HomeGadag Newsಯುದ್ಧ ಪರಿಸ್ಥಿತಿ ನಿರ್ವಹಣೆಗೆ ಸನ್ನದ್ಧರಾಗಿ

ಯುದ್ಧ ಪರಿಸ್ಥಿತಿ ನಿರ್ವಹಣೆಗೆ ಸನ್ನದ್ಧರಾಗಿ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ದೇಶದಲ್ಲಿ ಯುದ್ಧದ ಸನ್ನಿವೇಶ ಇರುವುದರಿಂದ ಅಧಿಕಾರಿಗಳು ಯುದ್ಧ ಪರಿಸ್ಥಿತಿಯ ಸಮರ್ಪಕ ನಿರ್ವಹಣೆಗೆ ಸರ್ವ ಸನ್ನದ್ಧರಾಗಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಕರೆ ನೀಡಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ತುರ್ತು ಮುಂಜಾಗ್ರತಾ ಕ್ರಮಗಳ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅಧಿಕಾರಿ ಹಾಗೂ ಸಿಬ್ಬಂದಿಗಳು ಕೇಂದ್ರಸ್ಥಾನದಲ್ಲಿದ್ದು ಪರಿಸ್ಥಿತಿಗನುಗುಣವಾಗಿ ಜವಾಬ್ದಾರಿಯುತವಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಪ್ರಮುಖ ಸ್ಥಳಗಳು, ದೇವಾಲಯ, ಮಸೀದಿ, ಚರ್ಚ್, ಜನಸಂದಣಿ ಇರುವ ಪ್ರದೇಶಗಳಲ್ಲಿ ಒಂದು ವೇಳೆ ಅಹಿತಕರ ಘಟನೆ ನಡೆದರೆ ಪೂರ್ವ ತಯಾರಿಯಾಗಿ ಸಾರ್ವಜನಿಕರ ರಕ್ಷಣಾ ಕಾರ್ಯದ ಕಡೆ ನಿಗಾ ವಹಿಸಬೇಕು. ತಾಲೂಕು ಮಟ್ಟದಲ್ಲಿಯೂ ಸಹ ತಹಸೀಲ್ದಾರರು, ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆಯ ಸಮನ್ವಯತೆಯಲ್ಲಿ ಮುಂಜಾಗ್ರತಾ ಕ್ರಮಗಳ ಕುರಿತು ಸಭೆ ಜರುಗಿಸಬೇಕು ಎಂದು ಸೂಚಿಸಿದರು.

ಜಿಲ್ಲಾಡಳಿತದೊಂದಿಗೆ ತುರ್ತು ಪರಿಸ್ಥಿತಿಯಲ್ಲಿ ವಿವಿಧ ಇಲಾಖೆಗಳಿಗೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಹಂಚಿಕೆಯನ್ನು ಮಾಡಲಾಗಿದೆ. ಮಾಜಿ ಸೈನಿಕರು, ಎನ್‌ಸಿಸಿ, ಎನ್‌ಎಸ್‌ಎಸ್, ಪೊಲೀಸ್ ಇಲಾಖೆಯವರು ಸಾರ್ವಜನಿಕರಿಗೆ ಈ ಕುರಿತು ಜಾಗೃತಿ ಮೂಡಿಸಬೇಕು. ಅಧಿಕಾರಿಗಳು ಯಾವುದೇ ಕಾರಣಕ್ಕೂ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಬಾರದು ಎಂದು ಎಚ್ಚರಿಕೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ಮಾತನಾಡಿ, ಯುದ್ಧದ ಸನ್ನಿವೇಶದಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಮಾರ್ಗಸೂಚಿಗಳ ಪಾಲನೆ ಅವಶ್ಯವಾಗಿದೆ. ಆರೋಗ್ಯ ಇಲಾಖೆಯವರು ತುರ್ತು ಪರಿಸ್ಥಿತಿಯಲ್ಲಿ ಸಾರ್ವಜನಿಕರಿಗೆ ಚಿಕಿತ್ಸೆ ನೀಡಲು ಆಸ್ಪತ್ರೆಗಳಲ್ಲಿ ಔಷಧಿಗಳ ಸರಬರಾಜು, ವೈದ್ಯಕೀಯ ಸೇವೆ, ಆಕ್ಸಿಜನ್, ಆಂಬ್ಯುಲೆನ್ಸ್‌ ಗಳ ಸಿದ್ಧತೆ ಮಾಡಿಟ್ಟುಕೊಳ್ಳಬೇಕು. ಅಗತ್ಯಕ್ಕನುಗುಣವಾಗಿ ಸಾರ್ವಜನಿಕರ ರಕ್ಷಣೆಗಾಗಿ ಅಗ್ನಿ ಶಾಮಕ, ಕಂದಾಯ, ಯುವಜನ ಸೇವೆ, ಲೋಕೋಪಯೋಗಿ, ಅಹಾರ, ಶಿಕ್ಷಣ, ಸಾರಿಗೆ, ಹೆಸ್ಕಾಂ, ಪೊಲೀಸ್ ಇಲಾಖೆಯವರು ಕಾರ್ಯನಿರ್ವಹಣೆಗೆ ಪೂರ್ವ ತಯಾರಿ ಮಾಡಿಟ್ಟುಕೊಳ್ಳಬೇಕು ಎಂದರು.

ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್ ಮಾತನಾಡಿ, ಯುದ್ಧ ನಡೆದಾಗ ಜಿಲ್ಲಾಡಳಿತ ನೀಡುವ ಮಾರ್ಗಸೂಚಿಗಳನ್ನು ಪಾಲಿಸಬೇಕು. ದೇಶದಲ್ಲಿ ಯುದ್ಧದ ಸನ್ನಿವೇಶ ಇರುವುದರಿಂದ ತುರ್ತು ಪರಿಸ್ಥಿತಿಯಲ್ಲಿ ನಾಗರಿಕರ ರಕ್ಷಣೆಗೆ ಎಲ್ಲ ಇಲಾಖೆಗಳ ಅಧಿಕಾರಿಗಳು ನಿರ್ಲಕ್ಷ್ಯ ವಹಿಸದೇ ಕೆಲಸ ನಿರ್ವಹಿಸಬೇಕು. ಏನಾದರೂ ಸಮಸ್ಯೆ ಉಂಟಾದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿಯೊಂದಿಗೆ ನೇರ ಸಂಪರ್ಕದಲ್ಲಿರಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಬಿ. ಸಂಕದ, ವಿವಿಧ ಇಲಾಖೆಗಳು ತುರ್ತು ಪರಿಸ್ಥಿತಿಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳನ್ನು ವಿವರಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರಡಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಪೊಲೀಸ್ ಪಡೆಗಳು, ಎನ್‌ಸಿಸಿ, ಎನ್‌ಎಸ್‌ಎಸ್, ಹೋಮ್ ಗಾರ್ಡ್ಸ್, ನಾಗರಿಕ ಸೇವಾ ಇಲಾಖೆ ಅಧಿಕಾರಿಗಳು ಹಾಜರಿದ್ದರು.

“ನಿವೃತ್ತ ಸೈನಿಕರಿಗೂ ಸಹ ಪ್ರತ್ಯೇಕ ಜವಾಬ್ದಾರಿಯನ್ನು ಕೊಡಲಾಗುತ್ತದೆ. ಜಿಲ್ಲೆಯಲ್ಲಿನ ಹಾಸ್ಟೆಲ್‌ಗಳ ರಕ್ಷಣೆ ಕಡೆ ನಿಗಾ ವಹಿಸಬೇಕು. ತಾಲೂಕು ಮಟ್ಟದಲ್ಲಿಯೂ ಸಭೆ ನಡೆಸಿ ಜಾಗೃತಿ ಕಾರ್ಯಕ್ರಮಗಳನ್ನು ಕೈಗೊಳ್ಳಬೇಕು. ಮಾಕ್ ಡ್ರಿಲ್ ಕಾರ್ಯಕ್ರಮ ಕೈಗೊಳ್ಳಬೇಕು. ಎನ್.ಸಿ.ಸಿ., ಎನ್.ಎಸ್.ಎಸ್ ವಿದ್ಯಾರ್ಥಿಗಳ ಸಂಘಟನೆಯೊಂದಿಗೆ ನಾಗರಿಕರಲ್ಲಿ ಆತ್ಮವಿಶ್ವಾಸ ತುಂಬುವ ಕಾರ್ಯವಾಗಬೇಕು. ಜಿಲ್ಲೆಯಲ್ಲಿನ ಜಲ ಸ್ಥಾವರಗಳು, ಶಾಪಿಂಗ್ ಮಾಲ್, ಆಸ್ಪತ್ರೆ, ಕೈಗಾರಿಕೆ, ಧಾರ್ಮಿಕ ಕೇಂದ್ರಗಳು, ಜನಸಂದಣಿ ಇರುವ ಪ್ರಮುಖ ಸ್ಥಳಗಳಲ್ಲಿ ರಕ್ಷಣಾ ಕಾರ್ಯದ ಕುರಿತು ನಿಗಾ ವಹಿಸಬೇಕು”

