ವಿಜಯಸಾಕ್ಷಿ ಸುದ್ದಿ, ಗದಗ: ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ವಿದ್ಯಾರ್ಜನೆ ಮಾಡಿ ಉತ್ತಮ ಅಂಕಗಳೊAದಿಗೆ ಫಲಿತಾಂಶ ಪಡೆದು ಶಾಲೆಗೆ ಮತ್ತು ಪಾಲಕರಿಗೆ ಕೀರ್ತಿ ತರಬೇಕು. ಭವಿಷ್ಯದಲ್ಲಿ ಉತ್ತಮ ನಾಗರಿಕರಾಗಿ ಸಮಾಜದಲ್ಲಿ ಉನ್ನತ ಸಾಧನೆ ಮಾಡಬೇಕು. ಬಸವಣ್ಣನವರು ಜ್ಞಾನದ ಮಹತ್ವವನ್ನು ತಮ್ಮ ವಚನಗಳಲ್ಲಿ ಒತ್ತಿ ಹೇಳಿದ್ದಾರೆ. ಅವರ ಪ್ರಕಾರ, ಜ್ಞಾನವು ಅಜ್ಞಾನವನ್ನು ನಿವಾರಿಸುತ್ತದೆ ಮತ್ತು ಸತ್ಯದ ದಾರಿಯನ್ನು ತೋರಿಸುತ್ತದೆ ಎಂದು ಜಗದ್ಗುರು ತೋಂಟದಾರ್ಯ ವಿದ್ಯಾಪೀಠದ ಕಾರ್ಯದರ್ಶಿ ಪ್ರೊ. ಎಸ್.ಎಸ್. ಪಟ್ಟಣಶೆಟ್ಟರ್ ಹೇಳಿದರು.
ಜಗದ್ಗುರು ತೋಂಟದಾರ್ಯ ಸಿಬಿಎಸ್ಇ ಶಾಲೆಯಲ್ಲಿ ನಡೆದ ಶಾಲಾ ಸಂಸತ್ತು ರಚನೆ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಜ್ಞಾನವು ಕೇವಲ ಪುಸ್ತಕಗಳಲ್ಲಿರುವುದಲ್ಲ, ಅದು ಅನುಭವ ಮತ್ತು ಆಚರಣೆಯಿಂದ ಬರುತ್ತದೆ. ಜ್ಞಾನವು ಅಜ್ಞಾನವನ್ನು ನಾಶಪಡಿಸುತ್ತದೆ ಮತ್ತು ಸತ್ಯವನ್ನು ಅರಿತುಕೊಳ್ಳಲು ಸಹಾಯ ಮಾಡುತ್ತದೆ. ಜ್ಞಾನವು ಸತ್ಯದ ದಾರಿಯನ್ನು ತೋರಿಸುತ್ತದೆ. ಆಧ್ಯಾತ್ಮಿಕ ಜ್ಞಾನವು ವ್ಯಕ್ತಿಯನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುತ್ತದೆ. ಅನುಭಾವಿಗಳ ಒಡನಾಟದಿಂದ ಜ್ಞಾನವನ್ನು ಪಡೆಯಬಹುದು ಎಂದು ಹೇಳಿದರು.
ತೋಂಟದಾರ್ಯ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ಎಮ್.ಎಮ್. ಆವಟಿ ಮಾತನಾಡಿ, ಕಲಿಕೆ ನಿರಂತರ ಪ್ರಕ್ರಿಯೆಯಾಗಿರುವುದರಿಂದ ವಿದ್ಯಾರ್ಥಿಗಳು ತಮ್ಮ ಜೀವನದುದ್ದಕ್ಕೂ ಅಧ್ಯಯನದ ಜೊತೆಯಲ್ಲಿ ಕೌಶಲ್ಯಯುತ ತರಬೇತಿ ಶಿಕ್ಷಣ ಪಡೆದುಕೊಳ್ಳಬೇಕು ಎಂದು ಹೇಳಿದರು.
ತೋಂಟದಾರ್ಯ ಸಿಬಿಎಸ್ಇ ಶಾಲೆಯ ಪ್ರಾಂಶುಪಾಲ ವಿಜಯಕುಮಾರ್ ಎಸ್.ಮಾಲಗತ್ತಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಈ ಸಂದರ್ಭದಲ್ಲಿ ಪೂಜಾ ಶಿರೂರ, ಕಲ್ಲಪ್ಪ ಅಂಗಡಿ, ಮಂಜುನಾಥ ಅಸುಂಡಿ, ವೀರೇಶ್, ರಿಯಾನ್ ಸೇರಿದಂತೆ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ಗದುಗಿನ ಎನ್.ಸಿ.ಸಿ ಕಮಾಂಡಿಂಗ್ ಆಫೀಸರ್ ಕರ್ನಲ್ ಭುವನ್ ಖಾರೆ ಮಾತನಾಡಿ, ಸೇನೆಯಲ್ಲಿ ವಿಫುಲ ಉದ್ಯೋಗಾವಕಾಶಗಳಿದ್ದು, ಅದರ ಕಡೆಗೆ ಗಮನ ಹರಿಸಬೇಕು. ಸೇನೆಯಲ್ಲಿ ಹೆಣ್ಣುಮಕ್ಕಳಿಗೆ ವಿಶೇಷ ಆದ್ಯತೆ ಕಲ್ಪಿಸಲಾಗಿದೆ. ದೇಶದ ರಾಜಕೀಯ ವ್ಯವಸ್ಥೆ, ಚುನಾವಣೆ ಪ್ರಕ್ರಿಯೆಗಳ ಕುರಿತು ತಿಳಿದುಕೊಳ್ಳಲು ಶಾಲಾ ಸಂಸತ್ತು ಚುನಾವಣೆಗಳು ವಿದ್ಯಾರ್ಥಿಗಳಿಗೆ ಸಹಕಾರಿಯಾಗಲಿದೆ. ವಿದ್ಯಾರ್ಥಿಗಳು ದೇಶಭಕ್ತಿ, ದೇಶಪ್ರೇಮ, ಅಭಿಮಾನ ಇಟ್ಟುಕೊಳ್ಳಬೇಕು ಎಂದು ಹೇಳಿದರು.



