ವಿಜಯಸಾಕ್ಷಿ ಸುದ್ದಿ, ಗದಗ: ಜಮಾತೆ ಇಸ್ಲಾಮಿ ಹಿಂದ್ ಕರ್ನಾಟಕ ವತಿಯಿಂದ ಪ್ರವಾದಿ ಮುಹಮ್ಮದ್ (ಸ) ಅವರ ಜನ್ಮ ದಿನದ ಪ್ರಯುಕ್ತ ಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ ‘ಕ್ರಾಂತಿಯ ಜ್ಯೋತಿ–ಪ್ರವಾದಿ ಮುಹಮ್ಮದ್ (ಸ)’ ಎಂಬ ಶೀರ್ಷಿಕೆಯಡಿ ಸೀರತ್ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಜಮಾತೆ ಇಸ್ಲಾಮಿ ಹಿಂದ್ ಕರ್ನಾಟಕದ ಗದಗ ಜಿಲ್ಲಾ ಅಧ್ಯಕ್ಷ ಕೆ.ಐ. ಶೇಖ್ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರವಾದಿ ಮುಹಮ್ಮದ್ (ಸ) ಅವರು ಜಗತ್ತಿಗೆ ಸಾರಿದ ಸಂದೇಶವು ಸತ್ಯ, ನ್ಯಾಯ, ಕರುಣೆ, ಮಾನವ ಸಮಾನತೆ, ಮಾನವ ಘನತೆ ಹಾಗೂ ಮಾನವ ಕುಲದ ಏಕತೆಯನ್ನು ಆಧರಿಸಿತ್ತು. ಜನರ ಮನಸ್ಸುಗಳನ್ನು ಸಂಸ್ಕರಿಸಿ, ನೈತಿಕತೆ ಮತ್ತು ಚಾರಿತ್ರ್ಯವನ್ನು ಶುದ್ಧೀಕರಿಸುವ ಮೂಲಕ ವ್ಯಕ್ತಿ ಹಾಗೂ ಸಮಾಜದ ಪರಿವರ್ತನೆಗೆ ಅವರು ಕಾರಣರಾದರು ಎಂದರು.
ಪ್ರವಾದಿ ಮುಹಮ್ಮದ್ (ಸ) ಅವರ ಕ್ರಾಂತಿ ಅಪ್ಪಟ ಮಾನವೀಯ ಕ್ರಾಂತಿಯಾಗಿದ್ದು, ಆಧ್ಯಾತ್ಮಿಕ, ಸಾಮಾಜಿಕ, ಕೌಟುಂಬಿಕ, ಆರ್ಥಿಕ, ಶೈಕ್ಷಣಿಕ ಹಾಗೂ ಆಡಳಿತ ಸೇರಿದಂತೆ ಮಾನವ ಜೀವನದ ವಿವಿಧ ಕ್ಷೇತ್ರಗಳನ್ನು ಒಳಗೊಂಡಿತ್ತು. ಸುಭಿಕ್ಷೆ ಮತ್ತು ನಿರ್ಭಯತ್ವದ ಸಮಾಜ ನಿರ್ಮಾಣವೇ ಅವರ ಗುರಿಯಾಗಿತ್ತು. ಪ್ರವಾದಿ ಮುಹಮ್ಮದ್ (ಸ) ಅವರ ಸಂದೇಶಗಳನ್ನು ಕನ್ನಡಿಗರಿಗೆ ಪರಿಚಯಿಸುವುದು, ಅವರ ಕುರಿತು ಇರುವ ತಪ್ಪು ಕಲ್ಪನೆಗಳನ್ನು ದೂರ ಮಾಡುವುದು ಹಾಗೂ ಪರಸ್ಪರ ಬಾಂಧವ್ಯವನ್ನು ಬಲಪಡಿಸುವುದು ಅಭಿಯಾನದ ಪ್ರಮುಖ ಉದ್ದೇಶವಾಗಿದೆ ಎಂದರು.
ಅಭಿಯಾನದ ಅಂಗವಾಗಿ ನಗರದ ನೌಕರ ಭವನ, ಶಹಾಪುರ ಪೇಟೆ, ರಾಜೀವಗಾಂಧಿ ನಗರ ಸೇರಿದಂತೆ ವಿವಿಧೆಡೆ ಸೀರತ್ ಅಭಿಯಾನದ ಕಾರ್ಯಕ್ರಮಗಳು ನಡೆಯಲಿವೆ ಎಂದು ಹೇಳಿದರು.
ರಾಜ್ಯದ ವಿವಿಧೆಡೆ ವೈಯಕ್ತಿಕ ಭೇಟಿ, ವಿಚಾರಗೋಷ್ಠಿ, ಸಾರ್ವಜನಿಕ ಸಮಾವೇಶ, ಸಂವಾದ, ಚರ್ಚಾಗೋಷ್ಠಿ, ಸೀರತ್ ಪ್ರವಚನ, ಸೀರತ್ ಪ್ರದರ್ಶನ, ಸಮಾಜಸೇವಾ ಚಟುವಟಿಕೆ ಹಾಗೂ ಸೌಹಾರ್ದ ಸಂದೇಶ ರ್ಯಾಲಿ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದರು.
ಇದೇ ಸಂದರ್ಭದಲ್ಲಿ ಖ್ಯಾತ ಸಾಹಿತಿ ಹಾಗೂ ಗ್ರಂಥಕರ್ತ ಯೋಗೇಶ್ ಮಾಸ್ಟರ್ ಬರೆದ ‘ಮಾನವ ಮನಸ್ಸಿನ ಕೃಷಿಕ ಮನದೊಡೆಯ ಪ್ರವಾದಿ ಮುಹಮ್ಮದ್ (ಸ)’ ಹಾಗೂ ವಾರ್ತಾ ಭಾರತಿ ಪ್ರಧಾನ ಸಂಪಾದಕ ಅಬ್ದುಸ್ಸಲಾಮ್ ಪುತ್ತಿಗೆ ಬರೆದ ‘ಸಮಗ್ರ ಕ್ರಾಂತಿಯ ಜ್ಯೋತಿ ಬೆಳಗಿದ ಪೈಗಂಬರ್ ಮುಹಮ್ಮದ್ (ಸ)’ ಕೃತಿಗಳನ್ನು ಬಿಡುಗಡೆಗೊಳಿಸಲಾಯಿತು.
ಸುದ್ದಿಗೋಷ್ಠಿಯಲ್ಲಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಅಕ್ಬರ್ ಸಾಬ್ ಬಬರ್ಚಿ, ಕೆ.ಎಂ. ಬಿಲ್ಲಿವಾಲೆ, ಜುನೈದ್ ಉಮಚಗಿ, ಮಹಮ್ಮದ್ ಮುಲ್ಲಾ, ಯೂಸುಫ್ ನಮಾಜಿ, ಡಾ. ಪ್ಯಾರಾಅಲಿ, ರಿಯಾಜ್ ಶೇಖ್, ಜಿ.ಬಿ. ಖಾಜಿ, ರಾಜೀಸಾಬ್ ಕಲ್ಮನಿ ಹಾಗೂ ಶಬ್ಬೀರ ಮೌಲಾನಾ ಇದ್ದರು.



