ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಕಳೆದ ಬುಧವಾರ ನಡೆದ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಪುರಸಭೆ ಸದಸ್ಯರೊಬ್ಬರು ಕಾಂಗ್ರೆಸ್ಗೆ ಮತ ಹಾಕುವ ಮೂಲಕ ಪಕ್ಷದ ನಿಯಮವನ್ನು ಉಲ್ಲಂಘಿಸಿದ್ದು, ಪಕ್ಷವಿರೋಧಿ ನಡೆಯ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಜೆಡಿಎಸ್ ಜಿಲ್ಲಾಧ್ಯಕ್ಷರಿಗೆ ಹಾಗೂ ರಾಜ್ಯಾಧ್ಯಕ್ಷರಿಗೆ ಪತ್ರ ಬರೆಯಲಾಗಿದೆ. ಈ ಕುರಿತಂತೆ ಅವರ ಸದಸ್ಯತ್ವ ರದ್ದುಪಡಿಸುವಂತೆ ಕಾನೂನು ಕ್ರಮ ಕೈಗೊಳ್ಳುವದಾಗಿ ಶಿರಹಟ್ಟಿ ಮತಕ್ಷೇತ್ರದ ಜೆಡಿಎಸ್ ಅಧ್ಯಕ್ಷ ಶಂಕರ ಬಾಳಿಕಾಯಿ ಹೇಳಿದರು.
ಅವರು ತಮ್ಮ ನಿವಾಸದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪುರಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಒಮ್ಮತದ ಅಭ್ಯರ್ಥಿ ಸ್ವರ್ಧೆ ಮಾಡಿದ್ದರು. ಚುನಾವಣೆ ವೇಳೆಯವರೆಗೂ ಎಲ್ಲರ ಜೊತೆ ಇದ್ದು, ಕೊನೆಯ ಘಳಿಗೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಕೈ ಎತ್ತುವ ಮೂಲಕ ಪಕ್ಷದ ವಿರುದ್ಧ ಮತ ಚಲಾಯಿಸಿದ್ದಾರೆ.
ಈ ಸದಸ್ಯರನ್ನು ಪಕ್ಷ ಗುರುತಿಸಿ ಪುರಸಭೆ ಚುನಾವಣೆಗೆ ಅಭ್ಯರ್ಥಿಯನ್ನಾಗಿ ನಿಲ್ಲಿಸಿ ಗೆಲ್ಲಿಸಿದ್ದು, ಈಗ ಚುನಾವಣೆಯಲ್ಲಿ ಪಕ್ಷದ ವಿರುದ್ಧ ಕೆಲಸ ಮಾಡಿ ಕಾಂಗ್ರೆಸ್ಗೆ ಮತ ಹಾಕುವ ಮೂಲಕ ಪಕ್ಷಕ್ಕೆ ದ್ರೋಹ ಬಗೆದಿದ್ದಾರೆ. ಅವರಿಗೆ ಪಕ್ಷ ಅನೇಕ ಅಧಿಕಾರಗಳನ್ನು ನೀಡಿದ್ದಾಗ್ಯೂ ಪಕ್ಷ ವಿರೋಧಿ ನಡೆಯನ್ನು ಖಂಡಿಸುತ್ತಿದ್ದು, ಇದಕ್ಕೆ ರಾಜ್ಯಾದ್ಯಕ್ಷ ಹಾಗೂ ಜಿಲ್ಲಾಧ್ಯಕ್ಷರ ಆದೇಶ ಮೇರೆಗೆ ಅವರ ಮೇಲೆ ಪಕ್ಷ ಶಿಸ್ತುಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.
ಶಿರಹಟ್ಟಿ ಮತಕ್ಷೇತ್ರದ ಅಲ್ಪಸಂಖ್ಯಾತರ ಅಧ್ಯಕ್ಷ ಜಾಕೀರ್ ಹುಸೇನ್ ಹವಾಲ್ದಾರ ಮಾತನಾಡಿ, ಜೆಡಿಎಸ್ ಸದಸ್ಯ ಪಕ್ಷಕ್ಕೆ ದ್ರೋಹ ಬಗೆದಿದ್ದು, ಪಕ್ಷ ವಿರೋಧಿ ಕಾರ್ಯ ಮಾಡಿದ ಅವರಿಗೆ ಪಕ್ಷದಿಂದ ಕಾನೂನ ಕ್ರಮ ಕೈಗೊಳ್ಳಲು ಜಿಲ್ಲಾಧ್ಯಕ್ಷರಿಗೆ ತಿಳಿಸಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಜೆಡಿಎಸ್ ತಾಲೂಕಾಧ್ಯಕ್ಷ ಹಾಗೂ ಪುರಸಭೆ ಸದಸ್ಯ ಪ್ರವೀಣ ಬಾಳಿಕಾಯಿ, ಇಶಾಕಅಹ್ಮದ ಪತ್ತೆಖಾನವರ, ಯುನೂಷ ನಾಲಬಂದ ಹಾಗೂ ಜೆಡಿಎಸ್ ಕಾರ್ಯಕರ್ತರು ಇದ್ದರು.