ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ವಿವೇಕಾನಂದ ಆಸ್ಪತ್ರೆಗೆ ಭೇಟಿ ನೀಡಿದ ನಂತರ, ಪ್ರಕರಣ ನಡೆದ ಇನಾಂವೀರಾಪುರ ಗ್ರಾಮಕ್ಕೂ ಭೇಟಿ ನೀಡಿ, ಅಧಿಕಾರಿಗಳಿಂದ ಮತ್ತು ಸಾರ್ವಜನಿಕರಿಂದ ಘಟನೆಯ ಕುರಿತು ಮಾಹಿತಿ ಪಡೆದುಕೊಂಡರು. ದೌರ್ಜನ್ಯಕ್ಕೆ ಒಳಗಾದ ಕುಟುಂಬದ ಮನೆಗೆ ಮತ್ತು ಕೃತ್ಯ ನಡೆದ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ, ಮಾಹಿತಿ ತಿಳಿದರು.
ನಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು, ಇನಾಂವೀರಾಪುರ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಮಾನತೆಗಾಗಿ ಹೋರಾಟ ನಡೆಸಿದ ಮಹಾನ್ ಸಮಾಜ ಸುಧಾರಕ ಬಸವಣ್ಣನವರ ತತ್ವಗಳನ್ನು ಪಾಲಿಸಿಕೊಂಡು ಬಂದಿರುವ ಮನೆತನ ದೊಡ್ಡಮನಿ ಅವರದಾಗಿದೆ. ಈ ಮನೆತನದಲ್ಲಿ ಬಸವಣ್ಣನವರ ಜೊತೆಗೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಗಳೂ ಇದ್ದು, ಬಸವಣ್ಣನವರ ತತ್ವ-ಸಿದ್ಧಾಂತಗಳ ಜೊತೆಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆದರ್ಶಗಳನ್ನು ಅಳವಡಿಸಿಕೊಂಡು ಬದುಕುತ್ತಿರುವುದು ಶ್ಲಾಘನೀಯವಾಗಿದೆ ಎಂದು ಹೇಳಿದರು.
ಇಂತಹ ಆದರ್ಶಗಳನ್ನು ಪಾಲಿಸುವ ಮನೆತನಕ್ಕೆ ಈ ರೀತಿಯ ಘಟನೆ ಸಂಭವಿಸಿರುವುದು ಅತ್ಯಂತ ವಿಷಾದಕರ ಸಂಗತಿ. ಬಸವಣ್ಣನವರು ಹಾಕಿಕೊಟ್ಟ ತತ್ವಸಿದ್ಧಾಂತಗಳನ್ನು ಮುಂಬರುವ ದಿನಗಳಲ್ಲಿ ಜನರು ಇನ್ನಷ್ಟು ಅರಿತುಕೊಂಡು ಆಚರಣೆಗೆ ತರಬೇಕೆಂಬುದು ನನ್ನ ಮನವಿಯಾಗಿದೆ ಎಂದು ಹೇಳಿದರು.
ಯಾರೂ ಶಾಶ್ವತವಲ್ಲ. ದಯವೇ ಧರ್ಮದ ಮೂಲವಯ್ಯ ಎಂಬ ಬಸವಣ್ಣನವರ ವಚನವನ್ನು ಸ್ಮರಿಸಿ, ಧರ್ಮ ಮತ್ತು ದಯೆ ಇಲ್ಲದೆ, ಮಾನವನಾಗಿ ಹುಟ್ಟಿರುವುದಕ್ಕೆ ಅರ್ಥವೇ ಇರುವುದಿಲ್ಲ ಎಂದು ಅವರು ಹೇಳಿದರು.
ಮುಂಬರುವ ದಿನಗಳಲ್ಲಿ ಮಾನವ ಜಾತಿಯೇ ಶ್ರೇಷ್ಠ ಎಂಬ ಭಾವನೆಯೊಂದಿಗೆ, ದಯೆ ಮತ್ತು ಧರ್ಮವನ್ನು ಜೀವನದಲ್ಲಿ ಅಳವಡಿಸಿಕೊಂಡು, ಪರಸ್ಪರ ಪ್ರೀತಿ ಹಾಗೂ ಸೌಹಾರ್ದತೆಯಿಂದ ಬದುಕಿದಾಗ ಮಾತ್ರ ಬಸವಣ್ಣನವರ ಆತ್ಮಕ್ಕೆ ಶಾಂತಿ ಸಿಗಲಿದೆ ಎಂದು ಹೇಳಿದರು.
ಜಿಲ್ಲಾಡಳಿತದಿಂದ ಗ್ರಾಮದಲ್ಲಿ ಶಾಂತಿ, ಸೌಹಾರ್ದ ಸಭೆ ಜರುಗಿಸಿ, ಗ್ರಾಮಸ್ಥರು ಪರಸ್ಪರ ಪ್ರೀತಿ, ವಿಶ್ವಾಸದಿಂದ ಬದುಕುವಂತೆ ಮನವರಿಕೆ ಮಾಡಲಾಗುವುದು ಮತ್ತು ತಪ್ಪಿತಸ್ಥರಿಗೆ ಶಿಕ್ಷೆ ಆಗುವಂತೆ, ನೊಂದವರಿಗೆ ನ್ಯಾಯ ಸಿಗುವಂತೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಸಚಿವ ಸಂತೋಷ ಲಾಡ್ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕರಾದ ಎನ್.ಎಚ್. ಕೋನರಡ್ಡಿ, ಜಿಲ್ಲಾ ಪಂಚಾಯತ್ ಸಿಇಓ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ, ಡಿಸಿಪಿ ಮಾಣಿಂಗ್ ನಂದಗಾವಿ, ಉಪ ವಿಭಾಗಾಧಿಕಾರಿ ಸಾಲಂ ಹುಸೇನ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಶುಭ ಪಿ, ತಹಸೀಲ್ದಾರ ಜೆ.ಬಿ. ಮಜ್ಜಗಿ, ತಾ.ಪಂ ಇಓ ರಾಮಚಂದ್ರ ಹೊಸಮನಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ದಲಿತ ಸಂಘಟನೆಗಳ ಪ್ರಮುಖರು ಇದ್ದರು.
ಇನ್ನು ಮುಂದೆ ಗ್ರಾಮಸಭೆಗಳನ್ನು ಆಯೋಜಿಸಿ, ಸರ್ಕಾರ, ಜಿಲ್ಲಾಡಳಿತ ಹಾಗೂ ಶಾಸಕರುಗಳು ಪಕ್ಷಾತೀತವಾಗಿ ಒಗ್ಗಟ್ಟಿನಿಂದ ಕೆಲಸ ಮಾಡಿ, ಸಮಾಜದಲ್ಲಿ ಮತ್ತೆ ಸೌಹಾರ್ದತೆ ಮತ್ತು ಏಕತೆಯನ್ನು ಪುನಃ ಸ್ಥಾಪಿಸಲು ಎಲ್ಲರನ್ನು ಒಗ್ಗೂಡಿಸುವ ಪ್ರಯತ್ನ ಮಾಡಲಾಗುವುದು ಎಂದು ಸಚಿವ ಸಂತೋಷ್ ಲಾಡ್ ಭರವಸೆ ನೀಡಿದರು.



