ಚಿತ್ರದುರ್ಗ: RSS ಮೇಲೆ ನಿಷೇಧ ಹೇರುವುದು ಅಸಾಧ್ಯವಾದ ಮಾತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ಸಿನ ಶಾಸಕರು, ಹಿರಿಯ ಸಚಿವರು ಆರೆಸ್ಸೆಸ್ ಕುರಿತು ಮನ ಬಂದಂತೆ ಹೇಳಿಕೆ ನೀಡುತ್ತಿದ್ದಾರೆ.
ರಾಷ್ಟ್ರೀಯ ಸ್ವಯಂಸೇವಕ ಸಂಘವು 100 ವರ್ಷಗಳನ್ನು ಪೂರೈಸಿದ ಈ ಶುಭ ಘಳಿಗೆಯಲ್ಲಿ ಪ್ರಧಾನಿ ನರೇಂದ್ರ ಮೋದಿಜೀ ಅವರು ಆಗಸ್ಟ್ 15ರಂದು ಕೆಂಪುಕೋಟೆ ಮೇಲೆ ಭಾಷಣ ಮಾಡುವಾಗ ಆರೆಸ್ಸೆಸ್ ಅನ್ನು ಪ್ರಶಂಸೆ ಮಾಡಿದ್ದರು ಎಂದು ಗಮನ ಸೆಳೆದರು.
ನಿಸ್ವಾರ್ಥವಾಗಿ ದೇಶವನ್ನು ಕಟ್ಟುವ ಮತ್ತು ಯುವಜನರಲ್ಲಿ ರಾಷ್ಟ್ರಭಕ್ತಿಯನ್ನು ಮೂಡಿಸುವ ಪ್ರಾಮಾಣಿಕ ಕೆಲಸವನ್ನು ಆರೆಸ್ಸೆಸ್ ಮಾಡುತ್ತ ಬಂದಿದೆ. ಕೇವಲ ಕರ್ನಾಟಕ, ಭಾರತವಷ್ಟೇ ಅಲ್ಲ; ಜಗತ್ತಿನ 40ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಆರೆಸ್ಸೆಸ್ ಚಟುವಟಿಕೆ ನಡೆಯುತ್ತಿದೆ ಎಂದು ವಿವರಿಸಿದರು.
ಆರೆಸ್ಸೆಸ್ ಅನ್ನು ನಿಷೇಧಿಸುವುದು ಯಾರಿಂದಲೂ ಸಾಧ್ಯವಿಲ್ಲ; ರಾಜ್ಯ ಮತ್ತು ದೇಶದಲ್ಲಿ ಬಿಜೆಪಿ ಹೆಚ್ಚಿನ ಅಸ್ತಿತ್ವ ಇಲ್ಲದ ಸಂದರ್ಭದಲ್ಲೂ ಆರೆಸ್ಸೆಸ್ ಅನ್ನು ನಿಷೇಧಿಸಿದ್ದ ಕಾಂಗ್ರೆಸ್ ಪಕ್ಷವು ಬಳಿಕ ನಿಷೇಧವನ್ನು ಹಿಂಪಡೆಯಬೇಕಾಯಿತು.
ಈಗ ಬಿಜೆಪಿಯು ನರೇಂದ್ರ ಮೋದಿಜೀ ಅವರ ದಿಟ್ಟ ನಾಯಕತ್ವವನ್ನು ಹೊಂದಿದೆ. ದೇಶದ ಅನೇಕ ರಾಜ್ಯಗಳಲ್ಲಿ ಬಿಜೆಪಿ ಸರಕಾರವೂ ಇದೆ. ಇಂಥ ಸಂದರ್ಭದಲ್ಲಿ ಆರೆಸ್ಸೆಸ್ ನಿಷೇಧದ ಮಾತು ಮೂರ್ಖತನದ ಪರಮಾವಧಿ ಎಂದು ಟೀಕಿಸಿದರು.