ವಿಜಯಸಾಕ್ಷಿ ಸುದ್ದಿ, ಗದಗ : ಗದಗ-ಬೆಟಗೇರಿ ನಗರಸಭೆ ವ್ಯಾಪ್ತಿಯಲ್ಲಿ ಕಡಿಮೆ ಮತದಾನವಾಗಿರುವ ಬೆಟಗೇರಿ ಬಳಿಯ ಮಂಜುನಾಥ ನಗರಕ್ಕೆ ಜಿ.ಪಂ ಉಪ ಕಾರ್ಯದರ್ಶಿ ಹಾಗೂ ಸ್ವೀಪ್ ಸಮಿತಿ ಜಿಲ್ಲಾ ನೋಡಲ್ ಅಧಿಕಾರಿ ಸಿ.ಬಿ. ದೇವರಮನಿ ಗುರುವಾರ ಭೇಟಿ ನೀಡಿ ಮತದಾನ ಮಹತ್ವ ಕುರಿತು ಜಾಗೃತಿ ಮೂಡಿಸಿದರು.
ಮಂಜುನಾಥ ನಗರದ ಮನೆ ಮನೆಗೆ ಭೇಟಿ ನೀಡಿ ಲೋಕಸಭಾ ಚುನಾವಣೆ ಸಂಬಂಧ ಮೇ 7ರಂದು ಮತದಾನ ನಡೆಯಲಿದ್ದು, ತಪ್ಪದೇ ಮತ ಚಲಾಯಿಸುವಂತೆ ಮತದಾರರಲ್ಲಿ ಕೋರಿದರು. ಯಾವುದೇ ಕಾರಣಕ್ಕೂ ಮತದಾನದಿಂದ ಅರ್ಹರು ವಂಚಿತರಾಗಬಾರದು. ಕಡ್ಡಾಯವಾಗಿ ಮತದಾನ ಮಾಡಿ, ಮತದಾನ ಹೆಚ್ಚಳಕ್ಕೆ ಸಹಕರಿಸಬೇಕು ಎಂದು ಸಿ.ಬಿ. ದೇವರಮನಿ ಮನವಿ ಮಾಡಿದರು.
ಮನೆ ಮನೆಗೆ ಸ್ಟಿಕರ್ ಅಂಟಿಸುವ ಮೂಲಕ ಮೇ 7ರಂದು ಮತ ಚಲಾಯಿಸುವಂತೆ ಹಿರಿಯ ನಾಗರಿಕರಲ್ಲಿ ಕೋರಿದರಲ್ಲದೆ, ಪ್ರತಿ ಬಡಾವಣೆಗೂ ಬ್ಯಾನರ್ ಅಳವಡಿಸುವ ಮೂಲಕ ಹೆಚ್ಚಿನ ಜಾಗೃತಿ ಮೂಡಿಸಲಾಗುವುದು. ಆ ನಿಟ್ಟಿನಲ್ಲಿ ಜಿಲ್ಲಾ ಸ್ವೀಪ್ ಸಮಿತಿ, ನಗರಸಭೆ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗಳ ಮೂಲಕ ಹೆಚ್ಚಿನ ಅರಿವು ಮೂಡಿಸಲು ಕ್ರಮವಹಿಸಲಾಗುವುದು ಎಂದು ತಿಳಿಸಿದರು.
ಇದೇ ಏಪ್ರಿಲ್ 28ರಂದು ನಡೆಯುವ ‘ನಮ್ಮ ನಡೆ-ಮತಗಟ್ಟೆ ಕಡೆಗೆ’ ಸಂಬಂಧ ಜಾಗೃತಿ ಅಭಯಾನ ಹಮ್ಮಿಕೊಳ್ಳುವ ನಿಟ್ಟಿನಲ್ಲಿ ನಗರದ ಬಸವೇಶ್ವರ ವೃತ್ತಕ್ಕೆ ತೆರಳಿ ವೀಕ್ಷಿಸಲಾಯಿತು. ಜಾಥಾ ಮಾರ್ಗ ವೀರನಾರಾಯಣ ದೇವಸ್ಥಾನದ ಬಳಿಯ ಹೆಣ್ಣು ಮಕ್ಕಳ ಶಾಲೆಯಲ್ಲಿ ಮುಖ್ಯಾಪಾಧ್ಯಾಯರ ಜೊತೆಗೆ ಕಾರ್ಯಕ್ರಮ ಆಯೋಜಿಸುವ ಬಗ್ಗೆ ಚರ್ಚಿಸಲಾಯಿತು.