ಬೆಂಗಳೂರು: ಕರ್ತವ್ಯನಿರತ ಜೈಲು ವಾರ್ಡರ್ ಮೇಲೆ ಜೈಲುವಾಸಿಗಳು ಮನಸೋ ಇಚ್ಛೆ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆದಿದೆ.
ಹಲ್ಲೆಗೊಳಗಾದವರು ಜೈಲು ವೀಕ್ಷಕ ಮಂಜುನಾಥ ಹವೇಲಿ. ಸೆಪ್ಟೆಂಬರ್ 2ರಂದು ಬೆಳಗ್ಗೆ 11.30ರ ಸುಮಾರಿಗೆ ಘಟನೆ ನಡೆದಿದ್ದು, ಮಂಗಳೂರಿನ ಭಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಕೈದಿಗಳಾದ ಮೊಹಮ್ಮದ್ ಮುಜಾಮಿಲ್, ಅಬ್ದುಲ್ ಶಫ್ಘಾನ್, ಮೊಹಮ್ಮದ್ ರಿಜ್ವಾನ್, ನಯಾಜ್ ಹಾಗೂ ಕಲಂದರ್ ಶಫಿ ಈ ಕೃತ್ಯವೆಸಗಿರುವುದು ತಿಳಿದುಬಂದಿದೆ.
ಹಲ್ಲೆಗೊಳಗಾದ ಮಂಜುನಾಥ್ ಪ್ರಸ್ತುತ ಅವಧಿಪೂರ್ವ ಬಿಡುಗಡೆಗೆ ಸಂಬಂಧಿಸಿದಂತೆ ವಿಷಯ ನಿರ್ವಾಹಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದೇ ವಿಚಾರವಾಗಿ ಶಿಕ್ಷಾ ಬಂಧಿ ವಿಭಾಗಕ್ಕೆ ತೆರಳಿದ್ದ ವೇಳೆ ಆರೋಪಿಗಳು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಏಕಾಏಕಿ ವಾರ್ಡರ್ ಮೂಗಿಗೆ ಗುದ್ದಿ ಕೊಲೆಗೆ ಯತ್ನಿಸಿದ್ದಾರೆ.
ಐವರು ಆರೋಪಿಗಳು ಮಂಜುನಾಥ್ ಅವರನ್ನು ಕೊಠಡಿ ಸಂಖ್ಯೆ 04ಕ್ಕೆ ಎಳೆದೊಯ್ದು ಮೊದಲು ಮನಸೋ ಇಚ್ಛೆ ಹಲ್ಲೆ ಮಾಡಿದ್ದು, ಬಳಿಕ ಕುತ್ತಿಗೆಯನ್ನು ಬಲವಾಗಿ ಹಿಸುಕಿ ಉಸಿರುಗಟ್ಟಿಸಿ ಕೊಲೆಗೆ ಯತ್ನಿಸಿದ್ದಾರೆ. ಅಷ್ಟರೊಳಗೆ ಕರ್ತವ್ಯನಿರತ ಇನ್ನುಳಿದ ಅಧಿಕಾರಿ ಮತ್ತು ಸಿಬ್ಬಂದಿ ಮಂಜುನಾಥ್ ಅವರನ್ನು ರಕ್ಷಿಸಿದ್ದಾರೆ.
ಮುಖ್ಯ ಅಧೀಕ್ಷಕರ ಮೌಖಿಕ ಆದೇಶದ ಮೇರೆಗೆ, ತಿಂಗಳ ಹಿಂದೆ ಕೆಲ ಜೈಲು ಬಂಧಿಗಳನ್ನು ಭದ್ರತಾ ವಿಭಾಗದಿಂದ ಅನೆಕ್ಸ್-1 ಕಾರಾಗೃಹಕ್ಕೆ ವರ್ಗಾಯಿಸಲಾಗಿತ್ತು. ಈ ವೇಳೆ ಆರೋಪಿಗಳಿಗೆ ಹೆಚ್ಚುವರಿ ವಸ್ತುಗಳನ್ನು ತೆಗೆದುಕೊಂಡು ಹೋಗಲು ಮಂಜುನಾಥ್ ಅವಕಾಶ ನೀಡಿರಲಿಲ್ಲ. ಬಂಧಿಗಳ ವಸ್ತುಗಳನ್ನು ತಪಾಸಣೆ ಮಾಡಿದ್ದಕ್ಕೆ ಮಂಜುನಾಥ್ ಮತ್ತು ಹಲ್ಲೆ ಮಾಡಿದ ಆರೋಪಿಗಳ ನಡುವೆ ವಾಗ್ವಾದ ನಡೆದಿತ್ತು.
ಜೊತೆಗೆ ಜೈಲಿನ ಅಕ್ರಮ ಚಟುವಟಿಕೆಗಳ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಮಂಜುನಾಥ್ ಮಾಹಿತಿ ನೀಡುತ್ತಿದ್ದ ಕಾರಣ, ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಈ ಹಲ್ಲೆ ನಡೆದಿರುವುದಾಗಿ ತಿಳಿದುಬಂದಿದೆ. ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.



