HomeKarnataka Newsಉತ್ತರ ಕರ್ನಾಟಕದಲ್ಲಿ ಡಿಫೆನ್ಸ್ ಕಾರಿಡಾರ್‍ಗೆ ಯತ್ನ: ಸಚಿವ ಎಂ.ಬಿ. ಪಾಟೀಲ್

ಉತ್ತರ ಕರ್ನಾಟಕದಲ್ಲಿ ಡಿಫೆನ್ಸ್ ಕಾರಿಡಾರ್‍ಗೆ ಯತ್ನ: ಸಚಿವ ಎಂ.ಬಿ. ಪಾಟೀಲ್

For Dai;y Updates Join Our whatsapp Group

Spread the love

ಬೆಳಗಾವಿ: ಬೆಳಗಾವಿ, ವಿಜಯಪುರ, ಧಾರವಾಡ ಒಳಗೊಂಡಂತೆ ಉತ್ತರ ಕರ್ನಾಟಕದಲ್ಲಿ ಡಿಫೆನ್ಸ್ ಕಾರಿಡಾರ್ ನಿರ್ಮಾಣಕ್ಕೆ ಸರ್ಕಾರ ಪ್ರಯತ್ನ ನಡೆಸಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತ ಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ಅವರು ಹೇಳಿದರು.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಶುಕ್ರವಾರ ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ದೇಶದ ಏರೋಸ್ಪೇಸ್ ಹಾಗೂ ಡಿಫೆನ್ಸ್ ಕ್ಷೇತ್ರಕ್ಕೆ ನಮ್ಮ ರಾಜ್ಯ ಶೇ. 65 ರಷ್ಟು ಕೊಡುಗೆ ನೀಡುತ್ತಿದೆ. ನಮ್ಮ ರಾಜ್ಯವನ್ನು ಎಕೋ ಸ್ಪೇಸ್ ನಲ್ಲಿಯೂ ಮುಂಚೂಣಿ ರಾಜ್ಯವನ್ನಾಗಿ ಪರಿಗಣಿಸಲಾಗಿದೆ. ಬೆಳಗಾವಿ,

ವಿಜಯಪುರ, ಧಾರವಾಡ ಒಳಗೊಂಡ ಪ್ರದೇಶದಲ್ಲಿ ಬಹುಮುಖ್ಯವಾದ ಡಿಫೆನ್ಸ್ ಕಾರಿಡಾರ್ ನಿರ್ಮಾಣಕ್ಕಾಗಿ ಮುಖ್ಯಮಂತ್ರಿಗಳು ಹಾಗೂ ನಾವು ನಿಯೋಗದೊಂದಿಗೆ ತೆರಳಿ ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಡಿಫೆನ್ಸ್ ಕಾರಿಡಾರ್ ನಿರ್ಮಾಣಕ್ಕಾಗಿ ಬೇಡಿಕೆ ಸಲ್ಲಿಸಲಾಗಿದ್ದು, ಅವರೂ ಕೂಡ ಈ ಕುರಿತು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ನಿಟ್ಟಿನಲ್ಲಿ ಸರ್ವ ಪಕ್ಷ ಶಾಸಕರುಗಳು ಬೆಂಬಲವಾಗಿ ನಿಂತು, ಈ ಯೋಜನೆ ಸಾಕಾರಗೊಳಿಸಬೇಕಿದೆ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನಲ್ಲಿ ಸ್ಥಾಪಿಸಲು ಉದ್ದೇಶಿಸಿದ್ದ ಏರೋಸ್ಪೇಸ್ ಪಾರ್ಕ್ ನಿರ್ಮಾಣ ಸಂಬಂಧಿಸಿದಂತೆ, 13 ಗ್ರಾಮಗಳಿಂದ 1,777 ಎಕರೆ ಭೂಮಿಯನ್ನು ಭೂಸ್ವಾಧೀನ ಮಾಡಿಕೊಳ್ಳುವ ಪ್ರಕ್ರಿಯೆಯಿಂದ ಕೈಬಿಡಲು, ಕಳೆದ ಡಿ. 06 ರಂದು ಅಧಿಸೂಚನೆ ಹೊರಡಿಸಿದ್ದು, ಈ ಸಂಪೂರ್ಣ ಪ್ರದೇಶವನ್ನು ಹಸಿರು ವಲಯವನ್ನಾಗಿ ಮುಂದುವರೆಸುವ ಸಲುವಾಗಿ ವಿಶೇಷ ಕೃಷಿ ವಲಯ ಎಂದು ಘೋಷಿಸಲಾಗಿದೆ.

