ವಿಜಯಸಾಕ್ಷಿ ಸುದ್ದಿ, ರೋಣ: ರಾಜ್ಯದಲ್ಲಿ ಮತ್ತೆ ಕೋವಿಡ್ ಸೋಂಕು ಆರಂಭವಾಗಿದ್ದು, ನಾಗರಿಕರು ಕೋವಿಡ್ ಬಗ್ಗೆ ಭಯ ಪಡದೆ ಎಚ್ಚರಿಕೆಯಿಂದ ಇರಬೇಕು ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.
ಅವರು ಬುಧವಾರ ಕಾಂಗ್ರೆಸ್ ಪಕ್ಷದ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡುತ್ತಿದ್ದರು.
ಈ ಹಿಂದೆ ಕೊರೋನಾ ರೋಗ ಹರಡಿದ್ದ ಸಂದರ್ಭದಲ್ಲಿ ಇಡೀ ವಿಶ್ವವೇ ಅಲ್ಲೋಲಕಲ್ಲೋಲವಾಗಿದ್ದನ್ನು ನಾವು ಮರೆಯುವಂತಿಲ್ಲ. ಅಲ್ಲದೆ ಲಾಕ್ಡೌನ್ ಸಹ ನಡೆದಿತ್ತು. ಈಗ ರಾಜ್ಯ ಸೇರಿದಂತೆ ದೇಶದ ನಾಗರಿಕರಿಗೆ ಅಲ್ಲಲ್ಲಿ ರೋಗದ ಲಕ್ಷಣಗಳು ಕಂಡುಬರುತ್ತಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇದ್ದು ಕೊವಿಡ್ನ್ನು ಇನ್ನಿಲ್ಲದಂತೆ ಮಾಡಬೇಕು ಎಂದರು.
ಈಗಾಗಲೇ ಅಧಿಕಾರಿಗಳಿಗೆ, ವೈದ್ಯರುಗಳಿಗೆ ಸೂಚನೆ ನೀಡಲಾಗಿದೆ. ಸರಕಾರಿ ಆಸ್ಪತ್ರೆಗಳಲ್ಲಿ ಔಷಧಿ ಸೇರಿ ಅಗತ್ಯ ಸಲಕರಣೆಗಳ ಬಗ್ಗೆ ಮುಂಜಾಗೃತಾ ಕ್ರಮ ತೆಗೆದುಕೊಳ್ಳಲು ತಿಳಿಸಿದ್ದು, ಶಹರ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ಸ್ವಚ್ಛತೆಯ ಬಗ್ಗೆ ಹೆಚ್ಚಿನ ಒತ್ತು ನೀಡಬೇಕು. ತಾಲೂಕು ಮಟ್ಟದ ಅಧಿಕಾರಿಗಳು ಸ್ವಚ್ಛತೆಯ ವಿಷಯದಲ್ಲಿ ಹೆಚ್ಚಿನ ಮುತುವರ್ಜಿ ತೆಗೆದುಕೊಳ್ಳಬೇಕು ಎಂದರು.
ಪುರಸಭೆ ಸದಸ್ಯರು ತಮ್ಮ ವಾರ್ಡ್ಗಳಲ್ಲಿ ಜನರಿಗೆ ತಿಳುವಳಿಕೆ ನಿಡಬೇಕು. ಈಗ ಮಳೆಗಾಲ ಆರಂಭವಾಗಿದ್ದು, ಅಲ್ಲಲ್ಲಿ ನೀರು ನಿಂತು ಗಲೀಜು ಆದರೆ ಸೊಳ್ಳೆಗಳ ಉತ್ಪತ್ತಿ ಜಾಸ್ತಿಯಾಗುತ್ತದೆ. ಇದರಿಂದ ಹಲವು ರೋಗಗಳೂ ಬರುತ್ತವೆ. ಹಿಗಾಗಿ ಜನರಲ್ಲಿ ಜಾಗೃತಿ ಮೂಡಿಸುವ ಮೂಲಕ ಅಧಿಕಾರಿಗಳಿಗೆ, ವೈದ್ಯಕೀಯ ಸಿಬ್ಬಂದಿಗಳಿಗೆ ಸಹಕರಿಸಬೇಕು ಎಂದು ಸೂಚಿಸಿದರು.
ಈ ಸಂದರ್ಭದಲ್ಲಿ ಪುರಸಭೆಯ ಸದಸ್ಯರು ಉಪಪಸ್ಥಿತರಿದ್ದರು.