ಮೈಸೂರು:- ಆಷಾಢ ಮಾಸದ ಮೊದಲ ಶುಕ್ರವಾರವಾದ ಇಂದು ಚಾಮುಂಡಿಬೆಟ್ಟದಲ್ಲಿ ವಿಶೇಷ ಪೂಜೆ ನಡೆಯುತ್ತಿದ್ದು, ಸಂಭ್ರಮ ಮನೆ ಮಾಡಿದೆ.
ಮುಂಜಾನೆಯಿಂದಲೇ ಅಭಿಷೇಕ, ವಿಶೇಷ ಪೂಜಾವ ಕೈಂಕರ್ಯಗಳು ಆರಂಭವಾಗಿದ್ದು, ಬೆಳಿಗ್ಗೆಯಿಂದಲೇ ರಾಜ್ಯದ ಮೂಲೆ ಮೂಲೆಗಳಿಂದ ಭಕ್ತ ಸಾಗರ ಹರಿದು ಬಂದಿದೆ. ಮುಂಜಾನೆಯಿಂದಲೇ ದೇವಿಯ ದರ್ಶನಕ್ಕೆ ನೂಕು ನುಗ್ಗಲು ಉಂಟಾಗಿದೆ.
ಇನ್ನೂ ಹೂವಿನ ವಿಶೇಷ ಅಲಂಕಾರದಿಂದ ದೇವಾಲಯ ಕಂಗೊಳಿಸುತ್ತಿದೆ. ಇನ್ನೂ ಆಷಾಢ ಪ್ರಯುಕ್ತ ಚಾಮುಂಡಿ ಬೆಟ್ಟಕ್ಕೆ ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ. ಭಕ್ತರಿಗೆ ಯಾವುದೆ ತೊಂದರೆಯಾಗದಂತೆ ನೋಡಿಕೊಳ್ಳಲು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.
ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರ ವಾಹನಗಳ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ. ಬೆಟ್ಟಕ್ಕೆ ಆಗಮಿಸುವ ಭಕ್ತರಿಗಾಗಿ ಲಲಿತಮಹಲ್ ಪ್ಯಾಲೇಸ್ ಬಳಿಯಿರುವ ಮೈದಾನದಿಂದ ಚಾಮುಂಡಿ ಬೆಟ್ಟಕ್ಕೆ ಉಚಿತ ಬಸ್ ಪ್ರಯಾಣದ ವ್ಯವಸ್ಥೆ ಮಾಡಲಾಗಿದೆ. ಕೇವಲ ಶುಕ್ರವಾರ ಮಾತ್ರ ಉಚಿತ ಬಸ್ ವ್ಯವಸ್ಥೆ ಇರುತ್ತದೆ. ಶನಿವಾರ, ಭಾನುವಾರ ಉಚಿತ ಬಸ್ ವ್ಯವಸ್ಥೆ ಇರುವುದಿಲ್ಲ. ಆಷಾಢ ಮಾಸದ ನಾಲ್ಕು ಶುಕ್ರವಾರ ಶನಿವಾರ ಭಾನುವಾರದಂದು ವಾಹನಗಳಿಗೆ ನಿಷೇಧವಿರುತ್ತದೆ. ಇಂದಿನಿಂದ ಜುಲೈ 14, 19, 21, 26, 28ರವರೆಗೆ ಮತ್ತು ಆಗಷ್ಟ 2ರಿಂದ 4ರವರೆಗೆ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಕ್ಕೆ ನಿರ್ಬಂಧಿಸಲಾಗಿದೆ.