ಬೆಂಗಳೂರು:– ಸಂಸದ ಡಾ ಕೆ ಸುಧಾಕರ್ ವಿರುದ್ದ ಪ್ರಕರಣ ಒಂದರಲ್ಲಿ ದಾಖಲಾಗಿದ್ದ ಎಫ್ಐಆರ್ ರದ್ದು ಮಾಡಿ ಹೈಕೋರ್ಟ್ ತೀರ್ಪು ಕೊಟ್ಟಿದೆ. ಈ ಮೂಲಕ ಸಂಸದರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ಚುನಾವಣೆ ಸಮಯದಲ್ಲಿ ಮಾದಾವರ ಬಳಿ 4.8 ಕೋಟಿ ರೂಪಾಯಿ ನಗದು ಪತ್ತೆಯಾದ ಪ್ರಕರಣ ದೇಶಾದ್ಯಂತ ಸಂಚಲನ ಸೃಷ್ಟಿಸಿತ್ತು. ಈ ಹಣ ಸಂಸದ ಡಾ. ಸುಧಾಕರ್ ಅವರದ್ದೇ ಎಂದು ಶಂಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿಗಳ ದೂರು ಆಧರಿಸಿ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಯಿತು.
ಪ್ರಕರಣವನ್ನು ರದ್ದುಪಡಿಸಬೇಕು ಎಂದು ಡಾ. ಸುಧಾಕರ್ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎಂ.ಐ. ಅರುಣ್ ಪೀಠ ಅಂತಿಮವಾಗಿ ಎಫ್ಐಆರ್ ರದ್ದುಪಡಿಸುವ ಆದೇಶ ಹೊರಡಿಸಿದೆ. ಅರ್ಜಿಯನ್ನು ಪರಿಶೀಲಿಸಿದ ಹೈಕೋರ್ಟ್, ಪ್ರಾಥಮಿಕ ಸಾಕ್ಷ್ಯಾಧಾರಗಳ ಕೊರತೆ ಮತ್ತು ಕಾನೂನು ಪ್ರಕ್ರಿಯೆಯ ಅಸಂಗತತೆಗಳನ್ನು ಉಲ್ಲೇಖಿಸಿ ಎಫ್ಐಆರ್ನ್ನು ರದ್ದುಪಡಿಸಿದೆ. ಇದರಿಂದಾಗಿ ಸಂಸದ ಡಾ. ಸುಧಾಕರ್ಗೆ ತಾತ್ಕಾಲಿಕ ದೊಡ್ಡ ಶಾಂತಿ ಸಿಕ್ಕಂತಾಗಿದೆ.
ಏನಿದು ಕೇಸ್:
ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನದ ಹಿಂದಿನ ದಿನ ಚುನಾವಣಾ ಆಯೋಗದ ಅಧಿಕಾರಿಗಳು ಗೋವಿಂದಪ್ಪ ಅವರ ಮನೆಯಿಂದ 4.8 ಕೋಟಿ ರೂಪಾಯಿ ಹಣವನ್ನು ಜಪ್ತಿ ಮಾಡಿದ್ದರು. ಈ ಹಣ ಚಿಕ್ಕಬಳ್ಳಾಪುರ ಲೋಕಸಭೆ ಚುನಾವಣೆಯಲ್ಲಿ ಮತದಾರರಿಗೆ ಹಂಚುವ ಉದ್ದೇಶದಿಂದ ಇರಲಿಸಲಾಗಿತ್ತು ಎಂದು ಆರೋಪಿಸಲಾಗಿತ್ತು.
ಈ ವಿಚಾರವಾಗಿ ಚುನಾವಣಾ ನೀತಿ ಸಂಹಿತೆ ಜಾರಿಯ ರಾಜ್ಯ ನೋಡಲ್ ಅಧಿಕಾರಿಯಾಗಿದ್ದ ಮನೀಶ್ ಮೌದ್ಗಿಲ್ ಅವರಿಗೆ ಸುಧಾಕರ್ ಅವರು ವಾಟ್ಸಾಪ್ ಮೆಸೇಜ್ ಮಾಡಿದ್ದರು ಎನ್ನಲಾಗಿತ್ತು. ಪ್ರಕರಣದ ಕುರಿತು ಚುನಾವಣಾ ನೀತಿ ಸಂಹಿತೆ ಜಾರಿ ತಂಡದ ಅಧಿಕಾರಿ ಮಾದನಾಯಕಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಎಫ್ಐಆರ್ ದಾಖಲಿಸಿಕೊಂಡು ವಿಚಾರಣೆ ನಡೆಸಿದ್ದ ಪೊಲೀಸರು ನೆಲಮಂಗಲ ಜೆಎಂಎಫ್ಸಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು. ಈ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಸುಧಾಕರ್ ಹೈಕೋರ್ಟ್ ಮೆಟ್ಟಿಲೇರಿದ್ದರು.