ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಮಕ್ಕಳು ನಿಯಮಿತವಾಗಿ ಶಾಲೆಗೆ ಬರುವುದನ್ನು ರೂಢಿಸಬೇಕು. ಶಾಲೆ ಬಿಟ್ಟ ಮಕ್ಕಳ ಬಗ್ಗೆ ಎಲ್ಲರೂ ನಿಗಾ ವಹಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಶೇಖರಗೌಡ ರಾಮತ್ನಾಳ ಹೇಳಿದರು.
ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ಬುಧವಾರ ನಡೆದ ಮಕ್ಕಳೊಂದಿಗೆ ಸಂವಾದ ಮತ್ತು ಅಹವಾಲು ಸ್ವೀಕಾರ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
6ರಿಂದ 14 ವರ್ಷದೊಳಗಿನ ಯಾವುದೇ ಮಕ್ಕಳು ಶಿಕ್ಷಣ ವಂಚಿತರಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಎಲ್ಲರ ಮೇಲಿದೆ. ಅದರಲ್ಲೂ ತಾಲೂಕಾ ಮಟ್ಟದ ಅಧಿಕಾರಿಗಳು ಈ ಬಗ್ಗೆ ವಿಶೇಷ ಗಮನ ನೀಡಬೇಕು. ಶಾಲೆ ಬಿಟ್ಟ ಮಕ್ಕಳ ಹಾಜರಾತಿ ಹಾಕುತ್ತ ನಡೆದರೆ ವರ್ಗ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರೇ ಹೊಣೆಯಾಗುತ್ತಾರೆ. ಭಾರತ ದೇಶದಲ್ಲಿ ಬಾಲ್ಯ ವಿವಾಹಗಳಿಲ್ಲದಂತೆ ಮಾಡುವುದಕ್ಕಾಗಿ ಈ ಅರಿವು ಜಾಗೃತಿಯನ್ನು ಹಮ್ಮಿಕೊಳ್ಳಲಾಗಿದೆ. ಶಾಲೆಗಳಲ್ಲಿ ಮಕ್ಕಳು ತಮ್ಮ ಅನಿಸಿಕೆಗಳನ್ನು ಹೇಳಿಕೊಳ್ಳಲು ಕಡ್ಡಾಯವಾಗಿ ಸಲಹಾ ಪೆಟ್ಟಿಗೆಯನ್ನು ಇಡಬೇಕೆಂದರು.
ವಸತಿ ನಿಲಯಗಳಲ್ಲಿ, ಅದರಲ್ಲೂ ಬಾಲಿಕೆಯರ ವಸತಿ ನಿಲಯಗಳಲ್ಲಿ ರಕ್ಷಣಾ ನೀತಿಯನ್ನು ಕಡ್ಡಾಯವಾಗಿ ಅಳವಡಿಸಿಕೊಂಡು ಜಾರಿಗೆ ತರಬೇಕು. ಏನಾದರೂ ಅಹಿತಕರ ಘಟನೆ ನಡೆದರೆ ಅಲ್ಲಿನ ಮೇಲ್ವಿಚಾರಕರೇ ಜವಾಬ್ದಾರರಾಗುತ್ತಾರೆ ಎಂದರು.
ತಹಸೀಲ್ದಾರ ಕಿರಣಕುಮಾರ ಕುಲಕರ್ಣಿ ಮಾತನಾಡಿ, ಮಕ್ಕಳ ಆಯೋಗವು ಮಕ್ಕಳ ಹಿತದೃಷ್ಟಿಯಿಂದ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ನಿಮಗೆ ಏನೇ ತೊಂದರೆಯಾದರೂ ಅವರ ಗಮನಕ್ಕೆ ತನ್ನಿ. ಇಲ್ಲವಾದರೆ ತಾಲೂಕಾಡಳಿತದ ಗಮನಕ್ಕೂ ತರಬಹುದು ಎಂದರು.
ಕಾರ್ಯಕ್ರಮದಲ್ಲಿ ತಾಲೂಕಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಫೀಕಾ ಹಳ್ಳೂರ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಮಕ್ಕಳ ಕಲ್ಯಾಣ ಸಮಿತಿ ಸದಸ್ಯೆ ಸುಪರ್ಣಾ ಬ್ಯಾಹಟ್ಟಿ ವೇದಿಕೆಯ ಮೇಲಿದ್ದರು. ಮುಖ್ಯ ಶಿಕ್ಷಕ ಎಸ್.ಬಿ. ನಿಡಗುಂದಿ ಸ್ವಾಗತಿಸಿದರು. ದೈಹಿಕ ಶಿಕ್ಷಕ ಆರ್.ಎಸ್. ನರೇಗಲ್ಲ ಪ್ರಮಾಣ ವಚನ ಬೋಧಿಸಿದರು. ಶಿಕ್ಷಕ ಡಿ.ಎಸ್. ಬಡಿಗೇರ ನಿರೂಪಿಸಿದರೆ, ಶಿಕ್ಷಕ ಬಿ.ಟಿ. ತಾಳಿ ವಂದಿಸಿದರು.
ತಾ.ಪಂ. ಕಾರ್ಯನಿರ್ವಾಹಣಾಧಿಕಾರಿ ಚಂದ್ರಶೇಖರ ಕಂದಕೂರ ಮಾತನಾಡಿ, ಸರ್ಕಾರಿ ಪ್ರೌಢಶಾಲೆಗಳಲ್ಲಿನ ಮೂಲಭೂತ ಸೌಲಭ್ಯಗಳ ತೊಂದರೆ ನಿವಾರಿಸಲು ಬಿಇಒ ಅವರಿಂದ ಮಾಹಿತಿ ಪಡೆದು ಕ್ರಮ ಜರುಗಿಸಲಾಗುವುದು. ಮನೆಗೊಂದು ಶೌಚಾಲಯ ಇರುವಂತೆ, ಶೌಚಾಲಯ ಇರುವ ಮನೆಯ ವರನನ್ನೇ ನೀವು ಮದುವೆಯಾಗಬೇಕೆಂದು ಬಾಲಿಕೆಯರಿಗೆ ಸಲಹೆ ನೀಡಿದರಲ್ಲದೆ, ಮನೆಯಲ್ಲಿ ಪಾಲಕರು ಗಂಡು-ಹೆಣ್ಣು ಮಕ್ಕಳನ್ನು ಒಂದೇ ರೀತಿ ಬೆಳೆಸಬೇಕೆಂದರು.



