ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಮುಂಬರುವ ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಪಿಓಪಿ ಗಣಪತಿ ವಿಗ್ರಹ ಹಾಗೂ ಡಿಜೆ ಬಳಕೆಯನ್ನು ನಿಷೇಧಿಸಲಾಗಿದ್ದು, ಸಾರ್ವಜನಿಕರು ಪರಿಸರಸ್ನೇಹಿ ಗಣಪತಿ ಪ್ರತಿಷ್ಠಾಪಿಸಿ ಹಬ್ಬವನ್ನು ಆಚರಿಸಬೇಕು. ನಿಯಮ ಉಲ್ಲಂಘಿಸಿದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಹಸೀಲ್ದಾರ್ ಕೆ. ರಾಘವೇಂದ್ರ ರಾವ್ ಎಚ್ಚರಿಸಿದರು.
ಮಂಗಳವಾರ ತಹಸೀಲ್ದಾರ್ ಕಚೇರಿಯಲ್ಲಿ ನಡೆದ ತಾಲೂಕು ಮಟ್ಟದ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಾರ್ವಜನಿಕವಾಗಿ ಗಣಪತಿ ಪ್ರತಿಷ್ಠಾಪಿಸುವ ಮಂಡಳಿಗಳು ಸ್ಥಳೀಯ ಸಂಸ್ಥೆಯಿಂದ ನಿರಾಪೇಕ್ಷಣಾ ಪತ್ರ (ಎನ್ಒಸಿ) ಪಡೆದು, ಪೊಲೀಸ್, ಹೆಸ್ಕಾಂ ಹಾಗೂ ಅಗ್ನಿಶಾಮಕ ಇಲಾಖೆಯಿಂದ ಅಗತ್ಯ ಪರವಾನಗಿ ಪಡೆಯುವುದು ಕಡ್ಡಾಯ. ಏಕಗವಾಕ್ಷಿ ವ್ಯವಸ್ಥೆಯಡಿ ಪರಿಶೀಲನೆ ನಡೆಸಿ ಪರವಾನಗಿ ನೀಡಲಾಗುವುದು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಎಲ್ಲ ಷರತ್ತುಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು.
ಅನುಮತಿ ಪಡೆದ ಪಟಾಕಿ ವ್ಯಾಪಾರಿಗಳು ಮಾತ್ರ ಪಟ್ಟಣದ ಹೊರವಲಯದಲ್ಲಿ ನಿಗದಿಪಡಿಸಿದ ಸ್ಥಳದಲ್ಲಿ ಪಟಾಕಿ ಮಾರಾಟ ಮಾಡಬೇಕು. ಅನಧಿಕೃತವಾಗಿ ಮಾರಾಟ ಮಾಡಿದರೆ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.
ಪಿಎಸ್ಐ ಈರಪ್ಪ ರಿತ್ತಿ ಮಾತನಾಡಿ, ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ವಿಗ್ರಹ ಪ್ರತಿಷ್ಠಾಪಿಸುವ ಸಂಘಟಕರು ಏಕಗವಾಕ್ಷಿ ವ್ಯವಸ್ಥೆಯಡಿ ಅರ್ಜಿ ಸಲ್ಲಿಸಿ ಅನುಮತಿ ಪಡೆಯಬೇಕು. ಜಿಲ್ಲಾಧಿಕಾರಿಗಳ ಆದೇಶದಂತೆ ಡಿಜೆ ಹಾಗೂ ಹೆಚ್ಚಿನ ಡೆಸಿಬೆಲ್ ಶಬ್ದ ಉಂಟುಮಾಡುವ ಸಾಧನಗಳ ಬಳಕೆಯನ್ನು ನಿಷೇಧಿಸಲಾಗಿದ್ದು, ಎಲ್ಲರೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಸಹಕರಿಸಬೇಕು. ನಿಯಮ ಉಲ್ಲಂಘಿಸಿದರೆ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಸಿದರು.
ಸಭೆಯಲ್ಲಿ ಕಂದಾಯ ಇಲಾಖೆ ಸಿಬ್ಬಂದಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.



