ಕೊಪ್ಪಳ: ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ಮತ್ತು ಭ್ರಷ್ಟಾಚಾರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಪತ್ರ ಬರೆದು ಅಧಿಕಾರಿಗಳ ವರ್ಗಾವಣೆ ಹಾಗೂ ಕ್ರಮಕ್ಕೆ ಆಗ್ರಹಿಸಿದ್ದಾರೆ.
ತುಂಗಭದ್ರಾ ನದಿ, ಹಿರೇಹಳ್ಳಿ, ಬೂದಗುಂಪಾ ಹಾಗೂ ಕೆರೆಹಳ್ಳಿ ಭಾಗಗಳಲ್ಲಿ ಮರಳು ಮತ್ತು ಗ್ರಾನೈಟ್ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದು, ಇಲಾಖೆ ಅಧಿಕಾರಿಗಳೇ ಮಾಫಿಯಾಗೆ ಕೈಜೋಡಿಸಿರುವ ಆರೋಪವಿದೆ.
ಕೆಲವರು ವರ್ಷಗಳಿಂದ ಅದೇ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಭ್ರಷ್ಟಾಚಾರಕ್ಕೆ ಕಾರಣರಾಗಿದ್ದಾರೆಂದು ರಾಯರೆಡ್ಡಿ ಪತ್ರದಲ್ಲಿ ತಿಳಿಸಿದ್ದಾರೆ. ಜಿಲ್ಲೆಯ 85 ಕಿ.ಮೀ. ತುಂಗಭದ್ರಾ ನದಿ ಪ್ರದೇಶದಿಂದ ನಿತ್ಯ ನೂರಾರು ಟ್ರಿಪ್ ಮರಳು ಅಕ್ರಮವಾಗಿ ಸಾಗುತ್ತಿದ್ದು, ಸರ್ಕಾರಕ್ಕೆ ಅಪಾರ ನಷ್ಟವಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ವಿಶೇಷ ಕಾರ್ಯಪಡೆ ರಚಿಸಿ, ಅಕ್ರಮದಲ್ಲಿ ಭಾಗಿಯಾದ ಅಧಿಕಾರಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ರಾಯರೆಡ್ಡಿ ಅವರು ಸಿಎಂಗೆ ಮನವಿ ಮಾಡಿದ್ದಾರೆ.



