ಬೆಂಗಳೂರು:- ವಾಟ್ಸಾಪ್ನಲ್ಲಿ ಡೆತ್ ನೋಟ್ ಪೋಸ್ಟ್ ಮಾಡಿ ಬಿಜೆಪಿ ಕಾರ್ಯಕರ್ತರೊಬ್ಬರು ನಗರದ ಪಕ್ಷದ ಕಚೇರಿಯಲ್ಲಿ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಿನ ನಾಗವಾರದಲ್ಲಿ ಜರುಗಿದೆ.
ವಿನಯ್ ಸೋಮಯ್ಯ (35) ಆತ್ಮಹತ್ಯೆ ಮಾಡಿಕೊಂಡ ಕಾರ್ಯಕರ್ತ. ಮಡಿಕೇರಿಯಲ್ಲಿ ತನ್ನ ವಿರುದ್ಧ ಎಫ್ಐಆರ್ ದಾಖಲಾಗಿದ್ದಕ್ಕೆ ಮನನೊಂದು ನಾಗವಾರದ ಕಚೇರಿಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಹಿಂದೆ ವಿನಯ್ ಸೋಮಯ್ಯ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ ಎಸ್ ಪೊನ್ನಣ್ಣ ಬಗ್ಗೆ ಅಪಹಾಸ್ಯ ಮಾಡಿ ವಾಟ್ಸಪ್ ಪೋಸ್ಟ್ ಮಾಡಿದ್ದರು.
ಈ ಪೋಸ್ಟ್ ವಿರುದ್ಧ ಕಾಂಗ್ರೆಸ್ ಮುಖಂಡ ತನ್ನೀರ ಮೈನಾ ಮಡಿಕೇರಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ವಿನಯ್ ಸೋಮಯ್ಯ ಅವರನ್ನು ಪೊಲೀಸರು ಎರಡು ತಿಂಗಳ ಹಿಂದೆ ಬಂಧಿಸಿದ್ದರು. ಬಂಧನದ ಬಳಿಕ ಬಹಳ ಮನನೊಂದಿದ್ದ ವಿನಯ್ ಇಂದು ಮುಂಜಾನೆ 4:30ರ ವೇಳೆಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸಾವಿಗೂ ಮುನ್ನ ಸಾಮಾಜಿಕ ಜಾಲತಾಣಗಳಲ್ಲಿ ಡೆತ್ ನೋಟ್ ಪೋಸ್ಟ್ ಮಾಡಿದ್ದಾರೆ. ರಾಜಕೀಯ ಪ್ರೇರಿತ ಎಫ್ಐಆರ್ನಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿದ್ದಾರೆ.