HomeBellaryರಕ್ತಪಾತಕ್ಕೆ ತಿರುಗಿದ ಬಳ್ಳಾರಿ ಬ್ಯಾನರ್ ಗಲಾಟೆ: ಕಾಂಗ್ರೆಸ್ ಕಾರ್ಯಕರ್ತ ಸಾವು, ನಿಷೇಧಾಜ್ಞೆ ಜಾರಿ

ರಕ್ತಪಾತಕ್ಕೆ ತಿರುಗಿದ ಬಳ್ಳಾರಿ ಬ್ಯಾನರ್ ಗಲಾಟೆ: ಕಾಂಗ್ರೆಸ್ ಕಾರ್ಯಕರ್ತ ಸಾವು, ನಿಷೇಧಾಜ್ಞೆ ಜಾರಿ

For Dai;y Updates Join Our whatsapp Group

Spread the love

ಬಳ್ಳಾರಿ: ಬ್ಯಾನರ್ ಅಳವಡಿಕೆ ವಿಚಾರವಾಗಿ ಶಾಸಕ ನಾರಾ ಭರತ್ ರೆಡ್ಡಿ ಹಾಗೂ ಮಾಜಿ ಸಚಿವ ಜನಾರ್ದನ ರೆಡ್ಡಿ ಬೆಂಬಲಿಗರ ನಡುವೆ ಗುರುವಾರ ರಾತ್ರಿ ಭಾರೀ ಘರ್ಷಣೆ ಸಂಭವಿಸಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಗಲಾಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಬಳ್ಳಾರಿ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಜನವರಿ 3ರಂದು ನಡೆಯಲಿರುವ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಹಿನ್ನೆಲೆ ನಗರದಾದ್ಯಂತ ಬ್ಯಾನರ್ ಅಳವಡಿಕೆ ನಡೆಯುತ್ತಿತ್ತು. ಈ ವೇಳೆ ಜನಾರ್ದನ ರೆಡ್ಡಿ ಅವರ ಮನೆ ಎದುರಿನ ರಸ್ತೆಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಮೊದಲಿಗೆ ಮಾತಿನ ಚಕಮಕಿ ಆರಂಭವಾಗಿದೆ. ಶಾಸಕ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ ಬ್ಯಾನರ್ ಅಳವಡಿಸಿದ ಹಿನ್ನೆಲೆಯಲ್ಲಿ ಎರಡು ಬಣಗಳ ನಡುವೆ ವಾಗ್ವಾದ ನಡೆಯಿತು.

ಸ್ವಲ್ಪ ಸಮಯದಲ್ಲೇ ಗಲಾಟೆ ತೀವ್ರಗೊಂಡು, ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ನಡೆದಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದರೂ ಉದ್ವಿಗ್ನತೆ ತಗ್ಗಲಿಲ್ಲ. ಈ ವೇಳೆ ಗುಂಡಿನ ಸದ್ದು ಕೇಳಿಬಂದಿದ್ದು, ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಗುಂಡು ತಗುಲಿ ಮೃತಪಟ್ಟಿದ್ದಾರೆ. ಪೊಲೀಸರು ಸೇರಿದಂತೆ ಹಲವು ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕುರಿತು ಶಾಸಕ ನಾರಾ ಭರತ್ ರೆಡ್ಡಿ ಪ್ರತಿಕ್ರಿಯಿಸಿ, ಜನಾರ್ದನ ರೆಡ್ಡಿ ಬೆಂಬಲಿಗರ ದಾಳಿಯಿಂದ ನಮ್ಮ ಕಾರ್ಯಕರ್ತನೊಬ್ಬ ಸಾವನ್ನಪ್ಪಿದ್ದಾನೆ. ಇದು ಪೂರ್ವನಿಯೋಜಿತ ಕೃತ್ಯ. ತಕ್ಷಣವೇ ಜನಾರ್ದನ ರೆಡ್ಡಿ ಹಾಗೂ ಅವರ ಬೆಂಬಲಿಗರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.