ಬೆಳಗಾವಿ ಜಿಲ್ಲೆಯಲ್ಲಿ ಈಗಾಗಲೆ ಮೆ: ಏಕಸ್ ಎಸ್.ಇ.ಝೆಡ್ ಪ್ರೈ.ಲಿ. ಅವರು ಏರೋಸ್ಪೇಸ್ ಕಾಂಪೋನೆಂಟ್‍ಗಳ ಎಸ್.ಇ.ಝೆಡ್ ಸ್ಥಾಪಿಸಿದ್ದು, ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ಹೀಗಾಗಿ ಬೆಳಗಾವಿ ಜಿಲ್ಲೆಯಲ್ಲಿ ಏರೋಸ್ಪೇಸ್ ಕಾಂಪೋನೆಂಟ್‍ಗಳ ತಯಾರಿಕೆಯಲ್ಲಿ ಎಕೋ ಸಿಸ್ಟಂ ಅಭಿವೃದ್ಧಿಯಾಗಿದ್ದು, ಜಿಲ್ಲೆಯಲ್ಲಿ ಈ ವಲಯದಲ್ಲಿ ಬಂಡವಾಳ ಆಕರ್ಷಿಸಲು ವಿಪುಲ ಅವಕಾಶಗಳಿವೆ.

ಬೆಂಗಳೂರು-ಮುಂಬೈ ಇಂಡಸ್ಟ್ರಿಯಲ್ ಕಾರಿಡಾರ್ ಯೋಜನೆಯಡಿ ಧಾರವಾಡ ಜಿಲ್ಲೆಯಲ್ಲಿ ಅಂದಾಜು 3 ಸಾವಿರ ಎಕರೆ ಪ್ರದೇಶದಲ್ಲಿ ಕೈಗಾರಿಕಾ ಪ್ರದೇಶ ಅಭಿವೃದ್ಧಿಪಡಿಸುತ್ತಿದ್ದು, ಈ ಪ್ರದೇಶದಲ್ಲಿ ಏರೋಸ್ಪೇಸ್ ಕಾಂಪೋನೆಂಟ್‍ಗಳ ತಯಾರಿಕಾ ಘಟಕಗಳಿಗೆ ಅಗತ್ಯ ಭೂಮಿ ಮತ್ತು ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕ್ರಮ ವಹಿಸಲಾಗಿದೆ.

ಇದರ ಜೊತೆಗೆ ಇದೇ ರೀತಿ ಉತ್ತರ ಕರ್ನಾಟಕದಲ್ಲಿ ಏರೋಸ್ಪೇಸ್ ಕಾಂಪೋನೆಂಟ್ ತಯಾರಿಕಾ ಘಟಕಗಳನ್ನು ಸ್ಥಾಪಿಸಲು ಮುಂದೆ ಬರುವವರಿಗೆ ಅಗತ್ಯ ಬೆಂಬಲ ಹಾಗೂ ಆಕರ್ಷಕ ರಿಯಾಯಿತಿ ಮತ್ತು ಪ್ರೋತ್ಸಾಹ ಒದಗಿಸಲು ನಾವು ಸಿದ್ಧರಿದ್ದೇವೆ. ಹೊಸ ಕೈಗಾರಿಕಾ ನೀತಿಯಡಿ ನಂಜುಂಡಪ್ಪ ವರದಿಯಲ್ಲಿ ಅತಿ ಹಿಂದುಳಿದ ತಾಲ್ಲೂಕುಗಳು ಎಂದು ಘೋಷಿಸಲಾಗಿರುವ ಪ್ರದೇಶಗಳಲ್ಲಿ ಕೈಗಾರಿಕೆ ಸ್ಥಾಪಿಸ ಬಯಸುವವರಿಗೆ ಪ್ರೋತ್ಸಾಹ ಜೊತೆಗೆ ಹೆಚ್ಚುವರಿಯಾಗಿ ಶೇ. 3 ರಿಂದ 5 ರಷ್ಟು ವಿಶೇಷ ನೆರವು ನೀಡಲಾಗುತ್ತಿದೆ ಎಂದು ಸಚಿವ ಎಂ.ಬಿ. ಪಾಟೀಲ್ ಹೇಳಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!