– ಬಿ.ಎಸ್. ನೇಮಗೌಡ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ.

ಸಭೆಯ ಮುಖ್ಯಾಂಶಗಳು

  • ಜಿಲ್ಲೆಯ ಹಮ್ಮಗಿ ಡ್ಯಾಂ, ಡಂಬಳ ರಸ್ತೆಯಲ್ಲಿರುವ ಕೆ.ಇ.ಬಿ ಗ್ರಿಡ್ ಮತ್ತು ಜಿಮ್ಸ್ ಆಸ್ಪತ್ರೆಗೆ ವಿಶೇಷ ಬಂದೋಬಸ್ತ್ಗಾಗಿ ಪೊಲೀಸ್ ನಿಯೋಜನೆ.
  • ಪ್ರಮುಖ ಸ್ಥಳಗಳಲ್ಲಿ ಮಾಕ್ ಡ್ರಿಲ್ ಮಾಡುವ ಕುರಿತು ಯೋಜನೆ ಸಿದ್ಧಗೊಳಿಸಿ.
  • ತಾಲೂಕಾ ಮಟ್ಟದಲ್ಲಿ ಇದ್ದ ಪರಿಸ್ಥಿತಿ ನಿರ್ವಹಣೆಗೆ ಸಭೆ ಜರುಗಿಸಲು ಸೂಚನೆ.
  • ಜನಸಾಮಾನ್ಯರಲ್ಲಿ ಆತ್ಮಸ್ಥೆರ್ಯ ತುಂಬಲು ಜಾಗೃತಿ ಕಾರ್ಯಕ್ರಮ ಆಯೋಜಿಸಿ.
  • ಸುಳ್ಳು ಸುದ್ದಿಗಳ ಕುರಿತು ಜನಸಾಮಾನ್ಯರು ಪ್ರತಿಕ್ರಿಯಿಸದಿರಲು ಸೂಚನೆ.
  • ವಿವಿಧ ಇಲಾಖೆಗಳಿಗೆ ಯುದ್ಧ ಪರಿಸ್ಥಿತಿ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ.
  • ಜನಸಾಮಾನ್ಯರಿಗೆ ಪೊಲೀಸ್ ಹಾಗೂ ಸ್ಥಳೀಯ ಸಂಸ್ಥೆಗಳ ವಾಹನಗಳ ಮೂಲಕ ಸೈರನ್ ಸೂಚನೆ.
  • ಜಿಲ್ಲಾಡಳಿತದಲ್ಲಿ ಕಂಟ್ರೋಲ್ ರೂಂ ಆರಂಭಿಸಲು ಕ್ರಮ.
  • ಇಂಟರ್‌ನೆಟ್ ಸಂಪರ್ಕ ಸುಸ್ಥಿತಿಯಲ್ಲಿಟ್ಟುಕೊಳ್ಳಲು ಸೂಚನೆ.
  • ತುರ್ತು ಪರಿಸ್ಥಿತಿಯಲ್ಲಿ ಮಾಧ್ಯಮಗಳಿಗೆ ಅಧಿಕೃತ ಸುದ್ದಿ ಬಿಡುಗಡೆಗೆ ನೋಡಲ್ ಅಧಿಕಾರಿ ನೇಮಕ.

Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!