ವಿಜಯಸಾಕ್ಷಿ ಸುದ್ದಿ, ರೋಣ : ತಾಲೂಕಿನ ಜಕ್ಕಲಿ ಗ್ರಾಮದಲ್ಲಿ ಗಾಳಿ ವಿದ್ಯುತ್ ಉತ್ಪಾದನಾ ಕಂಪನಿಗಳ ಬೃಹತ್ ವಾಹನಗಳ ಓಡಾಟದಿಂದ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ಕೂಡಲೇ ವಾಹನ ಸಂಚಾರವನ್ನು ನಿಷೇಧಿಸಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಗುರುವಾರ ತಹಸೀಲ್ದಾರ ಕೆ.ನಾಗರಾಜರವರಿಗೆ ಮನವಿ ಸಲ್ಲಿಸಿದರು.
ರೋಣ ಮಂಡಲ ಬಿಜೆಪಿ ಘಟಕದ ಅಧ್ಯಕ್ಷ ಮುತ್ತಣ್ಣ ಕಡಗದ ಮಾತನಾಡಿ, ಈ ಹಿಂದೆ ಕೋಟ್ಯಾಂತರ ರೂ.ಗಳ ವೆಚ್ಚದಲ್ಲಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ನಿರ್ಮಿಸಲಾಗಿದೆ. ವಿಪರ್ಯಾಸವೆಂದರೆ, ಗಾಳಿ ವಿದ್ಯುತ್ ಉತ್ಪಾದನಾ ಕಂಪನಿಗಳ ಬೃಹತ್ ಗಾತ್ರದ ವಾಹನಗಳ ಓಡಾಟದಿಂದ ರಸ್ತೆಗಳು ಕಿತ್ತು ಹೋಗಿದ್ದು, ಸಂಚಾರ ಸಾಧ್ಯವಾಗದ ಸ್ಥಿತಿ ಉದ್ಭವಿಸಿದೆ. ಈ ಕೂಡಲೇ ವಾಹನ ಸಂಚಾರವನ್ನು ನಿಷೇಧಿಸಬೇಕು ಎಂದು ಆಗ್ರಹಿಸಿದರು.
ಎ.ಎ. ಹೊಸಮನಿ ಮಾತನಾಡಿ, ಗ್ರಾಮದ ರಸ್ತೆಗಳು ಹಾಳಾಗುತ್ತಿರುವ ಬಗ್ಗೆ ಈಗಾಗಲೇ ಸಾಕಷ್ಟು ಬಾರಿ ಅಧಿಕಾರಿಗಳಿಗೆ ತಿಳಿಸಿದರೂ ಸಹ ಗಮನ ಹರಿಸುತ್ತಿಲ್ಲ. ಸುಮಾರು 60 ರಿಂದ 70 ಚಕ್ರಗಳನ್ನು ಹೊಂದಿರುವ ವಾಹನಗಳು ಸಂಚಾರ ಮಾಡುತ್ತಿವೆ. ಜೊತೆಗೆ ಧೂಳು ಏಳುತ್ತಿದ್ದು, ಅಸಹನೀಯವಾಗಿದೆ. ಇದರಿಂದ ಗ್ರಾಮಸ್ಥರು ಭಯ ಬಿಳುವಂತಾಗಿದ್ದು, ಕೂಡಲೇ ಕಂಪನಿಗಳ ವಾಹನಗಳನ್ನು ಗ್ರಾಮ ಪ್ರವೇಶಿಸದಂತೆ ತಡೆ ಹಿಡಿಯಬೇಕು. ಇಲ್ಲದಿದ್ದರೆ ಹೋರಾಟ ಅನಿವಾರ್ಯವಾಗಲಿದೆ ಎಂದರು.
ಮನವಿ ಸ್ವೀಕರಿಸಿ, ಜಿಲ್ಲಾಧಿಕಾರಿಗಳ ಗಮನಕ್ಕೆ ಈ ವಿಷಯವನ್ನು ತರಲಾಗುವುದು ಎಂದು ತಹಸೀಲ್ದಾರ ಕೆ.ನಾಗರಾಜ ತಿಳಿಸಿದರು. ಆದಂಸಾಬ ಬಾಲೆಸಾಬನವರ, ಶೇಖಪ್ಪ ಮಾರನಬಸರಿ, ಶಿವಪ್ಪ ಕೆಳಗಡೆ, ಅಂದಪ್ಪ ಹಾಳಕೇರಿ ಸೇರಿದಂತೆ ಅನೇಕರಿದ್ದರು.