ಬಳ್ಳಾರಿ: ಬ್ಯಾನರ್ ವಿವಾದದಿಂದ ಆರಂಭವಾದ ಗಲಾಟೆ ಇದೀಗ ಜೀವ ಬೆದರಿಕೆ ಆರೋಪಗಳೊಂದಿಗೆ ರಾಜಕೀಯ ಸ್ಫೋಟಕ್ಕೆ ಕಾರಣವಾಗಿದೆ. ಶಾಸಕ ಗಾಲಿ ಜನಾರ್ದನ ರೆಡ್ಡಿ ತಮ್ಮ ಹಾಗೂ ಕುಟುಂಬದ ಪ್ರಾಣಕ್ಕೆ ಅಪಾಯವಿದೆ ಎಂದು ಹೇಳಿ, ಝಡ್ ಶ್ರೇಣಿಯ ಭದ್ರತೆ ನೀಡುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಮನವಿ ಮಾಡಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಪರಮೇಶ್ವರ್ ಮತ್ತು ಡಿಜಿ & ಐಜಿ ಸಲೀಂ ಅವರಿಗೆ ಬರೆದ ಪತ್ರದಲ್ಲಿ, ಜನವರಿ 1ರಂದು ನಡೆದ ಘಟನೆಗಳನ್ನು ಉಲ್ಲೇಖಿಸಿರುವ ರೆಡ್ಡಿ, “ನನ್ನ ಮತ್ತು ನನ್ನ ಕುಟುಂಬದ ಮೇಲೆ ಸಂಘಟಿತ ದಾಳಿ ನಡೆಸಲಾಗಿದೆ” ಎಂದು ಆರೋಪಿಸಿದ್ದಾರೆ.
“ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಹಾಗೂ ಸತೀಶ್ ರೆಡ್ಡಿ ಅವರ ಬೆಂಬಲಿಗರು ಪೆಟ್ರೋಲ್ ಬಾಂಬ್ ದಾಳಿ ನಡೆಸಿದ್ದು, ಬಂದೂಕಿನಿಂದ ಗುಂಡು ಹಾರಿಸಲು ಯತ್ನಿಸಿದ್ದಾರೆ” ಎಂದು ರೆಡ್ಡಿ ಪತ್ರದಲ್ಲಿ ಸ್ಪಷ್ಟವಾಗಿ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ತಮ್ಮ ಕುಟುಂಬ ಸಂಪೂರ್ಣವಾಗಿ ಅಸುರಕ್ಷಿತವಾಗಿದೆ ಎಂದು ತಿಳಿಸಿದ್ದಾರೆ.
ನಾರಾ ಭರತ್ ರೆಡ್ಡಿ ಅವರಿಂದಲೇ ನನಗೆ ನಿರಂತರ ಜೀವ ಬೆದರಿಕೆ ಇದೆ ಎಂದು ಆರೋಪಿಸಿರುವ ಜನಾರ್ದನ ರೆಡ್ಡಿ, ಯಾವುದೇ ಅನಾಹುತ ಸಂಭವಿಸುವ ಮೊದಲು ಝಡ್ ಕ್ಯಾಟಗರಿ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.
ಜನಾರ್ದನ ರೆಡ್ಡಿ ಮನೆ ಬಳಿ ಬ್ಯಾನರ್ ಅಳವಡಿಕೆ ವಿಚಾರವಾಗಿ ನಡೆದ ಗಲಾಟೆಯಲ್ಲಿ ಫೈರಿಂಗ್ ನಡೆದಿದ್ದು, ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಮೃತಪಟ್ಟ ಘಟನೆ ಈಗಾಗಲೇ ರಾಜ್ಯಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದೆ. ಈ ಪ್ರಕರಣ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ರಾಜಕೀಯ ಯುದ್ಧಕ್ಕೆ ತಿರುಗಿದೆ.



