್ತಿದ್ದಾರೆ. ಬಡತನ, ಆರ್ಥಿಕ ಬಿಕ್ಕಟ್ಟು ಇಂತಹ ಅನೇಕ ಕಾರಣಗಳಿಂದ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಇದನ್ನು ತಡೆಗಟ್ಟಲು ಜನರಲ್ಲಿ ಜಾಗೃತಿ ಮೂಡಿಸಿ, ಸಂವಿಧಾನದ ಹಕ್ಕಿನ ಬಗ್ಗೆ ಅರಿವು ಮೂಡಿಸಬೇಕು. ಇದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಅದರಲ್ಲೂ ಕಾನೂನು ವಿದ್ಯಾರ್ಥಿಗಳು ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು. ವಿದ್ಯಾರ್ಥಿಗಳು ತಮಗೆ ಸಿಕ್ಕ ಸಮಯವನ್ನು ಹಾಳು ಮಾಡದೆ ಒಳ್ಳೆಯ ಕೆಲಸಕ್ಕೆ ಉಪಯೋಗಿಸಿಕೊಳ್ಳಿ ಎಂದು ಸಲಹೆ ನೀಡಿದರು.


Spread the love

LEAVE A REPLY

Please enter your comment!
Please enter your name here