ಇನ್ನೊಂದೆಡೆ ಮಾಜಿ ಸಚಿವ ಜನಾರ್ದನ ರೆಡ್ಡಿ ಗಂಭೀರ ಆರೋಪ ಮಾಡಿದ್ದು, ನಗರ ಶಾಸಕ ನಾರಾ ಭರತ್ ರೆಡ್ಡಿ, ಅವರ ಆಪ್ತ ಸತೀಶ್ ರೆಡ್ಡಿ ಹಾಗೂ ತಂದೆ ನಾರಾ ಸೂರ್ಯನಾರಾಯಣ ರೆಡ್ಡಿ ನನ್ನ ಹತ್ಯೆಗೆ ಸಂಚು ರೂಪಿಸಿದ್ದಾರೆ. ಬ್ಯಾನರ್ ಗಲಾಟೆ ನೆಪದಲ್ಲಿ ನಮ್ಮ ಮನೆ ಎದುರೇ ಗನ್‌ಮ್ಯಾನ್‌ಗಳಿಂದ ಫೈರಿಂಗ್ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಗಾಳಿಯಲ್ಲಿ ಹಾರಿಬಿದ್ದ ಗುಂಡನ್ನು ಮಾಧ್ಯಮಗಳಿಗೆ ತೋರಿಸಿ, ವಾಲ್ಮೀಕಿ ಪ್ರತಿಮೆ ಹೆಸರಿನಲ್ಲಿ ನಗರಕ್ಕೆ ಬೆಂಕಿ ಹಚ್ಚಲು ಹೊರಟಿದ್ದಾರೆ ಎಂದು ಕಿಡಿಕಾರಿದರು.

ಘಟನೆಯ ನಂತರ ಬಳ್ಳಾರಿ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಸಿರುಗುಪ್ಪ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ. ಜನಾರ್ದನ ರೆಡ್ಡಿ ಬಂಧನಕ್ಕೆ ಆಗ್ರಹಿಸಿ ಶಾಸಕ ನಾರಾ ಭರತ್ ರೆಡ್ಡಿ ಅವರು ಹವಂಬಾವಿಯಲ್ಲಿರುವ ಜನಾರ್ದನ ರೆಡ್ಡಿ ನಿವಾಸದ ಎದುರೇ ಧರಣಿ ನಡೆಸಿದರು.

ಇದೀಗ ಬ್ಯಾನರ್ ಅಳವಡಿಕೆ ಸಂಬಂಧ ನಡೆದ ಮೊದಲ ಘರ್ಷಣೆಗೆ ಸಂಬಂಧಿಸಿ ಬ್ರೂಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಜನಾರ್ದನ ರೆಡ್ಡಿ ಸೇರಿದಂತೆ 11 ಮಂದಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಭರತ್ ರೆಡ್ಡಿ ಆಪ್ತ ಚಾನಾಳ್ ಶೇಖರ್ ನೀಡಿದ ದೂರಿನ ಆಧಾರದಲ್ಲಿ ಜನಾರ್ದನ ರೆಡ್ಡಿಯನ್ನು ಎ1 ಆರೋಪಿ ಮಾಡಲಾಗಿದ್ದು, ಸೋಮಶೇಖರ ರೆಡ್ಡಿ ಎ2, ಮಾಜಿ ಸಚಿವ ಶ್ರೀರಾಮುಲು ಎ3 ಹಾಗೂ ಮೋತ್ಕರ್ ಶ್ರೀನಿವಾಸ್ ಸೇರಿದಂತೆ ಒಟ್ಟು 11 ಮಂದಿ ಆರೋಪಿಗಳಾಗಿದ್ದಾರೆ.

ಎಫ್‌ಐಆರ್ ಪ್ರಕಾರ, ಜನಾರ್ದನ ರೆಡ್ಡಿ ಹಾಗೂ ಅವರ ಬೆಂಬಲಿಗರು ಉದ್ದೇಶಪೂರ್ವಕವಾಗಿ ಬ್ಯಾನರ್ಗಳನ್ನು ಕಿತ್ತು ಹಾಕಿದ್ದು, ಪ್ರಶ್ನಿಸಿದ ಸತೀಶ್ ರೆಡ್ಡಿ ಹಾಗೂ ಗನ್‌ಮ್ಯಾನ್ ಬಸವರಾಜ್ ಜೊತೆ ಜಗಳ ತೆಗೆದು ಹಲ್ಲೆ ನಡೆಸಿದ್ದಾರೆ. ಈ ಘಟನೆಯಲ್ಲಿ ಪೊಲೀಸ್ ಸಿಬ್ಬಂದಿ ಶ್ರೀನಿವಾಸ ಅವರಿಗೂ ಗಾಯವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಪರಿಸ್ಥಿತಿ ನಿಯಂತ್ರಣಕ್ಕೆ ಐಜಿಪಿ ವರ್ತಿಕಾ ಕಟಿಯಾರ್ ಹಾಗೂ ಎಸ್ಪಿ ಜಾಹ್ನವಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಗರದಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದ್ದು, ವಿಜಯನಗರ, ಕೊಪ್ಪಳ ಹಾಗೂ ರಾಯಚೂರಿನಿಂದ ಹೆಚ್ಚುವರಿ ಪೊಲೀಸ್ ಪಡೆ ಕರೆಸಲಾಗಿದೆ. ಮೂರು ಎಸ್ಪಿ, 10 ಡಿವೈಎಸ್ಪಿ ಹಾಗೂ ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಬಂದೋಬಸ್ತ್‌ಗೆ ನಿಯೋಜಿಸಲಾಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!