ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಶಿರಹಟ್ಟಿ ತಾಲೂಕಾ ಕೇಂದ್ರಕ್ಕೆ ರಾಜ್ಯ ಹೆದ್ದಾರಿಯಿಂದ ಸಂಪರ್ಕ ಕಲ್ಪಿಸುವ ರಸ್ತೆಗಳ ನಿರ್ಮಾಣ ಕುರಿತಂತೆ ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರಿಗೆ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ವಿಶ್ವನಾಥ ಕಪ್ಪತ್ತನವರ ಹಾಗೂ ಸ್ಥಳೀಯ ಮುಖಂಡರು ಶುಕ್ರವಾರ ಭೇಟಿ ಮಾಡಿ ಹಾಳಾದ ರಸ್ತೆಯ ಸುಧಾರಣೆ ಕುರಿತು ಚರ್ಚೆ ನಡೆಸಿದರು.
ನಂತರ ಪತ್ರಿಕೆಯೊಂದಿಗೆ ಮಾತನಾಡಿದ ಜಿ.ಪಂ ಮಾಜಿ ಅಧ್ಯಕ್ಷ ವಿಶ್ವನಾಥ ಕಪ್ಪತ್ತನವರ, ಶಿರಹಟ್ಟಿ ತಾಲೂಕಾ ಕೇಂದ್ರಕ್ಕೆ ರಾಜ್ಯ ಹೆದ್ದಾರಿ ನಿರ್ಮಾಣದ ಸಂದರ್ಭದಲ್ಲಿ ಭಾರೀ ವಾಹನಗಳು ನಿತ್ಯವೂ ಸಂಚರಿಸಿದ್ದರಿಂದ ಸಂಪರ್ಕ ಕಲ್ಪಿಸುವ ರಸ್ತೆಗಳು ಹಾಳಾಗಿವೆ. ಇದನ್ನು ಕೆಲವು ಕಡೆಗಳಲ್ಲಿ ಕಾಟಾಚಾರಕ್ಕೆಂಬಂತೆ ದುರಸ್ತಿ ಮಾಡಿ ತೇಪೆ ಹಚ್ಚಿದ್ದಾರೆ. ಇದರಿಂದ ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗುತ್ತಿದ್ದು, ಇದನ್ನು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ರಸ್ತೆ ನಿರ್ಮಿಸಿಕೊಡಬೇಕೆಂದು ವಿನಂತಿಸಲಾಗಿದೆ. ಇದಕ್ಕೆ ಸಂಸದ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ವಹಿಸುವ ಭರವಸೆ ನೀಡಿದ್ದಾರೆ. ಕಡಕೋಳ ಗ್ರಾಮದಲ್ಲಿ ಜಲಜೀವನ್ ಮಿಶನ್ ಯೋಜನೆ ಅಡಿ ಕೈಗೊಂಡ ಕಾಮಗಾರಿ ಅಪೂರ್ಣಗೊಂಡಿದ್ದರ ಕುರಿತು ಸಹ ಗಮನಕ್ಕೆ ತರಲಾಗಿದೆ ಎಂದರು.
ತಾ.ಪಂ ಮಾಜಿ ಸದಸ್ಯ ತಿಪ್ಪಣ್ಣ ಕೊಂಚಿಗೇರಿ, ಪ.ಪಂ ಸದಸ್ಯ ಸಂದೀಪ ಕಪ್ಪತ್ತನವರ, ಕಡಕೋಳದ ಶರಣಪ್ಪ ಹರ್ಲಾಪೂರ, ಸಂದೇಶ ಗಾಣಿಗೇರ, ಮುತ್ತಣ್ಣ ಕಪ್ಪತ್ತನವರ ಮುಂತಾದವರು ಉಪಸ್ಥಿತರಿದ್ದರು.