ವಿಜಯಸಾಕ್ಷಿ ಸುದ್ದಿ, ಗದಗ: ಪಶ್ಚಿಮ ಶಿಕ್ಷಕರ ಮತಕ್ಷೇತ್ರದಿಂದ ಸತತ ಎಂಟು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿ ವಿಶ್ವ ದಾಖಲೆ ನಿರ್ಮಿಸಿರುವ ಬಸವರಾಜ ಹೊರಟ್ಟಿ ಅವರಿಗೆ ಡಿ. 13ರಂದು ಸಂಜೆ 4 ಗಂಟೆಗೆ ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ಗೌರವ ಸನ್ಮಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕನಕದಾಸ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ರವಿ ದಂಡಿನ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸವರಾಜ ಹೊರಟ್ಟಿಯವರು ನಿರಂತರವಾಗಿ ಶಿಕ್ಷಕರ ಧ್ವನಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಶಾಲಾ ಶಿಕ್ಷಣ ಸಂಸ್ಥಾಪಕರಿಗೆ ಮಾರ್ಗದರ್ಶನ ನೀಡುವ ಮೂಲಕ ಅನೇಕ ಶಾಲಾ-ಕಾಲೇಜುಗಳ ಅಭಿವೃದ್ಧಿಗೆ ಕಾರಣರಾಗಿದ್ದಾರೆ. ಹೊರಟ್ಟಿ ಅವರ ಗೌರವ ನಮನ ಕಾರ್ಯಕ್ರಮವನ್ನು ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರು ದಿವ್ಯ ಸಾನ್ನಿಧ್ಯ ವಹಿಸುವರು.
ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹಾಗೂ ಸಭಾಧ್ಯಕ್ಷ ಯು.ಟಿ. ಖಾದರ್ ಅವರು ಬಸವರಾಜ ಹೊರಟ್ಟಿಯವರನ್ನು ಸನ್ಮಾನಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ವಹಿಸಿಕೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಜಗದೀಶ ಶೆಟ್ಟರ್, ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜ್ಯದ ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಎಂದು ರವಿ ದಂಡಿನ ವಿವರಿಸಿದರಲ್ಲದೆ, ಗದಗ ಜಿಲ್ಲೆಯಿಂದ ಶಿಕ್ಷಕರು ಹಾಗೂ ಅವರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮಕ್ಕೆ ಆಗಮಿಸಿ ಯಶಸ್ವಿಗೊಳಿಸಬೇಕು ಎಂದು ವಿನಂತಿಸಿದರು.
ಮಾಧ್ಯಮಿಕ ಶಾಲಾ ನೌಕರರ ಸಂಘದ ಅಧ್ಯಕ್ಷ ಎಂ.ಕೆ. ಲಮಾಣಿ ಮಾತನಾಡಿ, ಬಸವರಾಜ ಹೊರಟ್ಟಿ ಅವರು ಶಿಕ್ಷಕರ ಪಾಲಿಗೆ ಭರವಸೆಯಾಗಿದ್ದಾರೆ. ಅವರ ನಿಷ್ಠೆ, ನೈತಿಕತೆ ಮತ್ತು ನಾಯಕತ್ವದ 45 ವರ್ಷದ ಪಯಣದ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗಿಯಾಗೋಣ ಎಂದು ಕರೆ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಉಮೇಶ ಹಿರೇಮಠ, ಎ.ಎಸ್. ಪಾಟೀಲ, ಬೂದಪ್ಪ ಅಂಗಡಿ, ಬಿ.ಕೆ. ನಿಂಬನಗೌಡ್ರ, ಗಿರೀಶ ನರಗುಂದ, ಎ.ಎಸ್. ಪಾಟೀಲ ಮುಂತಾದವರು ಇದ್ದರು.



