ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 5ನೇ ತರಗತಿ ವಿದ್ಯಾರ್ಥಿಯೊಬ್ಬ ತನ್ನ ಸಮಯಪ್ರಜ್ಞೆ ಮತ್ತು ಧೈರ್ಯದಿಂದ ಅಕ್ಷರ ದಾಸೋಹ ಸಿಬ್ಬಂದಿಯನ್ನು ದೊಡ್ಡ ಅಪಾಯದಿಂದ ರಕ್ಷಿಸಿದ ಘಟನೆ ನಡೆದಿದೆ.
ವಿದ್ಯಾರ್ಥಿ ಮನ್ವಿತ್ನ ಈ ಸಾಹಸಕ್ಕೆ ಶಾಲೆಯ ಶಿಕ್ಷಕರು, ಸ್ಥಳೀಯರು ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಬಂಟ್ವಾಳ ತಾಲೂಕಿನ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಕ್ಷರ ದಾಸೋಹ ವಿಭಾಗದಲ್ಲಿ ಸಿಬ್ಬಂದಿಯೊಬ್ಬರು ವಿದ್ಯುತ್ ಚಾಲಿತ ತೆಂಗಿನಕಾಯಿ ತುರಿಯುವ ಯಂತ್ರದಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಆಕಸ್ಮಿಕವಾಗಿ ಅವರ ಕೈಬೆರಳು ಚಾಲನೆಯಲ್ಲಿದ್ದ ಯಂತ್ರದೊಳಗೆ ಸಿಲುಕಿಕೊಂಡಿತು.
ನೋವಿನ ತೀವ್ರತೆಯಿಂದ ಸಿಬ್ಬಂದಿ ಕಿರುಚಾಡತೊಡಗಿದ್ದು, ಕೆಲ ಕ್ಷಣ ತಡವಾದರೂ ಗಂಭೀರ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು.
ಆ ವೇಳೆ ಅಲ್ಲೇ ಇದ್ದ 5ನೇ ತರಗತಿ ವಿದ್ಯಾರ್ಥಿ ಮನ್ವಿತ್ ಪರಿಸ್ಥಿತಿಯ ಗಂಭೀರತೆ ಅರಿತು ಎದೆಗುಂದದೆ ತಕ್ಷಣ ವಿದ್ಯುತ್ ಸ್ವಿಚ್ ಆಫ್ ಮಾಡಿದ್ದಾನೆ. ಇದರಿಂದ ಯಂತ್ರದ ಕಾರ್ಯಾಚರಣೆ ಕೂಡಲೇ ನಿಂತಿದ್ದು, ಸಿಬ್ಬಂದಿಯ ಕೈಗೆ ಇನ್ನಷ್ಟು ಹಾನಿಯಾಗುವುದನ್ನು ತಡೆಯಲು ಸಾಧ್ಯವಾಗಿದೆ.
ಬಾಲಕನ ಸಮಯೋಚಿತ ನಿರ್ಧಾರದಿಂದ ದೊಡ್ಡ ಅಪಾಯ ತಪ್ಪಿದ್ದು, ಶಾಲೆಯಲ್ಲಿ ಇದ್ದ ಶಿಕ್ಷಕರು ಹಾಗೂ ಸಿಬ್ಬಂದಿ ಮನ್ವಿತ್ನ ಧೈರ್ಯವನ್ನು ಶ್ಲಾಘಿಸಿದ್ದಾರೆ.
ವಿದ್ಯಾರ್ಥಿ ಮನ್ವಿತ್ನ ಸಾಹಸಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ಸಾಮಾಜಿಕ ಜಾಲತಾಣದ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.
“ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿ ವಿದ್ಯಾರ್ಥಿ ಮನ್ವಿತ್ನ ಸಮಯಪ್ರಜ್ಞೆ ಮತ್ತು ಧೈರ್ಯ ನಿಜಕ್ಕೂ ಹೃದಯಸ್ಪರ್ಶಿ ಹಾಗೂ ಶ್ಲಾಘನೀಯ. ಅಡುಗೆ ಸಿಬ್ಬಂದಿಯನ್ನು ಅಪಾಯದಿಂದ ರಕ್ಷಿಸಿದ ಮನ್ವಿತ್ಗೆ ಹೃದಯಪೂರ್ವಕ ಅಭಿನಂದನೆಗಳು” ಎಂದು ತಿಳಿಸಿದ್ದಾರೆ.
ಅಲ್ಲದೆ, “ವಿದ್ಯುತ್ ಚಾಲಿತ ಕಾಯಿ ತುರಿಯುವ ಯಂತ್ರದಲ್ಲಿ ಸಿಬ್ಬಂದಿಯ ಕೈಬೆರಳು ಸಿಲುಕಿಕೊಂಡಾಗ ಪರಿಸ್ಥಿತಿಯ ಗಂಭೀರತೆ ಅರಿತು ತಕ್ಷಣ ವಿದ್ಯುತ್ ಸಂಪರ್ಕ ಕಡಿತಗೊಳಿಸುವ ಮೂಲಕ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತವನ್ನು ಮನ್ವಿತ್ ತಪ್ಪಿಸಿದ್ದಾನೆ. ಅವನ ಮಾನವೀಯ ಕಾಳಜಿ, ಧೈರ್ಯ ಮತ್ತು ಸಮಯಪ್ರಜ್ಞೆ ಎಲ್ಲರಿಗೂ ಮಾದರಿಯಾಗಲಿ. ಭವಿಷ್ಯದಲ್ಲಿ ಉತ್ತಮ ಪ್ರಜೆಯಾಗಿ ಬೆಳೆದು ನಾಡಿಗೆ ಕೀರ್ತಿ ತರಲಿ” ಎಂದು ಹಾರೈಸಿದ್ದಾರೆ.



