ಮೈಸೂರು: ಆಹಾರ ಅರಸಿ ಗ್ರಾಮಕ್ಕೆ ಬಂದಿದ್ದ ಮರಿಯಾನೆಯೊಂದನ್ನು ಅರಣ್ಯ ಇಲಾಖೆ ಸಿಬ್ಬಂದಿ ಸತತ 6 ಗಂಟೆಗಳ ಕಾರ್ಯಾಚರಣೆ ನಡೆಸಿ ಸುರಕ್ಷಿತವಾಗಿ ಕಾಡಿಗೆ ಮರಳಿಸಿದ ಘಟನೆ ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ದಡದಹಳ್ಳಿ ಗ್ರಾಮದಲ್ಲಿ ನಡೆದಿದೆ.
ದಡದಹಳ್ಳಿ ಗ್ರಾಮದ ರೈತ ಮಹಿಳೆ ಸಣ್ಣಮ್ಮ ಅವರಿಗೆ ಸೇರಿದ ಮುಸುಕಿನ ಜೋಳದ ಜಮೀನಿಗೆ ಸುಮಾರು 2 ವರ್ಷದ ಗಂಡಾನೆ ಮರಿ ನುಗ್ಗಿತ್ತು. ಕಳೆದ ನಾಲ್ಕು ದಿನಗಳಿಂದ ಅದೇ ಜಮೀನಿನಲ್ಲಿ ಬೀಡುಬಿಟ್ಟಿದ್ದ ಆನೆ ಮರಿ ಜೋಳದ ಬೆಳೆಯನ್ನು ತಿಂದು, ತುಳಿದು ಹಾನಿಗೊಳಿಸಿತ್ತು. ಇದರಿಂದ ರೈತ ಮಹಿಳೆಗೆ ಅಪಾರ ಪ್ರಮಾಣದ ಬೆಳೆ ನಷ್ಟ ಉಂಟಾಗಿದೆ.
ಆನೆ ಮರಿ ಹೊಲದಲ್ಲೇ ಇರುವುದರಿಂದ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿತ್ತು. ಮಾಹಿತಿ ಪಡೆದ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ಆರಂಭಿಸಿದರು. ಆನೆ ಮರಿಯನ್ನು ಸುರಕ್ಷಿತವಾಗಿ ಕಾಡಿಗೆ ಕಳುಹಿಸಲು ಮೂರು ಸಾಕಾನೆಗಳನ್ನು ಬಳಸಲಾಯಿತು.
ಕಾರ್ಯಾಚರಣೆ ವೇಳೆ ಆನೆ ಮರಿ ಸಿಬ್ಬಂದಿಯ ಕೈಗೆ ಸಿಗದೆ ಬೆದರಿಕೊಂಡು ಹೊಲದಲ್ಲಿ ಓಡಾಡತೊಡಗಿತು. ಹೀಗಾಗಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಹೆಚ್ಚಿನ ಎಚ್ಚರಿಕೆಯಿಂದ ಕಾರ್ಯಾಚರಣೆ ನಡೆಸಿದರು.
ಸುಮಾರು 6 ಗಂಟೆಗಳ ಸತತ ಕಾರ್ಯಾಚರಣೆಯ ಬಳಿಕ ಮರಿಯಾನೆಗೆ ಯಾವುದೇ ತೊಂದರೆಯಾಗದಂತೆ ಸುರಕ್ಷಿತವಾಗಿ ಪಕ್ಕದ ಅರಣ್ಯ ಪ್ರದೇಶದತ್ತ ಕಳುಹಿಸುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಆನೆ ಮರಿ ಕಾಡಿಗೆ ಮರಳಿದ ಬಳಿಕ ದಡದಹಳ್ಳಿ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.



